ನವದೆಹಲಿಯಲ್ಲಿ ವಾಯುಮಾಲಿನ್ಯಕ್ಕೆ 1 ಕೋಟಿ ದಂಡ, 5 ವರ್ಷ ಜೈಲು
ನವದೆಹಲಿ, ಅಕ್ಟೋಬರ್.29: ರಾಷ್ಟ್ರ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಪರಸರ ಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿಗೊಳಿಸಿದೆ.
ನವದೆಹಲಿ ಸುತ್ತಮುತ್ತಲಿನ ಪ್ರದೇಶ ಮತ್ತು ರಾಜ್ಯಗಳಲ್ಲಿ ಬೆಳೆ ಸುಡುವಂತಾ ಚಟುವಟಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾಯ್ದೆ ರೂಪಿಸಲಾಗಿದೆ. ವಾಯುಮಾಲಿನ್ಯದ ಚಟುವಟಿಕೆಗಳಲ್ಲಿ ತೊಡಗಿದವರಿಗೆ 1 ಕೋಟಿ ರೂಪಾಯಿ ದಂಡ, ಐದು ವರ್ಷ ಸೆರೆವಾಸ ವಿಧಿಸುವ ಕಠಿಣ ಕಾನೂನು ಜಾರಿಗೊಳಿಸಲಾಗಿದೆ.
ವಾಯುಮಾಲಿನ್ಯ ನಿಯಂತ್ರಣಕ್ಕೆ ಶೀಘ್ರದಲ್ಲಿಯೇ ಕಾನೂನು: ಕೇಂದ್ರ ಸರ್ಕಾರ
ಬುಧವಾರವಷ್ಟೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರ ರಾಜಧಾನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಪರಿಶೀಲನೆ ಮತ್ತು ನಿರ್ವಹಣೆಗೆ ಅಗತ್ಯವಿರುವ ಸಮಿತಿಯೊಂದನ್ನು ರಚಿಸುವ ಪ್ರಸ್ತಾವನೆಗೆ ಅಂಕಿತ ಹಾಕಿದ್ದರು. 18 ಸದಸ್ಯರನ್ನೊಳಗೊಂಡ ಆಯೋಗವು ದೆಹಲಿ ಮತ್ತು ಎನ್ ಸಿಆರ್ ನಲ್ಲಿ ವಾಯಮಾಲಿನ್ಯ ಹೆಚ್ಚಾಗಲು ಕಾರಣವೇನು, ನಿಯಂತ್ರಣಕ್ಕೆ ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎನ್ನುವುದರ ಬಗ್ಗೆ ಸಂಶೋಧನೆ ನಡೆಸಲಿದ್ದು, ಪರಿಹಾರ ಮಾರ್ಗಗಳ ಬಗ್ಗೆ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಿದೆ.
ವಾಯುಮಾಲಿನ್ಯ ನಿಯಂತ್ರಣ ಸಮಿತಿ ರಚನೆ:
ಕೇಂದ್ರ ಸರ್ಕಾರದಿಂದ ನಾಮನಿರ್ದೇಶಿತ ಪ್ರತಿನಿಧಿಯೊಬ್ಬರು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ದೆಹಲಿ, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಿಗೆ ಸೇರಿದ ಪ್ರತಿನಿಧಿಗಳನ್ನು ಈ ಸಮಿತಿಯಲ್ಲಿ ಸೇರಿಸಿಕೊಳ್ಳಲಾಗಿರುತ್ತದೆ. ರಾಷ್ಟ್ರೀಯ ರಾಜಧಾನಿಗೆ ಸಂಬಂಧಿಸಿದಂತೆ ವಾಯುಮಾಲಿನ್ಯ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮತ್ತು ನಿರ್ವಹಣೆಗೆ ರಚಿಸಲಾಗಿರುವ ಪರಿಸರ ಮಾಲಿನ್ಯ ಪ್ರಾಧಿಕಾರ ಸೇರಿದಂತೆ ಅಸ್ತಿತ್ವದಲ್ಲಿರುವ ಎಲ್ಲ ಸರ್ಕಾರಿ ಅಂಗ-ಸಂಸ್ಥೆಗಳ ಸ್ಥಾನವನ್ನು ಸಮಿತಿ ತುಂಬುತ್ತದೆ.
ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶಗಳಲ್ಲಿ ಬೆಳೆಗಳಿಗೆ ಬೆಂಕಿ ಹಚ್ಚುವುದರಿಂದ ನವದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಾಯುಮಾಲಿನ್ಯ ಹೆಚ್ಚಾಗಿದ್ದು, ಗಾಳಿಯ ಗುಣಮಟ್ಟ ಸಂಪೂರ್ಣವಾಗಿ ಹಾಳಾಗುತ್ತಿತ್ತು. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.