ಭಾರತೀಯರಿಗೆ 65ನೇ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಸಂದೇಶವೇನು?
ನವದೆಹಲಿ, ಮೇ.30: ನೊವೆಲ್ ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ಭಾರತದಲ್ಲಿ ಲಾಕ್ ಡೌನ್ ಅಸ್ತ್ರವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ನಾಲ್ಕನೇ ಅವಧಿಯ ಲಾಕ್ ಡೌನ್ ಅಂತ್ಯಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದೆ. ಮೇ.31ರಂದು ಭಾರತದಲ್ಲಿ ನಾಲ್ಕನೇ ಅವಧಿಯ ಲಾಕ್ ಡೌನ್ ಅಂತ್ಯವಾಗಲಿದೆ.
ಭಾನುವಾರವೇ ಭಾರತೀಯರನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮನ್ ಕೀ ಬಾತ್ ನಲ್ಲಿ ಮಾತನಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಪ್ರಸಾರವಾಗುವ 65ನೇ ಸಂಚಕಿಯ ಮನ್ ಕೀ ಬಾತ್ ನಲ್ಲಿ ಪ್ರಧಾನಿಯು ದೇಶಕ್ಕೆ ನೀಡುವ ಸಂದೇಶದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಬರೆದ ಪತ್ರದ ಸಾರಾಂಶ
ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯು ಈಗಾಗಲೇ 1,74,170ರ ಗಡಿ ದಾಟಿದೆ. ದೇಶಾದ್ಯಂತ 4,981ಕ್ಕೂ ಅಧಿಕ ಮಂದಿ ಮಹಾಮಾರಿಗೆ ಬಲಿಯಾಗಿದ್ದು, 82,676 ಸೋಂಕಿತರು ಗುಣಮುಖರಾಗಿದ್ದಾರೆ. ಬಾಕಿ ಉಳಿದ 86,502 ಮಂದಿ ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಇಂಥ ಪರಿಸ್ಥಿತಿಯಲ್ಲಿ ಪ್ರಜೆಗಳಿಗೆ ಪ್ರಧಾನಿಯ ಸಂದೇಶ ಏನಿರಬಹುದು ಎನ್ನುವುದು ಎಲ್ಲರ ಕುತೂಹಲವಾಗಿದೆ.
ಭಾನುವಾರ 11 ಗಂಟೆಗೆ ಮನ್-ಕೀ-ಬಾತ್ ಮಾತು:
ನೊವೆಲ್ ಕೊರೊನಾ ವೈರಸ್ ನಿಂದ ಸಂದಿಗ್ಧ ಪರಿಸ್ಥಿತಿಯಲ್ಲಿ ಆತಂಕದಲ್ಲೇ ದಿನ ಕಳೆಯುತ್ತಿರುವ ಪ್ರಜೆಗಳನನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ 65ನೇ ಮನ್ ಕೀ ಬಾತ್ ನಲ್ಲಿ ಮಾತನಾಡಲಿದ್ದಾರೆ. ಕೊರೊನಾ ವೈರಸ್ ಸೋಂಕಿನ ಜೊತೆಗೆ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಹೇಳಿದ್ದ ಪ್ರಧಾನಿ ಮೋದಿ ಅದಕ್ಕಾಗಿ ದೇಶದ ಆರ್ಥಿಕತೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ್ದರು.
ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಅನಗತ್ಯ ಓಡಾಟವನ್ನು ಕಡಿಮೆಗೊಳಿಸುವುದರ ಜೊತೆಗೆ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಪ್ರಜೆಗಳಿಗೆ ಪ್ರಧಾನಮಂತ್ರಿ ಮತ್ತೊಮ್ಮೆ ಸಂದೇಶ ರವಾನಿಸುವ ಸಾಧ್ಯತೆಗಳಿವೆ.