ನವದೆಹಲಿಯಲ್ಲಿ ಕೊರೊನಾವೈರಸ್ ನಿಯಂತ್ರಣಕ್ಕೆ ಹೊಸ ತಪಾಸಣೆ
ನವದೆಹಲಿ, ಜುಲೈ.03: ಕೊರೊನಾವೈರಸ್ ಸೋಂಕು ನಿಯಂತ್ರಣಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರವು ಮೇಲಿಂದ ಮೇಲೆ ಶಿಸ್ತುಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದೀಗ ರಾಷ್ಟ್ರ ರಾಜಧಾನಿಯಲ್ಲಿ ಕ್ಷಿಪ್ರ ಪ್ರತಿಜನಕ ತಪಾಸಣೆ ನಡೆಸುವುದಕ್ಕೆ ಸರ್ಕಾರವು ಮುಂದಾಗಿದೆ.
ನವದೆಹಲಿಯಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದಾಖಲಾಗಿರುವ 262 ಪ್ರದೇಶಗಳನ್ನು ಕಂಟೇನ್ಮೆಂಟ್ ವಲಯಗಳು ಎಂದು ಗುರುತಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 13 ಹಾಟ್ ಸ್ಪಾಟ್ ಗಳನ್ನು ಗುರುತಿಸಲಾಗಿದ್ದು, 73 ಪ್ರದೇಶಗಳನ್ನು ಕಂಟೇನ್ಮೆಂಟ್ ವಲಯದಿಂದ ಕೈ ಬಿಡಲಾಗಿದೆ.
ನವದೆಹಲಿಯಲ್ಲಿ ಮೃತ ವೈದ್ಯರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ
ನವದೆಹಲಿಯಲ್ಲಿರುವ ಕಂಟೇನ್ಮೆಂಟ್ ವಲಯಗಳಿಂದ ಹೊರ ಪ್ರದೇಶಗಳಲ್ಲಿ ಕ್ಷಿಪ್ರ ಪ್ರತಿಜನಕ ತಪಾಸಣೆ ನಡೆಸುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರವು ತಿಳಿಸಿದೆ. ಸಮುದಾಯದ ಮಟ್ಟದಲ್ಲಿ ಕೊರೊನಾವೈರಸ್ ಸೋಂಕು ಹರಡುವುದಕ್ಕೆ ಕಡಿವಾಣ ಹಾಕುವುದಕ್ಕೆ ಸಾಧ್ಯವಾಗುತ್ತದೆ ಎಂದು ಸರ್ಕಾರವು ಅಭಿಪ್ರಾಯ ವ್ಯಕ್ತಪಡಿಸಿದೆ.
ನವದೆಹಲಿಯಲ್ಲಿ 92175 ಮಂದಿಗೆ ಕೊವಿಡ್-19 ಸೋಂಕು:
ನವದೆಹಲಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾವೈರಸ್ ಸೋಂಕಿತರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. 92175 ಜನ ಕೊರೊನಾವೈರಸ್ ಸೋಂಕಿತರಿದ್ದು, ಈ ಪೈಕಿ 63007 ಜನ ಗುಣಮುಖರಾಗಿದ್ದಾರೆ. ಬಾಕಿ ಉಳಿದ 26304 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ನವದೆಹಲಿಯಲ್ಲಿ ಇದುವರೆಗೂ ಮಹಾಮಾರಿಗೆ 2864 ಜನರು ಪ್ರಾಣ ಬಿಟ್ಟಿದ್ದಾರೆ.