20 ಎಎಪಿ ಶಾಸಕರ ಅನರ್ಹತೆಗೆ ರಾಷ್ಟ್ರಪತಿಗಳಿಂದ ಅಂಕಿತ
ನವದೆಹಲಿ, ಜನವರಿ 21: ಆಮ್ ಆದ್ಮಿ ಪಕ್ಷಕ್ಕೆ ಭಾರಿ ಆಘಾತಕಾರಿ ಸುದ್ದಿ ಸಿಕ್ಕಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಡಳಿತಾರೂಢ ಆಮ್ ಆದ್ಮಿ ಪಕ್ಷದ 20 ಶಾಸಕರ ಅನರ್ಹತೆ ಶಿಫಾರಸ್ಸಿಗೆ ರಾಷ್ಟ್ರಪತಿಗಳ ಅಂಕಿತ ಬಿದ್ದಿದೆ.
ಲಾಭದಾಯಕ ಹುದ್ದೆ ಹೊಂದಿದ ಆರೋಪದ ಹಿನ್ನಲೆಯಲ್ಲಿ ದೆಹಲಿ ಆಡಳಿತ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸಲಾಗಿಸಲು ಚುನಾವಣಾ ಆಯೋಗ ಶಿಫಾರಸ್ಸು ಮಾಡಿತ್ತು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾನುವಾರದಂದು ಶಿಫಾರಸ್ಸಿಗೆ ಅಂಕಿತ ಹಾಕಿದ್ದಾರೆ.
20 ಶಾಸಕರು ಅನರ್ಹಗೊಂಡರೂ ಎಎಪಿ ಸರ್ಕಾರಕ್ಕೆ ಬಹುಮತದ ಕೊರತೆ ಆಗುವುದಿಲ್ಲ. 70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಆಪ್ 66 ಶಾಸಕರನ್ನು ಹೊಂದಿದೆ.
20 ಎಎಪಿ ಶಾಸಕರ ಅನರ್ಹತೆ: ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಕಾರ
ನೈತಿಕ ಹೊಣೆ ಹೊತ್ತು ಸಿ.ಎಂ. ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿವೆ. ಈ ನಡುವೆ ಶಾಸಕರ ಅರ್ನಹತೆಯನ್ನು ಬೇಕಂತಲೇ ತಡ ಮಾಡಲಾಗಿದೆ. ಬಿಜೆಪಿ ಹಾಗೂ ಎಎಪಿ ನಡುವೆ ಒಳ ಒಪ್ಪಂದವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಸರ್ಕಾರಕ್ಕೆ ಬಹುಮತದ ಕೊರತೆ ಇಲ್ಲದಿದ್ದರೂ, ನೈತಿಕ ಹೊಣೆ ಹೊತ್ತು ಸಿ.ಎಂ. ಕೇಜ್ರಿವಾಲ್ ರಾಜೀನಾಮೆ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ.