ದೆಹಲಿ ಮಾಲಿನ್ಯ ನಿಯಂತ್ರಿಸಲು ಪಾಕಿಸ್ತಾನದಲ್ಲಿ ಕೈಗಾರಿಕೆ ಮುಚ್ಚಿಸಬೇಕೇ: ಸುಪ್ರೀಂಕೋರ್ಟ್ ಪ್ರಶ್ನೆ
ನವದೆಹಲಿ, ಡಿಸೆಂಬರ್ 3: ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸಲು ನಾವೇನು ಪಾಕಿಸ್ತಾನದಲ್ಲಿ ಇರುವ ಕೈಗಾರಿಕೆಗಳನ್ನು ಮುಚ್ಚಿಸಬೇಕೇ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಖಡಕ್ ಪ್ರಶ್ನೆ ಹಾಕಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠವು ದೆಹಲಿ ಮತ್ತು ಎನ್ಸಿಆರ್ ವಲಯದಲ್ಲಿ ವಾಯುಮಾಲಿನ್ಯಕ್ಕೆ ಸಂಬಂಧಿಸಿದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿತು. ಈ ವೇಳೆ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಹಾಳಾಗುವುದಕ್ಕೆ ಪಾಕಿಸ್ತಾನದ ಕಲುಷಿತ ಗಾಳಿಯು ಕಾರಣ ಎಂದು ಉತ್ತರ ಪ್ರದೇಶ ಸರ್ಕಾರವು ಸರ್ವೋಚ್ಛ ನ್ಯಾಯಾಲಯಕ್ಕೆ ತಿಳಿಸಿತು.
ದೆಹಲಿಯಲ್ಲಿ ವಾಯುಮಾಲಿನ್ಯದಲ್ಲಿ ಉತ್ತರ ಪ್ರದೇಶದ ಕೈಗಾರಿಕೆಗಳ ಪಾತ್ರವಿಲ್ಲ ಎಂದು ಹೇಳಿತು. ಉತ್ತರ ಪ್ರದೇಶ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ರಂಜಿತ್ ಕುಮಾರ್, ರಾಜ್ಯದ ಕೈಗಾರಿಕೆಗಳು ಇಳಿಮುಖವಾಗಿದೆ. ಉತ್ತರ ಪ್ರದೇಶದಿಂದ ಕಲುಷಿತ ಗಾಳಿಯು ರಾಷ್ಟ್ರ ರಾಜಧಾನಿಯ ಕಡೆಗೆ ಬರುವುದಿಲ್ಲ ಎಂದು ವಾದ ಮಂಡಿಸಿದರು.
ನೆರೆಯ ಪಾಕಿಸ್ತಾನದ ಕಡೆಯಿಂದ ಬರುತ್ತಿರುವ ಕಲುಷಿತ ಗಾಳಿಯು ದೆಹಲಿಯ ಗಾಳಿಯ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತಿದೆ. ಪಾಕಿಸ್ತಾನದಲ್ಲಿ ಕೈಗಾರಿಕೆಗಳು ಮತ್ತು ಅಲ್ಲಿದ ಕಲುಷಿತ ಗಾಳಿಯಿಂದ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಹಾಳಾಗುತ್ತಿದೆ ಎಂದು ವಕೀಲ ರಂಜಿತ್ ಕುಮಾರ್ ಆರೋಪಿಸಿದರು.
ಉತ್ತರ ಪ್ರದೇಶ ಪರ ವಕೀಲ ರಂಜಿತ್ ಕುಮಾರ್ ವಾದಕ್ಕೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎನ್ ವಿ ರಮಣ ಕೆಂಡವಾದರು. ಹಾಗಾದರೆ ನಿಮ್ಮ ಪ್ರಕಾರ, ದೆಹಲಿಯಲ್ಲಿ ಗಾಳಿಯ ಗುಣಮಟ್ಟವನ್ನು ಸುಧಾರಿಸುವುದಕ್ಕೆ ನಾವು ಪಾಕಿಸ್ತಾನದಲ್ಲಿ ಕೈಗಾರಿಕೆಗಳನ್ನು ಮುಚ್ಚಿಸಬೇಕೇ ಎಂದು ಖಡಕ್ ಆಗಿ ಪ್ರಶ್ನೆ ಮಾಡಿದರು.
ಹಾಲು ಮತ್ತು ಕಬ್ಬಿನ ಕೈಗಾರಿಕೆಗಳ ಮೇಲೆ ಪರಿಣಾಮ:
ಉತ್ತರ ಪ್ರದೇಶದಲ್ಲಿ ಕೈಗಾರಿಕೆಗಳ ಮೇಲಿನ ಎಂಟು ಗಂಟೆಗಳ ನಿರ್ಬಂಧದಿಂದಾಗಿ ಕಬ್ಬು ಮತ್ತು ಹಾಲಿನ ಉದ್ಯಮಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ರಾಜ್ಯ ಸರ್ಕಾರದ ಪರ ವಕೀಲ ರಂಜಿತ್ ಕುಮಾರ್ ತಮ್ಮ ವಾದ ಮಂಡಿಸಿದರು.
ದೆಹಲಿಯಲ್ಲಿ ಆಸ್ಪತ್ರೆ ನಿರ್ಮಾಣ ಚಟುವಟಿಕೆಗೆ ಅನುಮತಿ:
ನವದೆಹಲಿಯಲ್ಲಿ ವಾಯು ಮಾಲಿನ್ಯದ ಹಿನ್ನೆಲೆ ನಿರ್ಮಾಣ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿತ್ತು. ಶುಕ್ರವಾರ ದೆಹಲಿ ಸರ್ಕಾರವು ಸಲ್ಲಿಸಿದ ಅಫಿಡವಿಟ್ ನಲ್ಲಿ ಆಸ್ಪತ್ರೆಗಳ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಮನವಿ ಸಲ್ಲಿಸಲಾಗಿತ್ತು. ರೋಗಿಗಳಿಗೆ ವೈದ್ಯಕೀಯ ಮೂಲಸೌಕರ್ಯಗಳನ್ನು ನೀಡಲು ಸರ್ಕಾರ ಕ್ರಮ ತೆಗೆದುಕೊಂಡಿದೆ. ನಗರದಲ್ಲಿ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ 19 ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ನಡೆಸಲಾಗುತ್ತಿದೆ. ಈ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗೆ ವಿನಾಯಿತಿ ನೀಡುವಂತೆ ಸುಪ್ರೀಂಕೋರ್ಟ್ ಎದುರು ದೆಹಲಿ ಸರ್ಕಾರ ಮನವಿ ಮಾಡಿಕೊಂಡಿತ್ತು. ಈ ಹಿನ್ನೆಲೆ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗೆ ಸುಪ್ರೀಂಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಮುಂದಿನ ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಲಾಗಿದೆ.
ದೆಹಲಿ-ಎನ್ಸಿಆರ್ನಲ್ಲಿ ವಾಯುಮಾಲಿನ್ಯ ನಿಯಂತ್ರಿಸಲು ಅದರ ನಿರ್ದೇಶನಗಳ ಅನುಸರಣೆಯ ಮೇಲ್ವಿಚಾರಣೆ ಮಾಡಲು ಗಾಳಿ ಗುಣಮಟ್ಟ ನಿರ್ವಹಣೆ ಆಯೋಗವು ರಚಿಸಿರುವ ಫ್ಲೈಯಿಂಗ್ ಸ್ಕ್ವಾಡ್ಗಳ ಬಗ್ಗೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ತಿಳಿಸಿತು.
ದೆಹಲಿಯಲ್ಲಿ ಗಾಳಿ ಗುಣಮಟ್ಟದಲ್ಲಿ ತೀವ್ರ ಕುಸಿತ:
ರಾಷ್ಟ್ರ ರಾಜಧಾನಿಯಲ್ಲಿ ಶುಕ್ರವಾರ ಗಾಳಿಯ ಗುಣಮಟ್ಟ ಸೂಚ್ಯಂಕ(ಎಐಕ್ಯೂ) 365ಕ್ಕೆ ಇಳಿದಿದ್ದು, ಅತ್ಯಂತ ಅಪಾಯಕಾರಿ ಹಂತಕ್ಕೆ ತಲುಪಿದೆ. ಸಾಮಾನ್ಯವಾಗಿ ವಾಯು ಮಾಲಿನ್ಯ ಪ್ರಮಾಣ ಎಷ್ಟಿರಬೇಕು ಎಂಬುದಕ್ಕೆ ಒಂದು ಮಾನದಂಡವಿದೆ. ಅದರ ಪ್ರಕಾರ, 00-50 ಉತ್ತಮ, 51-100 ತೃಪ್ತಿದಾಯಕ, 101-200 ಮಧ್ಯಮ, 201-300 ಕಳಪೆ, 301-400 ಅತಿಕಳಪೆ, 401-500 ಅಪಾಯಕಾರಿ, ಹಾಗೂ 500 ನಂತರ ಅತಿ ಅಪಾಯಕಾರಿ ಎಂದು ಹೇಳಲಾಗುತ್ತದೆ.