ನಿರ್ಭಯ ಪ್ರಕರಣ; ಕ್ಷಮಾದಾನ ಅರ್ಜಿ ತಿರಸ್ಕರಿಸಲು ಮನವಿ
ನವದೆಹಲಿ, ಜನವರಿ 15 : ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಮುಕೇಶ್ ಸಿಂಗ್ ಕ್ಷಮಾದಾನ ಅರ್ಜಿ ತಿರಸ್ಕರಿಸಬೇಕು ಎಂದು ದೆಹಲಿ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ರಾಷ್ಟ್ರಪತಿಗಳ ಮುಂದೆ ಅಪರಾಧಿ ಅರ್ಜಿ ಸಲ್ಲಿಸಿದ್ದಾನೆ.
ಬುಧವಾರ ದೆಹಲಿ ಸರ್ಕಾರ ಕೇಂದ್ರ ಗೃಹ ಇಲಾಖೆಗೆ ಈ ಕುರಿತು ಮನವಿ ಸಲ್ಲಿಸಿದೆ. 32 ವರ್ಷದ ಮುಕೇಶ್ ಸಿಂಗ್ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾನೆ. ಮಂಗಳವಾರ ಆತ ರಾಷ್ಟ್ರಪತಿಗಳ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದ.
ರಾಷ್ಟ್ರಪತಿಗಳು ತಮ್ಮ ಮುಂದೆ ಬಂದ ಅರ್ಜಿ ಬಗ್ಗೆ ಗೃಹ ಇಲಾಖೆಯ ಸಲಹೆ ಕೇಳುತ್ತಾರೆ. ಆಗ ಅರ್ಜಿಯನ್ನು ತಿರಸ್ಕರಿಸುವಂತೆ ಸಲಹೆ ನೀಡಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಜನವರಿ 22ರಂದು ಮುಕೇಶ್ ಸಿಂಗ್ ಗಲ್ಲಿಗೇರಿಸಲು ಡೆತ್ ವಾರೆಂಟ್ ಜಾರಿಯಾಗಿದೆ.

ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಮಂಗಳವಾರ ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಬಳಿಕ ಅಪರಾಧಿ ಡೆತ್ ವಾರೆಂಟ್ ರದ್ದುಗೊಳಿಸಬೇಕು ಎಂದು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದ ಮತ್ತು ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದ.
ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮುಕೇಶ್ ಸಿಂಗ್, ಪವನ್ ಗುಪ್ತಾ, ವಿನಯ್ ಕುಮಾರ್ ಶರ್ಮಾ, ಅಕ್ಷಯ್ ಕುಮಾರ್ ಸಿಂಗ್ ಅಪರಾಧಿಗಳು. ಇವರಲ್ಲಿ ಮುಕೇಶ್ ಸಿಂಗ್ ಮಾತ್ರ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ. ಗಲ್ಲಿಗೇರಿಸುವ ಮೊದಲು ಎಲ್ಲಾ ಅಪರಾಧಿಗಳಿಗೂ ಕ್ಷಮಾದಾನ ಅರ್ಜಿ ಸಲ್ಲಿಸಲು ಅವಕಾಶವಿದೆ.
ಜನವರಿ 22ರ ಬೆಳಗ್ಗೆ 7ಗಂಟೆಗೆ ಎಲ್ಲಾ ಅಪರಾಧಿಗಳಿಗೂ ಗಲ್ಲು ಶಿಕ್ಷೆ ವಿಧಿಸಲು ಡೆತ್ ವಾರೆಂಟ್ ಜಾರಿಯಾಗಿದೆ. ಆದರೆ, ಕ್ಷಮಾದಾನ ಅರ್ಜಿ ಇತ್ಯರ್ಥವಾಗುವ ತನಕ ಗಲ್ಲು ಶಿಕ್ಷೆ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ದೆಹಲಿ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.












Click it and Unblock the Notifications