ಕೊರೊನಾ ನಿಯಂತ್ರಿಸಲು ಕೇಂದ್ರಕ್ಕೆ ರಾಹುಲ್ ಗಾಂಧಿ ಮಾಸ್ಟರ್ ಪ್ಲಾನ್!
ನವದೆಹಲಿ, ಏಪ್ರಿಲ್.26: ಕೊರೊನಾ ವೈರಸ್ ಸೋಂಕು ಹರಡುವಿಕೆ ಕಡಿವಾಣಕ್ಕೆ ಭಾರತ ಲಾಕ್ ಡೌನ್ ಒಂದೇ ಪರಿಹಾರ ಮಾರ್ಗವಲ್ಲ ಎಂದು ಅಖಿಲ ಭಾರತ ಕಾಂಗ್ರೆಸ್ ಕಮಿಟಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಭಾನುವಾರ ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ದೇಶದಲ್ಲಿ ಪ್ರತಿನಿತ್ಯ ಕನಿಷ್ಠ 1 ಲಕ್ಷ ಜನರನ್ನು ಕೊರೊನಾ ವೈರಸ್ ಸೋಂಕು ತಪಾಸಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಸಾಮೂಹಿಕ ವೈದ್ಯಕೀಯ ತಪಾಸಣೆ ಕೂಡಾ ಸೋಂಕು ಪತ್ತೆ ಮತ್ತು ನಿವಾರಣೆಗೆ ಸೂಕ್ತ ಮಾರ್ಗವೆಂದು ತಜ್ಞರೇ ಒಪ್ಪಿಕೊಂಡಿದ್ದಾರೆ.
ಭಾರತದಲ್ಲಿ ಸದ್ಯದ ಮಟ್ಟಿಗೆ ಪ್ರತಿನಿತ್ಯ 40,000 ಜನರನ್ನು ಕೊರೊನಾ ವೈರಸ್ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಈ ಸಂಖ್ಯೆಯನ್ನು 1 ಲಕ್ಷಕ್ಕೆ ಏರಿಕೆ ಮಾಡುವಂತೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

"ದೇಶದಲ್ಲಿ ತಪಾಸಣಾ ಕಿಟ್ ಗಳ ಅಭಾವವಿಲ್ಲ":
ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲು ಅಗತ್ಯವಿರುವ ವೈದ್ಯಕೀಯ ಕಿಟ್ ಗಳ ಅಭಾವವಿಲ್ಲ. ಹೀಗಿರುವಾಗ ಸಾಧ್ಯವಾದಷ್ಟು ವೇಗಗತಿಯಲ್ಲಿ ವೈದ್ಯಕೀಯ ತಪಾಸಣೆ ನಡೆಸಬೇಕು. ಆ ಮೂಲಕ ಕೊರೊನಾ ವೈರಸ್ ಸೋಂಕು ಹರಡುವಿಕೆಯಿಂದ ಪ್ರಜೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಅಂತ್ಯ ಹಾಡಬೇಕಿದೆ ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿ-ಅಂಶಗಳ ಪ್ರಕಾರ ದೇಶದಲ್ಲಿ ಭಾನುವಾರದ ವೇಳೆಗೆ 26,496 ಮಂದಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದ್ದು, ಈವರೆಗೂ 824 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನು, 5,804 ಜನರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.












Click it and Unblock the Notifications