ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನವದೆಹಲಿ, ಏಪ್ರಿಲ್.02: ಭಾರತದಲ್ಲಿ ಕೊರೊನಾ ವೈರಸ್ ಹರಡುತ್ತಿರುವ ವೇಗದ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.
ದೇಶದಲ್ಲಿ ಕಂಡು ಬಂದಿರುವ ಕೊರೊನಾ ವೈರಸ್ ಸೋಂಕಿತರು ಮತ್ತು ದಿಗ್ಬಂಧನದಲ್ಲಿ ಇರಿಸಿದ ವ್ಯಕ್ತಿಗಳು ಮತ್ತ ಅವರ ಜೊತೆಗೆ ಸಂಪರ್ಕ ಹೊಂದಿರುವವರ ಪತ್ತೆ ಮಾಡುವುದಕ್ಕೆ ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ತಿಳಿದು ಬಂದಿದೆ.
ದೆಹಲಿಯ ನಿಜಾಮುದ್ದೀನ್ ಮರ್ಕಾಜ್ ನಲ್ಲಿ ನಡೆದ ತಬ್ಲಿಘಿ ಜಮಾತ್ ಧರ್ಮಸಭೆಯಲ್ಲಿ ಭಾಗವಹಿಸಿದವರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ದೇಶಾದ್ಯಂತ ಈ ಧರ್ಮಸಭೆಯಲ್ಲಿ ಭಾಗವಹಿಸಿದ ಜನರಿದ್ದು, ಅವರನ್ನು ಪತ್ತೆ ಮಾಡುವ ಕುರಿತು ಸಭೆಯಲ್ಲಿ ಚರ್ಚೆಯಾಗಿದೆ.

ಭಾರತ ಲಾಕ್ ಡೌನ್ ಬಳಿಕ 2ನೇ ಸಭೆ:
ಕೊರೊನಾ ವೈರಸ್ ನಿಂದ ಭಾರತ ಲಾಕ್ ಡೌನ್ ಆದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಎರಡನೇ ಸಭೆ ಇದಾಗಿದೆ. ಇಂದಿನ ಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.
ಕಳೆದ ಮಾರ್ಚ್.20ರಂದು ಕೂಡಾ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಕೊರೊನಾ ವೈರಸ್ ವಿರುದ್ಧ ಯಾವ ರೀತಿ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂಬುದರ ಕುರಿತು ಚರ್ಚೆ ನಡೆಸಿದ್ದರು.












Click it and Unblock the Notifications