ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆ ರದ್ದಾಯ್ತು; ಮುಂದೇನು ರೈತರ ಕಥೆ?
ನವದೆಹಲಿ, ನವೆಂಬರ್ 27: ಬೆಳೆ ವೈವಿಧ್ಯೀಕರಣ, ಶೂನ್ಯ-ಬಜೆಟ್ ಕೃಷಿ ಮತ್ತು ಎಂಎಸ್ಪಿ ಪಾರದರ್ಶಕತೆ ಸೇರಿದಂತೆ ರೈತರ ಕಲ್ಯಾಣದ ವಿಷಯಗಳ ಕುರಿತು ಚರ್ಚಿಸಲು ಸಮಿತಿಯನ್ನು ರಚಿಸುವ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಶನಿವಾರ ಪ್ರಕಟಿಸಿದೆ.
ವಿವಾದಿತ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ ಮುಂದಿನ ಮಾರ್ಗವನ್ನು ವಿವರಿಸುವುದಕ್ಕಾಗಿ ಸಮಿತಿಯನ್ನು ರಚಿಸಲಾಗುತ್ತದೆ. ಈ ಸಮಿತಿಯು ರೈತ ಸಂಘಟನೆಗಳ ಪ್ರತಿನಿಧಿಗಳನ್ನು ಸಹ ಒಳಗೊಂಡಿರುತ್ತದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಸಂಸತ್ ಅಧಿವೇಶನದ ವೇಳೆ ಬೃಹತ್ ಹೋರಾಟಕ್ಕೆ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್!
ಕೇಂದ್ರ ಸರ್ಕಾರದ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ 2020, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ 2020, (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020 ಅನ್ನು ಸಂಸತ್ ಚಳಿಗಾಲ ಅಧಿವೇಶನದ ಮೊದಲ ದಿನವಾದ(ನವೆಂಬರ್ 29) ಸೋಮವಾರ ರದ್ದುಗೊಳಿಸುವ ಮಸೂದೆ ಮಂಡಿಸುವುದಕ್ಕೆ ಕೇಂದ್ರ ಸರ್ಕಾರ ಈಗಾಗಲೇ ನಿರ್ಧರಿಸಿದೆ.
ಕೇಂದ್ರದ ವಿರುದ್ಧ ವರ್ಷದ ಹೋರಾಟ
ಪಂಜಾಬ್, ಹರಿಯಾಣ ಮತ್ತು ಉತ್ತರಪ್ರದೇಶದ ವಿವಿಧ ರೈತ ಸಂಘಗಳ ಆಶ್ರಯದಲ್ಲಿ ಸಾವಿರಾರು ರೈತರು ಕಳೆದ 2020ರ ನವೆಂಬರ್ 26 ರಿಂದ ದೆಹಲಿಯ ಘಾಜಿಪುರ, ಸಿಂಘು ಮತ್ತು ಟಿಕ್ರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಮೇಲೆ ಖಾಸಗೀಕರಣವನ್ನು ಹೇರುತ್ತಿರುವುದಕ್ಕೆ ಹಾಗೂ ಕಾರ್ಪೊರೇಟ್ಗಳ ಪರ ಒಲವು ಹೊಂದಿರುವ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು. ಕೃಷಿ ಕಾಯ್ದೆಗಳ ರದ್ದುಗೊಳಿಸುವುದರ ಜೊತೆಗೆ ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸುವಂತೆ ಆಗ್ರಹಿಸಿದ್ದಾರೆ.
ಕೃಷಿ ಕಾಯ್ದೆ ಸಂಸತ್ತಿನಲ್ಲಿ ರದ್ದುಗೊಳಿಸುವ ತನಕ ಪ್ರತಿಭಟನೆ
ಕಳೆದ ನವೆಂಬರ್ 19ರಂದು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದರು. ಈ ಘೋಷಣೆಯನ್ನು ರೈತರು ಸ್ವಾಗತಿಸಿದರು, ಆದರೆ ಸಂಸತ್ತಿನಲ್ಲಿ ಅಧಿಕೃತವಾಗಿ ವಿವಾದಿತ ಕಾಯ್ದೆಗಳನ್ನು ರದ್ದುಗೊಳಿಸುವವರೆಗೂ ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ಕೇಂದ್ರ ಸರ್ಕಾರಕ್ಕೆ ರೈತರು ಎಚ್ಚರಿಕೆ ನೀಡಿದ್ದರು.
ಈ ಹಿಂದೆ ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, "ಎಲ್ಲಾ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ನಮ್ಮ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಅದರಲ್ಲೂ ವಿಶೇಷವಾಗಿ ಸಣ್ಣ ರೈತರ ಕಲ್ಯಾಣಕ್ಕಾಗಿ , ದೇಶದ ಹಿತದೃಷ್ಟಿಯಿಂದ, ಹಳ್ಳಿಯ ಬಡವರ ಉಜ್ವಲ ಭವಿಷ್ಯಕ್ಕಾಗಿ, ಸಂಪೂರ್ಣ ಪ್ರಾಮಾಣಿಕತೆಯಿಂದ ಒಳ್ಳೆಯ ಉದ್ದೇಶದಿಂದ ಈ ಕಾನೂನನ್ನು ತಂದಿದ್ದೆವು. ಆದರೆ ಅಂತಹ ಪವಿತ್ರವಾದ, ಸಂಪೂರ್ಣ ಶುದ್ಧವಾದ ರೈತರ ಅನುಕೂಲಕ್ಕಾಗಿ ನಾವು ಪ್ರಯತ್ನಿಸಿದರೂ ಅದನ್ನು ಕೆಲವು ರೈತರಿಗೆ ವಿವರಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ನಾವು ಎಲ್ಲಾ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ," ಎಂದು ಹೇಳಿದ್ದರು.
ಪ್ರತಿಭಟನೆಯಿಂದ ಹಿಂದೆ ಹೋಗುವಂತೆ ರೈತರಿಗೆ ಮನವಿ
ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಲಿಗೆ ಶನಿವಾರ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮನವಿ ಮಾಡಿಕೊಂಡಿದ್ದಾರೆ. ರೈತರ ಸಂಘಟನೆಗಳು ತಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸಿ ಮನೆಗೆ ಹಿಂತಿರುಗುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ ರೈತರು ಹೊಲ-ಗದ್ದೆಗಳಲ್ಲಿ ಬೆಳೆ ನಂತರದ ಪೈರು ಸುಡುವುದು ಅಪರಾಧವಲ್ಲ ಎಂದು ಪರಿಗಣಿಸುವಂತೆ ಸಲ್ಲಿಸಿದ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಂಡಿದೆ ಎಂದು ಘೋಷಿಸಿದ್ದಾರೆ.
ಸಮಿತಿಯಿಂದ ರೈತರ ಬೇಡಿಕೆ ಈಡೇರಿಕೆ
"ಕೇಂದ್ರ ಸರ್ಕಾರ ರಚಿಸುತ್ತಿರುವ ಈ ಸಮಿತಿಯ ಸಂವಿಧಾನದೊಂದಿಗೆ ಕನಿಷ್ಛ ಬೆಂಬಲ ಬೆಲೆ(MSP) ಮೇಲಿನ ರೈತರ ಬೇಡಿಕೆಯನ್ನು ಈಡೇರಿಸುತ್ತದೆ. ಹೊಲಗದ್ದೆಯಲ್ಲಿ ಪೈರಿನ ನಂತರ ಕಸ ಸುಡುವುದನ್ನು ಅಪರಾಧ ಅಲ್ಲದಂತೆ ಪರಿಗಣಿಸಲು ರೈತ ಸಂಘಟನೆಗಳು ಒತ್ತಾಯಿಸಿದ್ದವು. ಭಾರತ ಸರ್ಕಾರ ಈ ಬೇಡಿಕೆಯನ್ನೂ ಒಪ್ಪಿಕೊಂಡಿದೆ. ಹೀಗಿರುವಾಗ ರೈತರು ಆಂದೋಲನವನ್ನು ಮುಂದುವರಿಸುವುದರಲ್ಲಿ ಅರ್ಥವಿಲ್ಲ. ರೈತರು ತಮ್ಮ ಆಂದೋಲನವನ್ನು ಕೊನೆಗೊಳಿಸಿ ಮನೆಗೆ ಹೋಗಬೇಕೆಂದು ನಾನು ಒತ್ತಾಯಿಸುತ್ತೇನೆ," ಎಂದು ತೋಮರ್ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಘೋಷಣೆಗೆ ಪ್ರತಿಕ್ರಿಯಿಸಿದ ರೈತರ ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್, "ನಾವು ರಚಿಸಲಾದ ಸಮಿತಿಯ ವಿವರಗಳನ್ನು ಓದಿಲ್ಲ. ವಿವರಗಳ ಬಗ್ಗೆ ನಮಗೆ ತಿಳಿಸಿದ ನಂತರವೇ ನಾವು ಪ್ರತಿಕ್ರಿಯಿಸುತ್ತೇವೆ ಮತ್ತು ಕ್ರಮ ಕೈಗೊಳ್ಳುತ್ತೇವೆ," ಎಂದಿದ್ದಾರೆ.
ರಾಜ್ಯ ಸರ್ಕಾರದ ವ್ಯಾಪ್ತಿಗೆ ರೈತರ ವಿರುದ್ಧದ ಪ್ರಕರಣ
ಕಳೆದ ಒಂದು ವರ್ಷದ ಪ್ರತಿಭಟನೆಯ ಸಂದರ್ಭದಲ್ಲಿ ರೈತರ ವಿರುದ್ಧ ದಾಖಲಾಗಿರುವ ಪೊಲೀಸ್ ಪ್ರಕರಣಗಳು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಬರುತ್ತವೆ. ಅವುಗಳನ್ನು ಹೇಗೆ ಮುಂದುವರಿಸಬೇಕೆಂದು ಆಯಾ ಸರ್ಕಾರಗಳು ನಿರ್ಧರಿಸುತ್ತವೆ. ರಾಜ್ಯದ ನೀತಿಯಂತೆ ರೈತರಿಗೆ ಬೆಳೆ ಪರಿಹಾರವನ್ನೂ ನಿರ್ಧರಿಸಲಾಗುವುದು," ಎಂದು ಸಚಿವ ನರೇಂದ್ರ ಸಿಂಗ್ ತೋಮರ್ ಘೋಷಿಸಿದ್ದಾರೆ.
Recommended Video