ಪೆಗಾಸಸ್ ಬೇಹುಗಾರಿಕೆ ಬಗ್ಗೆ ಮುಂದಿನ ವಾರ ಸುಪ್ರೀಂಕೋರ್ಟ್ ಸಮಗ್ರ ಆದೇಶ!?
ನವದೆಹಲಿ, ಆಗಸ್ಟ್ 25: ಇಸ್ರೇಲ್ ಮೂಲದ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಬೇಹುಗಾರಿಕೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಾರ ಸುಪ್ರೀಂಕೋರ್ಟ್ ಸಮಗ್ರ ಆದೇಶ ನೀಡುವ ಸಾಧ್ಯತೆಯಿದೆ.
ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮದನ್ ಲೋಕೊರ್ ನೇತೃತ್ವದಲ್ಲಿ ದ್ವಿಸದಸ್ಯ ವಿಚಾರಣಾ ಆಯೋಗವನ್ನು ರಚಿಸುವುದಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕತೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನ್ಯಾಯಾಂಗ ತನಿಖೆ ನಡೆಸುವ ಬಗ್ಗೆ ತೆಗೆದುಕೊಂಡ ನಿರ್ಧಾರವನ್ನು ಗ್ಲೋಬಲ್ ವಿಲೇಜ್ ಫೌಂಡೇಶನ್ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಪ್ರಶ್ನೆ ಮಾಡಿತ್ತು. ಪೆಗಾಸಸ್ ಹಗರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಇತರೆ ಅರ್ಜಿಗಳ ಜೊತೆಗೆ ಈ ಅರ್ಜಿ ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿದೆ. ಸುಪ್ರೀಂಕೋರ್ಟ್ನಲ್ಲಿ ಈಗಾಗಲೇ ಬಾಕಿ ಉಳಿದಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಪೆಗಾಸಸ್ ಹಗರಣ, ಸುಪ್ರೀಂಕೋರ್ಟ್ ಆದೇಶ ಹಾಗೂ ಕೇಂದ್ರ ಸರ್ಕಾರದ ಸ್ಪಷ್ಟನೆ ಕುರಿತು ಒಂದು ವರದಿಗಾಗಿ ಮುಂದೆ ಓದಿ.
ಪೆಗಾಸಸ್ ಹಗರಣದ ಬಗ್ಗೆ ತನಿಖೆ ನಡೆಸದಂತೆ ಮನವಿ
ಸುಪ್ರೀಂಕೋರ್ಟ್ ಮುಂದಿನ ವಾರ ಪೆಗಾಸಸ್ ಹಗರಣದ ಕುರಿತು ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ನಡೆಸುವವರೆಗೂ ತನಿಖಾ ಆಯೋಗವು ಯಾವುದೇ ರೀತಿ ತನಿಖೆ ಮುಂದುವರಿಸದಂತೆ ಸೂಚಿಸಲು ಟ್ರಸ್ಟ್ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ಮನವಿ ಮಾಡಿಕೊಂಡಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಹಾಜರಾದ ಹಿರಿಯ ವಕೀಲ ಡಾ.ಅಭಿಷೇಕ್ ಮನು ಸಿಂಘ್ವಿ ಆರಂಭದಲ್ಲಿ ಇದನ್ನು ವಿರೋಧಿಸಿದರು. ಆದರೆ ಮುಂದಿನ ವಾರ ಸಮಗ್ರ ಆದೇಶ ನೀಡಲಾಗುವುದು. ಈ ಮಧ್ಯೆ ನ್ಯಾ. ಲೋಕೂರ್ ಆಯೋಗ ತನಿಖೆ ಮುಂದುವರೆಸಿದರೆ ಇಂದೇ ಆದೇಶ ನೀಡಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿತು. ಆಗ 'ತನಿಖೆ ನಡೆಯುವುದಿಲ್ಲ' ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದ ಡಾ. ಸಿಂಘ್ವಿ ಈ ಸಂಬಂಧ ಅಧಿಕಾರಿಗಳಿಗೆ ತಿಳಿಸುವುದಾಗಿ ಹೇಳಿದರು. ಬಳಿಕ ನೋಟಿಸ್ ನೀಡಿದ ನ್ಯಾಯಾಲಯ ಪ್ರಕರಣವನ್ನು ಉಳಿದ ಅರ್ಜಿಗಳೊಂದಿಗೆ ಸೇರಿಸಿತು. ಮುಂದಿನ ವಾರ ಹಗರಣದ ವಿಚಾರಣೆ ನಡೆಯಲಿದೆ.
ಪೆಗಾಸಸ್ ಅರ್ಜಿದಾರರಿಗೆ ಈ ಮೊದಲು ಸೂಚನೆ ನೀಡಿದ್ದ ಕೋರ್ಟ್
ಇಸ್ರೇಲಿನ ಪೆಗಾಸಸ್ ತಂತ್ರಾಂಶದ ಬಳಸಿ ಬೇಹುಗಾರಿಕೆ ನಡೆಸಿರುವ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿ ಬಹಿರಂಗವಾಗಿ ಚರ್ಚಿಸದಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಕಳೆದ ಆಗಸ್ಟ್ 10ರಂದು ಹಿರಿಯ ಪತ್ರಕರ್ತ ಎನ್ ರಾಮ್, ಶಶಿಕುಮಾರ್, ಸಿಪಿಎಂ ಸಂಸದ ಜಾನ್ ಬ್ರಿತ್ತಾಸ್ ಹಾಗೂ ವಕೀಲ ಎಂಎಲ್ ಶರ್ಮಾ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್ ವಿ ರಮಣ್ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠವು ಈ ಹಿಂದೆ ವಿಚಾರಣೆ ನಡೆಸಿತು. ನ್ಯಾಯಾಲಯಕ್ಕೆ ನೀಡಿರುವ ಅರ್ಜಿಯ ಅಂಶವನ್ನು ಒಳಗೊಂಡ ಒಂದು ಪ್ರತಿಯನ್ನು ಕೇಂದ್ರ ಸರ್ಕಾರಕ್ಕೆ ನೀಡುವಂತೆ ಅರ್ಜಿದಾರರಿಗೆ ಕೋರ್ಟ್ ಸೂಚಿಸಿತ್ತು.
"ವಿರೋಧ ಪಕ್ಷ ನಾಯಕರು, ಹಿರಿಯ ಪತ್ರಕರ್ತರು ಸೇರಿದಂತೆ ಯಾರೇ ಆಗಿರಲಿ, ಒಂದು ಬಾರಿ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋದ ಮೇಲೆ ನೀವು ಹೇಳುವುದೇನೇ ಇದ್ದರೂ ಅದನ್ನು ಕೋರ್ಟಿನಲ್ಲಿ ಪ್ರಸ್ತಾಪಿಸಬೇಕು. ಸಾಮಾಜಿಕ ಜಾಲತಾಣ ಸೇರಿದಂತೆ ಬೇರೆ ಯಾವುದೇ ವೇದಿಕೆಯಲ್ಲಿ ಪೆಗಾಸಸ್ ಬಗ್ಗೆ ಅರ್ಜಿದಾರರು ಚರ್ಚಿಸುವಂತಿಲ್ಲ," ಎಂದು ಕೋರ್ಟ್ ಸೂಚನೆ ನೀಡಿದೆ. ಕೇಂದ್ರ ಸರ್ಕಾರದಿಂದ ಉತ್ತರ ನೀಡುವುದಕ್ಕೆ ಸಾಲಿಸಿಟರ ಜನರಲ್ ತುಷಾರ್ ಮೆಹ್ತಾ ಮತ್ತಷ್ಟು ಸಮಯಾವಕಾಶ ನೀಡುವಂತೆ ನ್ಯಾಯಾಲಯದ ಎದುರು ಮನವಿ ಸಲ್ಲಿಸಿದರು.
ಜಾಗತಿಕ ವರದಿಯಲ್ಲಿ ಇಸ್ರೇಲ್ ತಂತ್ರಾಂಶದ ದುರ್ಬಳಕೆ ಉಲ್ಲೇಖ
ಜಾಗತಿಕ ತನಿಖಾ ಸಂಸ್ಥೆಗಳು ಮಾಡಿರುವ ವರದಿಯ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಮಾರಾಟವಾಗಿರುವ ಇಸ್ರೇಲಿನ ಬೇಹುಗಾರಿಕೆ ತಂತ್ರಾಂಶವನ್ನು ಬಳಸಿಕೊಂಡು ವಿರೋಧ ಪಕ್ಷದ ಹಲವು ನಾಯಕರ ಮೇಲೆ ಕಣ್ಗಾವಲು ಇಡಲಾಗಿದೆ. ದೇಶದ ಪ್ರಮುಖ 142ಕ್ಕೂ ಹೆಚ್ಚು ರಾಜಕೀಯ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲಾಗಿದೆ ಎಂಬ ವರದಿಯ ಬಗ್ಗೆ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ, ದೇಶದ 300ಕ್ಕೂ ಹೆಚ್ಚು ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗುತ್ತಿದೆ. ಈ ಬೇಹಾಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಸ್ವತಃ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ 40 ಮಂದಿ ಪತ್ರಕರ್ತರ ಹೆಸರು ಕೂಡ ಸೇರಿದೆ.
ಇಸ್ರೇಲ್ ತಂತ್ರಾಂಶವನ್ನು ಬಳಸಿ ಬೇಹುಗಾರಿಕೆ
ಜಾಗತಿಕ ಸುದ್ದಿ ಸಂಸ್ಥೆಗಳಾಗಿರುವ ವಾಶಿಂಗ್ಟನ್ ಪೋಸ್ಟ್, ದಿ ಗಾರ್ಡಿಯನ್, ಲೇ ಮೊಂಡೆ ಜೊತೆ ಸಹಯೋಗ ಹೊಂದಿರುವ 'ದಿ ವೈರ್' ಪೆಗಾಸಸ್ ಬೇಹುಗಾರಿಕೆ ಕುರಿತು ವಿಸ್ತೃತ ವರದಿಯನ್ನು ಪ್ರಕಟಿಸಿತ್ತು. ಮಾಧ್ಯಮ ಪಾಲುದಾರ ಸಂಸ್ಥೆ ಆಗಿರುವ ಪ್ಯಾರಿಸ್ ಮೂಲದ 'ನಾನ್ ಪ್ರಾಫಿಟ್ ಆರ್ಗನೈಸೇಷನ್ ಫಾರ್ಬಿಡನ್ ಸ್ಟೋರೀಸ್ ಮತ್ತು ರೈಟ್ಸ್ ಗ್ರೂಪ್ ಅಮ್ನೆಸ್ಟಿ ಇಂಟರ್ ನ್ಯಾಷನಲ್' ಸಂಸ್ಥೆಗಳು ಈ ಕುರಿತು ತನಿಖೆ ನಡೆಸಿದ್ದವು ಎಂದು ವರದಿಯಲ್ಲಿ ಉಲ್ಲೇಖಿಸಿವೆ. ಇಸ್ರೇಲ್ ಕಣ್ಗಾವಲು ಕಂಪನಿ ಎನ್ಎಸ್ಒ ಗ್ರೂಪ್ನ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಜಗತ್ತಿನಾದ್ಯಂತ ಸಾವಿರಾರು ಗಣ್ಯರ ಮೊಬೈಲ್ ಸಂಖ್ಯೆಯನ್ನು ಕದಿಯಲಾಗಿದೆ ಎಂದು ತನಿಖಾ ವರದಿಯಿಂದ ಗೊತ್ತಾಗಿದೆ. ವಿಶ್ವದಲ್ಲಿ ಒಟ್ಟು 50,000ಕ್ಕೂ ಅಧಿಕ ಮೊಬೈಲ್ ಸಂಖ್ಯೆಗಳನ್ನು ಕದ್ದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.