ದೇಶದಲ್ಲಿ ಕಡಿಮೆಯಾಗಿಲ್ಲ ಪೌರತ್ವ ಕಾಯ್ದೆ ವಿರೋಧಿ ಕಿಚ್ಚು
ದೆಹಲಿ, ಡಿಸೆಂಬರ್.20: ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಇಂದೂ ಕೂಡಾ ಪ್ರತಿಭಟನೆ ಕಿಚ್ಚು ಹೊತ್ತಿಕೊಳ್ಳುವ ಲಕ್ಷಣಗಳು ಎದ್ದು ಕಾಣುತ್ತಿವೆ. ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ಬೀದಿಗಿಳಿಯಲು ಪ್ರತಿಭಟನಾಕಾರರು ಸಜ್ಜಾಗಿದ್ದಾರೆ.
ಡಿಸೆಂಬರ್.19ರ ಗುರುವಾರ ನಿಷೇಧಾಜ್ಞೆ ನಡುವೆಯೂ ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಯಿತು. ಹಲವು ರಾಜ್ಯಗಳಲ್ಲಿ ಉದ್ರಕ್ತರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ ನಡೆಸಿದ್ದು, ಅಶ್ರುವಾಯು ಸಿಡಿಸಲಾಗಿತ್ತು.
ದೇಶಾದ್ಯಂತ ನಡೆದ ಪ್ರತಿಭಟನೆಗೆ ಮೂವರು ಬಲಿಯಾಗಿದ್ದು, ನೂರಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದರ ಮಧ್ಯೆ ಹಲವು ರಾಜ್ಯಗಳಲ್ಲಿ ಡಿಸೆಂಬರ್.21ರವರೆಗೂ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಇಂದು ರಾಷ್ಟ್ರ ರಾಜಧಾನಿಯಲ್ಲಿ ಪರಿಸ್ಥಿತಿ ಹೇಗಿದೆ ಎಂಬುದರ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ಇಂದು ದೆಹಲಿಯಲ್ಲಿ ಪ್ರತಿಭಟನಾ ಮೆರವಣಿಗೆ
ರಾಷ್ಟ್ರ ರಾಜಧಾನಿಯಲ್ಲಿ ಇಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ತೀವ್ರ ಪ್ರತಿಭಟನೆ ನಡೆಯಲಿವೆ. ದೆಹಲಿಯ ಎರಡು ಭಾಗಗಳಲ್ಲಿ ಇಂದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ. ಮಧ್ಯಾಹ್ನದ ವೇಳೆಗೆ ಜಾಮಾ ಮಸೀದಿಯಿಂದ ಜಂತರ್ ಮಂತರ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲು ತೀರ್ಮಾನಿಸಲಾಗಿದೆ. ಇನ್ನು, ಸಂಜೆ ಹೊತ್ತಿಗೆ ದೆಹಲಿಯ ಇಂಡಿಯಾ ಗೇಟ್ ಬಳಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

ದೆಹಲಿಯಲ್ಲಿ ಇಂದೂ ಮೆಟ್ರೋ ಸಂಚಾರ ಬಂದ್
ಡಿಸೆಂಬರ್.19ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ನಗರದಲ್ಲಿ 15 ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿತ್ತು. ಇಂದು ಸದ್ಯದ ಮಟ್ಟಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಎರಡು ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ. ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಹಾಗೂ ಜಾಸೋಲಾ ವಿಹಾರ್ ಶಹೀನ್ ಬಾಗ್ ಮೆಟ್ರೋ ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಲಾಗಿದೆ. ಈ ಎರಡು ನಿಲ್ದಾಣಗಳಲ್ಲಿ ಮೆಟ್ರೋ ನಿಲುಗಡೆಯನ್ನು ತಡೆ ಹಿಡಿಯಲಾಗಿದೆ.

ದೇಶದ ಇಷ್ಟೊಂದು ರಾಜ್ಯಗಳಲ್ಲಿ ಪೌರತ್ವದ ಕಿಚ್ಚು
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೆಹಲಿಯಷ್ಟೇ ಅಲ್ಲ ದೇಶಾದ್ಯಂತ ಪ್ರತಿಭಟನೆ ತೀವ್ರಗೊಂಡಿತ್ತು. ಪ್ರಮುಖವಾಗಿ ಬೆಂಗಳೂರು, ಲಖನೌ, ಕೋಲ್ಕತ್ತಾ, ಚೆನ್ನೈ, ಪಾಟ್ನಾ, ತಿರುವನಂತಪುರಂ, ಮುಂಬೈ ಮತ್ತು ಹೈದರಾಬಾದ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಜನರು ಬೀದಿಗೆ ಇಳಿದಿದ್ದರು.

ಸುಳ್ಳು ಸುದ್ದಿ ಹರಡುತ್ತಿದ್ದ ಖಾತೆಗಳ ಮೇಲೆ ಕಣ್ಣು
ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ. ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹಾಗೂ ಕಾನೂನು ಸುವ್ಯವಸ್ಥೆಯ ವಿರುದ್ಧವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹರಿ ಬಿಡಲಾಗುತ್ತಿದೆ ಎಂದು ತಿಳಿದು ಬಂದಿದೆ. 60 ನಕಲಿ ಖಾತೆಗಳ ಮೂಲಕ ತಪ್ಪು ಸಂದೇಶ ರವಾನಿಸುತ್ತಿರುವ ಬಗ್ಗೆ ಈಗಾಗಲೇ ಪೊಲೀಸರು ಪತ್ತೆ ಮಾಡಿದ್ದಾರೆ. ಇದರ ಜೊತೆಗೆ ಪ್ರತಿಯೊಂದು ಪೋಸ್ಟ್ ಗಳ ಮೇಲೆ ಖಾಕಿ ತೀವ್ರ ಲಕ್ಷ್ಯ ವಹಿಸಿದೆ.












Click it and Unblock the Notifications