ಕಾಶ್ಮೀರಿಗಳ ಮೇಲೆ ದೌರ್ಜನ್ಯ: ತ್ವರಿತ ಕ್ರಮಕ್ಕೆ ಸುಪ್ರೀಂಕೋರ್ಟ್ ಸೂಚನೆ
ನವದೆಹಲಿ, ಫೆಬ್ರವರಿ 22: ಕಾಶ್ಮೀರಿಗಳ ವಿರುದ್ಧ ಹಿಂಸಾಚಾರ, ಬೆದರಿಕೆ ಅಥವಾ ಸಾಮಾಜಿಕ ಬಹಿಷ್ಕಾರ ಹಾಕುವ ಘಟನೆಗಳನ್ನು ತಡೆಯಲು ಕ್ಷಿಪ್ರ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸುಪ್ರೀಂಕೋರ್ಟ್, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಡಿಜಿಪಿಗಳಿಗೆ ಶುಕ್ರವಾರ ಸೂಚನೆ ನೀಡಿದೆ.
ಪುಲ್ವಾಮಾ ಉಗ್ರರ ದಾಳಿಯ ಬಳಿಕ ಕಾಶ್ಮೀರಿಗಳ ಮೇಲೆ ಹಲ್ಲೆ ಮತ್ತು ಬೆದರಿಕೆಯ ಕೃತ್ಯಗಳನ್ನು ಎಸಗಲಾಗುತ್ತಿದೆ. ಹೀಗಾಗಿ ಅವರ ರಕ್ಷಣೆಗೆ ಕ್ರಮ ತೆಗೆದುಕೊಳ್ಳಲು ರಾಜ್ಯಗಳಿಗೆ ಸೂಚನೆ ನೀಡಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ಪುಲ್ವಾಮಾ ದಾಳಿ: ಬೆದರಿದ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಪಂಜಾಬ್ ರಕ್ಷಣೆ
ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿಗಳಾದ ಎಲ್ಎನ್ ರಾವ್ ಹಾಗೂ ಸಂಜೀವ್ ಖನ್ನಾ ಅವರನ್ನು ಒಳಗೊಂಡ ನ್ಯಾಯಪೀಠ ಕೇಂದ್ರ ಸರ್ಕಾರ, 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿ ಮಾಡಿದೆ.
ಕಾಶ್ಮೀರಿಗಳು ಮತ್ತು ಅಲ್ಪಸಂಖ್ಯಾತರ ವಿರುದ್ಧ ಬೆದರಿಕೆ, ದೌರ್ಜನ್ಯ, ಸಾಮಾಜಿಕ ಬಹಿಷ್ಕಾರದಂತಹ ಘಟನೆಗಳಾಗದಂತೆ ತಡೆಯಲು ತ್ವರಿತ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳು, ಡಿಜಿಪಿಗಳು ಹಾಗೂ ದೆಹಲಿ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿರುವುದಾಗಿ ಪೀಠ ಹೇಳಿದೆ.
ಕಾಶ್ಮೀರ ಬೇಕು, ಕಾಶ್ಮೀರಿಗಳು ಬೇಡ; ಇದ್ಯಾವ ನ್ಯಾಯ?: ಚಿದಂಬರಂ ವಿಷಾದ
ಎಲ್ಲ ರಾಜ್ಯಗಳೂ ನೋಡಲ್ ಅಧಿಕಾರಿಗಳನ್ನು ನೇಮಿಸಿ ಅವರಿಗೆ ಪ್ರಚಾರ ನೀಡಬೇಕು. ಇದರಿಂದ ಹಿಂಸಾಚಾರ, ದಾಳಿ ಮತ್ತು ಸಾಮಾಜಿಕ ಬಹಿಷ್ಕಾರದಂತಹ ಘಟನೆಗಳನ್ನು ಅವರ ಗಮನಕ್ಕೆ ತರಲು ಸಾಧ್ಯವಾಗುತ್ತದೆ. ಹಾಗೂ ತತ್ಕ್ಷಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಬಹುದು ಎಂದು ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿತು.
ಕಾಶ್ಮೀರಿ ಸರಕುಗಳನ್ನು ಬಹಿಷ್ಕರಿಸಿ ಎಂದ ಮೇಘಾಲಯ ರಾಜ್ಯಪಾಲ
ಕೇಂದ್ರವು ಈಗಾಗಲೇ ಈ ಸಂಬಂಧ ಕ್ರಮ ತೆಗೆದುಕೊಂಡಿದ್ದು, ಸೂಚನೆಗಳನ್ನು ಹೊರಡಿಸಿದೆ ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಕೋರ್ಟ್ಗೆ ತಿಳಿಸಿದರು.