ಶಾಹಿನ್ಬಾಗ್ ಪ್ರತಿಭಟನಾ ಸ್ಥಳದಲ್ಲಿ ಪೆಟ್ರೋಲ್ ಬಾಂಬ್ ಎಸೆತ
ನವದೆಹಲಿ, ಮಾರ್ಚ್ 22: ಶಾಹಿನ್ ಬಾಗ್ ಪ್ರತಿಭಟನಾ ಸ್ಥಳದಲ್ಲಿ ಕೆಲವು ಕಿಡಿಗೇಡಿಗಳು ಇಂದು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.
ನೂತನ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಶಾಹಿನ್ಬಾಗ್ನಲ್ಲಿ ಸುಮಾರು ಮೂರು ತಿಂಗಳುಗಳಿಂದ ಪ್ರತಿಭಟನೆ ನಡೆಯುತ್ತಿದೆ. ಇದೀಗ ಕೊರೊನಾ ವೈರಸ್ ಭೀತಿಯಿಂದಾಗಿ ನಗರದಲ್ಲಿ ಪ್ರತಿಭಟನೆಗಳಿಗೆ ಅವಕಾಶ ಸಿಗುತ್ತಿರಲಿಲ್ಲ. ಕೊರೊನಾ ವೈರಸ್ ಭೀತಿಯಿಂದಾಗಿ ಜನರು ಮನೆಯಿಂದ ಹೊರಗಡೆ ಬರುವುದನ್ನೇ ಕ್ರಮೇಣವಾಗಿ ಕಡಿಮೆ ಮಾಡಿದ್ದರು.
ಆದರೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ವೈರಸ್ ವಿರುದ್ಧ ಹೋರಾಡಲು ಜನತಾಕರ್ಫ್ಯೂ ಕರೆ ಕೊಟ್ಟ ಹಿನ್ನೆಲೆಯಲ್ಲಿ ದೆಹಲಿ ಶಾಂತವಾಗಿತ್ತು, ಆದರೆ ಇದೀಗ ಪೆಟ್ರೋಲ್ ಬಾಂಬ್ ಎಸೆದಿರುವುದು ಮತ್ತೆ ಪ್ರತಿಭಟನೆ ಆರಂಭಗೊಳ್ಳುವ ಮುನ್ಸೂಚನೆ ನೀಡಿದಂತಾಗಿದೆ.
ಆದಾಗ್ಯೂ, ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 9-30ರ ಸುಮಾರಿನಲ್ಲಿ ಈ ಘಟನೆ ನಡೆದಿದೆ.ಪ್ರತಿಭಟನಾ ಸ್ಥಳದ ಬಳಿ ಪೆಟ್ರೋಲ್ ತುಂಬಿದ ಐದಾರು ಬಾಟಲಿಗಳನ್ನು ಪೊಲೀಸರ ತಂಡ ಪತ್ತೆ ಹಚ್ಚಿದೆ.
ಕೊರೋನಾ ವೈರಸ್ ಪ್ರಕರಣಗಳು ದೇಶದಲ್ಲಿ ಹೆಚ್ಚಾಗುತ್ತಿರುವಂತೆ ಇಂದು ಬೆಳಗ್ಗೆಯಿಂದ ರಾತ್ರಿಯವರೆಗೂ ಸಾರ್ವಜನಿಕರು ಮನೆಯಿಂದ ಹೊರಬಾರದಂತೆ ಜನತಾ ಕರ್ಫ್ಯೂಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಆದರೂ ಎನ್ ಆರ್ ಸಿ ಹಾಗೂ ಸಿಎಎ ವಿರೋಧಿಸಿ ಮಹಿಳೆಯರು ಶಾಹೀನ್ ಬಾಗ್ ನಲ್ಲಿ ಪ್ರತಿಭಟನೆ ಮುಂದುವರೆಸಿದ್ದರು.
ಕೊರೋನಾವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನೆ ತೆರವಿಗೆ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ನಾಳೆ ಈ ವಿಚಾರವನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳಲಿದೆ.