ಸಂಸತ್ ವಿಷಯಗಳ ಬಗ್ಗೆ ವಿಪಕ್ಷಗಳಲ್ಲಿ ಒಮ್ಮತ ಮೂಡಿಸಲು ಮಲ್ಲಿಕಾರ್ಜುನ ಖರ್ಗೆ ಸಭೆ
ನವದೆಹಲಿ, ನವೆಂಬರ್ 27: ಸಂಸತ್ ಚಳಿಗಾಲ ಅಧಿವೇಶನದ ಮೊದಲ ದಿನ ಯಾವೆಲ್ಲ ವಿಷಯಗಳನ್ನು ಪ್ರಸ್ತಾಪಿಸಬೇಕು ಎಂಬುದರ ಕುರಿತು ಒಮ್ಮತವನ್ನು ಪಡೆದುಕೊಳ್ಳುವ ಉದ್ದೇಶದಿಂದ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಸೋಮವಾರ ಎಲ್ಲಾ ವಿರೋಧ ಪಕ್ಷಗಳ ಸಭೆ ಕರೆದಿದ್ದಾರೆ.
"ಮುಂಬರುವ ಅಧಿವೇಶನದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ನವೆಂಬರ್ 29 ರಂದು ಬೆಳಗ್ಗೆ 9:45 ಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ಎಲ್ಲಾ ವಿರೋಧ ಪಕ್ಷಗಳ ಸಭೆಗೆ ಕರೆಯಲಾಗಿದೆ. ಈ ವೇಳೆ ಸಂಸತ್ತಿನಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳು ಮತ್ತು ಅಭಿಪ್ರಾಯಗಳ ಬಗ್ಗೆ ಒಮ್ಮತ ಮೂಡಿಸಲು ಪ್ರಯತ್ನಿಸುತ್ತೇವೆ," ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಚಳಿಗಾಲದ ಅಧಿವೇಶನ: 26 ಮಸೂದೆ ಮಂಡನೆ ಸಾಧ್ಯತೆ, ಎಂಎಸ್ಪಿ-ಪೆಗಾಸಸ್ ಮೇಲೆ ವಿಪಕ್ಷಗಳ ಕಣ್ಣು
ನವೆಂಬರ್ 29 ರಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪಕ್ಷವು ಪ್ರಸ್ತಾಪಿಸುವ ವಿಷಯಗಳ ಕುರಿತು ಚರ್ಚಿಸಲು ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸದಲ್ಲಿ ಗುರುವಾರ ಸಭೆ ನಡೆಸಲಾಗಿತ್ತು. ಕಾಂಗ್ರೆಸ್ ಪಕ್ಷದ ಸಂಸದೀಯ ಕಾರ್ಯತಂತ್ರದ ಸಮಿತಿಯಲ್ಲಿ ಈ ಬಗ್ಗೆ ಚರ್ಚಿಸಲಾಗಿತ್ತು.
ವಿಪಕ್ಷಗಳ ಸಭೆಯಿಂದ ಟಿಎಂಸಿ ಅಂತರ:
ಕಾಂಗ್ರೆಸ್ ಪಕ್ಷದೊಂದಿಗೆ ಮುಂಬರುವ ಸಂಸತ್ ಚಳಿಗಾಲ ಅಧಿವೇಶನದಲ್ಲಿ ಸಮನ್ವಯ ಸಾಧಿಸುವುದಕ್ಕೆ ನಮಗೆ ಅಷ್ಟೊಂದು ಆಸಕ್ತಿಯಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಪಕ್ಷ ಈಗಾಗಲೇ ಸ್ಪಷ್ಟಪಡಿಸಿದೆ. ಜನರ ಹಿತದೃಷ್ಟಿಯಿಂದಾಗಿ ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳಿಗೆ ಟಿಎಂಸಿ ಸಹಕಾರ ನೀಡಲಿದೆ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆದಿರುವ ವಿರೋಧಪಕ್ಷಗಳ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಭಾಗವಹಿಸುವುದಿಲ್ಲ ಎಂದು ತಿಳಿದು ಬಂದಿದೆ.
ಟಿಎಂಸಿ ಗೈರು ಹಾಜರಾತಿಗೆ ಖರ್ಗೆ ಸ್ಪಷ್ಟನೆ:
ಸಾರ್ವಜನಿಕ ಹಿತದೃಷ್ಟಿಯಿಂದ ಕಾಂಗ್ರೆಸ್ ಪ್ರಸ್ತಾಪಿಸುವ ಎಲ್ಲ ವಿಷಯಗಳಿಗೆ ತೃಣಮೂಲ ಕಾಂಗ್ರೆಸ್ ಪಕ್ಷವೂ ಸಹ ಬೆಂಬಲ ವ್ಯಕ್ತಪಡಿಸಿದೆ, ಆದರೆ ವಿಪಕ್ಷಗಳ ಸಭೆಯಲ್ಲಿ ಹಾಜರಾಗುತ್ತಿಲ್ಲ ಎಂದು ಮಲ್ಲಿಕಾರ್ಜುನ್ ಖರ್ಗೆ ಭಾನುವಾರ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ಟಿಎಂಸಿ ಪಕ್ಷದ ಸಭೆ ನಡೆಯಲಿದ್ದು, ಆದ್ದರಿಂದ ಕಾಂಗ್ರೆಸ್ ಕರೆದಿರುವ ಸಭೆಗೆ ಅವರು ಹಾಜರಾಗುತ್ತಿಲ್ಲ ಎಂದು ಹೇಳಿದ್ದಾರೆ.
ತೃಣಮೂಲ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಸಮನ್ವಯ ಸಮಿತಿ ಸಭೆಯನ್ನು ನವೆಂಬರ್ 29ರಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಪಕ್ಷದ ಮುಖ್ಯಸ್ಥರೂ ಆಗಿರುವ ಮಮತಾ ಬ್ಯಾನರ್ಜಿ ನಿವಾಸದಲ್ಲಿ ನಡೆಸಲಿದೆ. ಈ ವೇಳೆ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ತನ್ನ ಕಾರ್ಯತಂತ್ರ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪಕ್ಷ ಚರ್ಚಿಸಲಿದೆ ಎಂದು ಟಿಎಂಸಿ ನಾಯಕ ಹೇಳಿದ್ದಾರೆ.
Recommended Video