ದೆಹಲಿ: ರೈತರ ಭೇಟಿಗೆ ತೆರಳಿದ ನಾಯಕರನ್ನು ತಡೆದ ಪೊಲೀಸರು
ನವದೆಹಲಿ, ಫೆಬ್ರವರಿ.04: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಭೇಟಿಗೆ ತೆರಳಿದ ಶಿರೋಮಣಿ ಅಕಾಲಿ ದಳ ಸೇರಿದಂತೆ ಪ್ರತಿಪಕ್ಷಗಳ ನಾಯಕರನ್ನು ದೆಹಲಿ ಪೊಲೀಸರು ತಡೆದಿದ್ದಾರೆ.
ಉತ್ತರ ಪ್ರದೇಶ ಮತ್ತು ದೆಹಲಿಗೆ ಹೊಂದಿಕೊಂಡಿರುವ ಘಾಜಿಪುರ್ ಗಡಿ ಪ್ರದೇಶದಲ್ಲಿ ರೈತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಸಂಘಟನೆಗಳ ಮುಖಂಡರು ಮತ್ತು ರೈತರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರತಿಪಕ್ಷ ನಾಯಕರನ್ನೊಳಗೊಂಡ ನಿಯೋಗ ತೆರಳಿತ್ತು. ಈ ವೇಳೆ ಘಾಜಿಪುರ್ ಗಡಿಯಲ್ಲೇ ಪ್ರತಿಪಕ್ಷ ನಾಯಕರ ನಿಯೋಗವನ್ನು ತಡೆಯಲಾಗಿದೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಘಾಜಿಪುರ್, ಟಿಕ್ರಿ ಮತ್ತು ಸಿಂಘು ಗಡಿ ಪ್ರದೇಶದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ.

ಲೋಕಸಭೆಯಲ್ಲಿ ಕೃಷಿ ಕಾಯ್ದೆ ಬಗ್ಗೆ ಪ್ರಸ್ತಾಪ:
ವಿವಾದಿತ ಕೃಷಿ ಕಾಯ್ದೆಗಳ ಬಗ್ಗೆ ಲೋಕಸಭೆಯಲ್ಲಿ ನಮಗೆ ಚರ್ಚೆ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ. ರೈತರ ಪ್ರತಿಭಟನೆ ಹೇಗೆ ನಡೆಯುತ್ತಿದೆ. ದೆಹಲಿಯ ಗಡಿ ಪ್ರದೇಶಗಳಲ್ಲಿ ಏನೆಲ್ಲ ಆಗುತ್ತಿದೆ ಎನ್ನುವುದರ ಬಗ್ಗೆಯೂ ಮಾಹಿತಿಯಿಲ್ಲ. ಲೋಕಸಭೆಯಲ್ಲಿ ಕೃಷಿ ಸಂಬಂಧಿತ ಕಾಯ್ದೆಗಳ ಬಗ್ಗೆ ಚರ್ಚಿಸುವುದಕ್ಕೆ ಸಭಾಪತಿಗಳೇ ಅವಕಾಶ ನೀಡುತ್ತಿಲ್ಲ. ಈ ಹಿನ್ನೆಲೆ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಪ್ರತಿಪಕ್ಷಗಳ ನಾಯಕರು ಭೇಟಿ ನೀಡುತ್ತಿದ್ದೇವೆ ಎಂದು ಶಿರೋಮಣಿ ಅಕಾಲಿ ದಳದ ಸಂಸದೆ ಹಾಗೂ ಕೇಂದ್ರದ ಮಾಜಿ ಸಚಿವೆ ಹರ್ ಸಿಮ್ರಾನ್ ಕೌರ್ ಬಾದಲ್ ತಿಳಿಸಿದ್ದಾರೆ.












Click it and Unblock the Notifications