ರಾಮ ಮಂದಿರ ಟ್ರಸ್ಟ್ ಸದಸ್ಯರಿಂದ ಪ್ರಧಾನಿ ಮೋದಿ ಭೇಟಿ
ನವದೆಹಲಿ, ಫೆಬ್ರವರಿ.20: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ರಚಿಸಿದ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮತ್ತು ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಗುರುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಬುಧವಾರವಷ್ಟೇ ಹಿರಿಯ ವಕೀಲ ಕೆ. ಪರಸಾನ್ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಶ್ರೀರಾಮ ಮಂದಿರ ಟ್ರಸ್ಟ್ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಯನ್ನು ಆಯ್ಕೆ ಮಾಡಲಾಯಿತು. ರಾಮ ಮಂದಿರ ಟ್ರಸ್ಟ್ ಅಧ್ಯಕ್ಷರಾಗಿ ಮಹಾಂತ್ ಗೋಪಾಲ್ ದಾಸ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಚಂಪತ್ ರೈರನ್ನು ಆಯ್ಕೆ ಮಾಡಲಾಗಿತ್ತು.
ಇದರ ಜೊತೆಗೆ ಈ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರಟರಿ ಆಗಿದ್ದ ನೃಪೇಂದ್ರ ಮಿಶ್ರಾರನ್ನು ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಮುಖ್ಯಸ್ಥರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು.

ರಾಮ ಮಂದಿರ ನಿರ್ಮಾಣ ಟ್ರಸ್ಟ್ ನಲ್ಲಿ 15 ಸದಸ್ಯರು:
ರಾಮ ಮಂದಿರ ನಿರ್ಮಾಣ ಕಾರ್ಯವನ್ನು ವೇಗದ ಗತಿಯಲ್ಲಿ ನಡೆಸುವ ಉದ್ದೇಶದಿಂದ ಸಮಿತಿ ರಚಿಸಲಾಗಿದ್ದು, ಈ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಏಳು ಸದಸ್ಯರು, ಐವರು ನಾಮನಿರ್ದೇಶನ ಸದಸ್ಯರು ಹಾಗೂ ಮೂವರು ಟ್ರಸ್ಟಿಗಳು ಇರಲಿದ್ದಾರೆ.
ಇನ್ನು, ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಗ್ಯಾನೇಶ್ ಕುಮಾರ್ ಮತ್ತು ಉತ್ತರ ಪ್ರದೇಶ ಸರ್ಕಾರದ ಪ್ರತಿನಿಧಿಯಾಗಿ ಅವಿನಾಶ್ ಅವಾಸ್ತಿ ಹಾಗೂ ಅಯೋಧ್ಯೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಜ್ ಕುಮಾರ್ ಝಾ ಹಾಜರಿದ್ದರು.












Click it and Unblock the Notifications