Winter Session Day 9 Roundup:ಕಲಾಪದ ಪ್ರಮುಖಾಂಶಗಳು
ನವದೆಹಲಿ, ಡಿಸೆಂಬರ್ 09: ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಇಂದು ಸೇನಾ ಹೆಲಿಕಾಪ್ಟರ್ ಪತನದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಪತ್ನಿ ಮಧುಲಿಕಾ ರಾವತ್ ಹಾಗೂ ಅಗಲಿದ ಒಟ್ಟು 13 ಮಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ವಿರೋಧ ಪಕ್ಷದ ನಾಯಕರು 12 ಮಂದಿ ರಾಜ್ಯಸಭಾ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಇಂದು ಬಿಪಿನ್ ರಾವತ್ ಅವರ ನಿಧನದಿಂದಾಗಿ ಒಂದು ದಿನ ಪ್ರತಿಭಟನೆಯನ್ನು ಕೈಬಿಟ್ಟಿದ್ದರು.
ರಾಜನಾಥ್ ಸಿಂಗ್ ಹೇಳಿಕೆ: ಅತ್ಯಂತ ಭಾರವಾದ ಹೃದಯದಿಂದ ನಿನ್ನೆ ಸಂಭವಿಸಿದ ಮಿಲಿಟರಿ ಹೆಲಿಕಾಪ್ಟರ್ ದುರಂತದ ಸುದ್ದಿಯ ವಿವರವನ್ನು ಸದನದ ಮುಂದಿಡುತ್ತಿದ್ದೇನೆ.

ಜನರಲ್ ಬಿಪಿನ್ ರಾವತ್ ಅವರು ತಮಿಳು ನಾಡಿನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಸಿಬ್ಬಂದಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಭಾರತೀಯ ವಾಯುಪಡೆಯ ಮಿ 17 ವಿ 5 ಹೆಲಿಕಾಪ್ಟರ್ ಸೂಲೂರ್ ವಾಯುನೆಲೆಯಿಂದ ನಿನ್ನೆ ಬೆಳಗ್ಗೆ 11.48ಕ್ಕೆ ಟೇಕ್ ಆಫ್ ಆಯಿತು.
ವೆಲ್ಲಿಂಗ್ಟನ್ ನಲ್ಲಿ ಮಧ್ಯಾಹ್ನ 12.15ಕ್ಕೆ ಲ್ಯಾಂಡ್ ಆಗಬೇಕಾಗಿತ್ತು. ಸೂಲೂರ್ ವಾಯುನೆಲೆಯ ವಾಯುಸಂಚಾರ ನಿಯಂತ್ರಣ ಕೇಂದ್ರ ನಿನ್ನೆ ಮಧ್ಯಾಹ್ನ 12.8ಕ್ಕೆ ಸಂಪರ್ಕ ಕಳೆದುಕೊಂಡಿತು.
ಅದೇ ಹೊತ್ತಿಗೆ ತಮಿಳು ನಾಡಿನ ನೀಲಗಿರಿಯ ಕೂನೂರ್ ಹತ್ತಿರ ಅರಣ್ಯ ಪ್ರದೇಶದಲ್ಲಿ ಸ್ಥಳೀಯರು ಬೆಂಕಿ ಹೊಗೆ ಬರುತ್ತಿರುವುದು ಕಂಡಿದ್ದಾರೆ. ಮಿಲಿಟರಿ ಹೆಲಿಕಾಪ್ಟರ್ ಬೆಂಕಿಯ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿತ್ತು. ಕಂಡ ತಕ್ಷಣವೇ ಸ್ಥಳೀಯ ರಕ್ಷಣಾ ತಂಡ ಸ್ಥಳಕ್ಕೆ ಧಾವಸಿ ಹೆಲಿಕಾಪ್ಟರ್ ನಲ್ಲಿದ್ದವರನ್ನು ರಕ್ಷಣೆ ಮಾಡಲು ಪ್ರಯತ್ನಿಸಿತು.
ಅಪಘಾತದಲ್ಲಿ ಬಹುತೇಕ ಬೆಂದು ಬದುಕುಳಿದವರನ್ನು ಕೂಡಲೇ ವೆಲ್ಲಿಂಗ್ಟನ್ ನ ಮಿಲಿಟರಿ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಹೆಲಿಕಾಪ್ಟರ್ ನಲ್ಲಿದ್ದ 14 ಮಂದಿಯಲ್ಲಿ 13 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಅವರ ರಕ್ಷಣಾ ಸಲಹೆಗಾರ ಬ್ರಿಗ್ ಲಖ್ಬಿಂದರ್ ಸಿಂಗ್ ಲಿಡ್ಡರ್, ಸಿಬ್ಬಂದಿ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಮತ್ತು ವಾಯುಪಡೆಯ ಹೆಲಿಕಾಪ್ಟರ್ ಸಿಬ್ಬಂದಿ ಸೇರಿದಂತೆ ಒಂಬತ್ತು ಇತರ ಸಶಸ್ತ್ರ ಪಡೆಗಳ ಸಿಬ್ಬಂದಿಯಿದ್ದರು.
ಹೆಲಿಕಾಪ್ಟರ್ ದುರಂತದಲ್ಲಿ ಮಡಿದವರ ಹೆಸರುಗಳು: ವಿಂಗ್ ಕಮಾಂಡರ್ ಪೃಥ್ವಿ ಸಿಂಗ್ ಚೌಹಾಣ್, ಸ್ಕ್ವಾಡ್ರನ್ ಲೀಡರ್ ಕುಲದೀಪ್ ಸಿಂಗ್, ಜೂನಿಯರ್ ವಾರಂಟ್ ಅಧಿಕಾರಿ ರಾಣಾ ಪ್ರತಾಪ್ ದಾಸ್, ಕಿರಿಯ ವಾರಂಟ್ ಅಧಿಕಾರಿ ಅರಕ್ಕಲ್ ಪ್ರದೀಪ್, ಹವಾಲ್ದಾರ್ ಸತ್ಪಾಲ್ ರೈ, ನಾಯಕ್ ಗುರುಸೇವಕ್ ಸಿಂಗ್, ನಾಯಕ್ ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯಿ ತೇಜಾ. ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ವೆಲ್ಲಿಂಗ್ಟನ್ನಲ್ಲಿರುವ ಮಿಲಿಟರಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದು, ಅವರ ಜೀವ ಉಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ರಾಜನಾಥ್ ಸಿಂಗ್ ವಿವರ ನೀಡಿದ್ದಾರೆ.
ಗಗನಯಾನಕ್ಕಿಂತ ಮೊದಲು ಮುಂದಿನ ಎರಡು ವರ್ಷಗಳಲ್ಲಿ ಮಾನವರಹಿತ ಮಿಷನ್ ಅನ್ನು ಪ್ರಾರಂಭಿಸಲಾಗುತ್ತದೆ ಎಂದು ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಕೋವಿಡ್ 19 ಸಾಂಕ್ರಾಮಿಕ ರೋಗದಿಂದಾಗಿ ಬಾಹ್ಯಾಕಾಶ ಯೋಜನೆಗಳು ವಿಳಂಬವಾಗಿವೆ. ಮುಂದಿನ ವರ್ಷದಲ್ಲಿ ಗಗನಯಾನಕ್ಕೂ ಮುನ್ನ ಮಾನವರಹಿತ ಯೋಜನೆಗಳಿಗೆ ಚಾಲನೆ ನೀಡಲಾಗುವುದು.
ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ತಿದ್ದುಪಡಿ ಮಸೂದೆಯನ್ನು ಲೋಕಸಭೆ ಅನುಮೋದಿಸಿದೆ. ಹಿಂದಿದ್ದ ಕಾಯ್ದೆಗಳ ಪ್ರಕಾರ ಎಲ್ಲಾ ನಿವೃತ್ತ ನ್ಯಾಯಾಧೀಶರು ಹಾಗೂ ಅವರ ಕುಟುಂಬ ಸದಸ್ಯರು ಪಿಂಚಣಿ ಅಥೌಆ ಕುಟುಂಬ ಪಿಂಚಣಿಗೆ ಅರ್ಹರಾಗಿದ್ದರು. ಅವರ ವೇತನ ಪ್ರಮಾಣಕ್ಕೆ ಅನುಗುಣವಾಗಿ ನಿರ್ದಿಷ್ಟ ವಯಸ್ಸನ್ನು ತಲುಪಿದಾಗ ಹೆಚ್ಚುವರಿ ಪ್ರಮಾಣದ ಪಿಂಚಣಿ ಅಥವಾ ಕುಟುಂಬ ಪಿಂಚಣಿಗೆ ಅರ್ಹರಾಗುತ್ತಾರೆ.
ಶುಕ್ರ ಮಿಷನ್: ಗಗನಯಾನದ ಜತೆ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. 2023ರ ವೇಳೆಗೆ ಶುಕ್ರ ಮಿಷನ್ ಶುರುವಾಗಲಿದೆ. 2022-23ರಲ್ಲಿ ಆದಿತ್ಯ ಸೋಲಾರ್ ಮಿಷನ್ ಎನ್ನುವ ಸೌರ ಯೋಜನೆ ಸಿದ್ಧಪಡಿಸುತ್ತಿದ್ದೇವೆ ಎಂದು ಮಾಹತಿ ನೀಡಿದರು.












Click it and Unblock the Notifications