ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದ ರಾಜಸ್ಥಾನ ಸರ್ಕಾರ
ಜೈಪುರ್, ಜನವರಿ.25: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೊಂದಣಿ ವಿರುದ್ಧ ರಾಜಸ್ಥಾನ ವಿಧಾನಸಭಾ ಅಧಿವೇಶನದಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಕೇರಳ ಹಾಗೂ ಪಂಜಾಬ್ ನಂತರ ಸಿಎಎ ವಿರುದ್ಧ ರಾಜಸ್ಥಾನ ಸರ್ಕಾರ ನಿರ್ಣಯವನ್ನು ಅಂಗೀಕರಿಸಿದ ಮೂರನೇ ರಾಜ್ಯವಾಗಿದೆ.
ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ. ದೆಹಲಿ, ಪಶ್ಚಿಮ ಬಂಗಾಳ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಿಎಎ ವಿರುದ್ಧ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪವನ್ನು ಪಡೆದುಕೊಂಡಿದ್ದಾಗಿದೆ.
ಎಲ್ಲ ಬೆಳವಣಿಗೆ ಮಧ್ಯೆ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿರುವ ರಾಜಸ್ಥಾನದಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಲಾಗಿದೆ. ಆ ಮೂಲಕ ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕಾಯ್ದೆಯನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ರವಾನಿಸಲಾಗಿದೆ.

ಸಿಎಎ ಪರ ಘೋಷಣೆ ಕೂಗಿದ ಬಿಜೆಪಿ ಸದಸ್ಯರು
ರಾಜಸ್ಥಾನ ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರವು ಸಿಎಎ ವಿರುದ್ಧ ನಿರ್ಣಯ ಮಂಡಿಸುತ್ತಿದ್ದಂತೆ ಬಿಜೆಪಿ ಸದಸ್ಯರು ಕೆರಳಿದರು. ಕೇಂದ್ರ ಸರ್ಕಾರ ಜಾರಿಗೊಳಿಸಿದ ಸಿಎಎ ಪರ ಘೋಷಣೆಗಳನ್ನು ಕೂಗಿದರು. ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಸ್ತಿತ್ವಕ್ಕೆ ತರಬೇಕು ಎಂದು ಆಗ್ರಹಿಸಿದರು. ಇದರ ಮಧ್ಯದಲ್ಲೇ ನಿರ್ಣಯವನ್ನು ಅಂಗೀಕರಿಸಲಾಯಿತು.

ಸಮಾನತೆ ಹಕ್ಕು ಉಲ್ಲಂಘನೆ ಬಗ್ಗೆ ನಿರ್ಣಯದಲ್ಲಿ ಉಲ್ಲೇಖ
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತದ ಸಂವಿಧಾನದಲ್ಲಿರುವ ಸಮಾನತೆ ಹಕ್ಕಿನ ಸ್ಪಷ್ಟ ಉಲ್ಲಂಘನೆ ಆಗುತ್ತದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. ಜಾತ್ಯಾತೀತ ಸಂವಿಧಾನವಿರುವ ದೇಶದಲ್ಲಿ ಧರ್ಮದ ಆಧಾರದಲ್ಲಿ ನೆರೆರಾಷ್ಟ್ರಗಳಿಂದ ವಲಸೆ ಬಂದಿರುವ ವಲಸಿಗರನ್ನು ಹೊರಗಟ್ಟುವ ಉದ್ದೇಶವನ್ನು ಸಿಎಎ ಹೊಂದಿದೆ. ಇದರಿಂದ ಸಂವಿಧಾನದ 14ನೇ ವಿಧಿಯ ಉಲ್ಲಂಘನೆ ಆಗುತ್ತದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

ಸಿಎಎ ವಿರುದ್ಧ ಹೋರಾಟಕ್ಕೆ ಇದೇ ಕಾರಣ
ಧರ್ಮದ ನೆಲೆಗಟ್ಟಿನಲ್ಲಿ ಜನರನ್ನು ವಿಂಗಡಣೆ ಮಾಡಲಾಗುತ್ತಿದೆ. ಭಾರತದ ಇತಿಹಾಸದಲ್ಲಿ ಈ ರೀತಿಯ ಕಾನೂನು ಜಾರಿಗೊಳಿಸುತ್ತಿರುವುದು ಇದೇ ಮೊದಲಾಗಿದೆ. ಹೀಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೊಂದಣಿ ವಿರುದ್ಧ ಪ್ರತಿಭಟನೆಗಳು ತೀವ್ರಗೊಂಡಿವೆ. ದೇಶದುದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

ಎರಡು ರಾಜ್ಯ ಅಧಿವೇಶನದಲ್ಲಿ ಸಿಎಎ ವಿರುದ್ಧ ನಿರ್ಣಯ ಪಾಸ್
ಈ ಹಿಂದೆ ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೊಂದಣಿ ವಿರುದ್ಧ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಧ್ವನಿ ಎತ್ತಿದ್ದರು. ಪಂಜಾಬ್ ಹಾಗೂ ಕೇರಳ ಅಧಿವೇಶನದಲ್ಲಿ ಈಗಾಗಲೇ ಸಿಎಎ ವಿರುದ್ಧ ನಿರ್ಣಯ ಅಂಗೀಕಾರಗೊಂಡಿದೆ. ಭಾರತವು ಜಾತ್ಯಾತೀತ ದೇಶವಾಗಿದ್ದು, ಸಿಎಎ ಅನುಷ್ಠಾನಗೊಂಡರೆ ಸಂವಿಧಾನದ 14, 21 ಹಾಗೂ 25ನೇ ಕಲಂನ ಉಲ್ಲಂಘನೆ ಆಗುತ್ತದೆ ಎನ್ನಲಾಗಿದೆ.












Click it and Unblock the Notifications