ಶಂಕರ ಬಿದರಿ ಕೈ ತಪ್ಪಿದ ಎಸ್ ಪಿ ರಾಜ್ಯಾಧ್ಯಕ್ಷ ಸ್ಥಾನ
ನವದೆಹಲಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಸಮಾಜವಾದಿ ಪಕ್ಷ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್, ಕರ್ನಾಟಕ ರಾಜ್ಯ ಪದಾಧಿಕಾರಿಗಳನ್ನು ಪುನರಾಯ್ಕೆ ಮಾಡಿರುವುದಾಗಿ ಘೋಷಿಸಿದರು.
ಅದರಂತೆ, ಕರ್ನಾಟಕ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ಬಾಬೂ ಗೌಡ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಹಾಲಿ ರಾಜ್ಯಾಧ್ಯಕ್ಷ ಶಂಕರ ಬಿದರಿ ಅವರನ್ನು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ.
ತೃತೀಯ ರಂಗದವರು ಪ್ರಧಾನಿ : 2014ರ ಲೋಕಸಭಾ ಚುನಾವಣೆ ಬಗ್ಗೆ ಮಾತನಾಡಿದ ಮುಲಾಯಂ ಸಿಂಗ್ ಯಾದವ್, ಚುನಾವಣೆಯಲ್ಲಿ ತೃತೀಯ ರಂಗದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಬಿಜೆಪಿ, ಕಾಂಗ್ರೆಸ್ ಸರ್ಕಾರಗಳಿಗೆ ಪರ್ಯಾಯವಾಗಿ ತೃತೀಯ ರಂಗ ಸರ್ಕಾರ ರಚನೆಯಾಗುತ್ತದೆ. ತೃತೀಯ ರಂಗ ರಚನೆಗೆ ಸಂಬಂಧಿಸಿದಂತೆ ಹಲವು ಪಕ್ಷಗಳು ನಮ್ಮೊಂದಿಗೆ ಸಂಪರ್ಕದಲ್ಲಿವೆ ಎಂದು ಮುಲಾಯಂ ಸಿಂಗ್ ಯಾದವ್ ಹೇಳಿದರು.
ಯಾರು ಪಾಟೀಲ್ : ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಬಾಬೂಗೌಡ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಪಾಟೀಲ್ ವಾಜಪೇಯಿ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಉತ್ತರ ಕರ್ನಾಟಕದಲ್ಲಿ ರೈತ ಹೋರಾಟದ ಮೂಲಕ ಜನಪ್ರಿಯತೆ ಗಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಪಾಟೀಲ್ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರಿದ್ದರು. ಉತ್ತರ ಕರ್ನಾಟಕದಲ್ಲಿ ಅವರು ಪಕ್ಷ ಸಂಘಟನೆ ಮಾಡಲು ಉತ್ತಮ ವ್ಯಕ್ತಿಯಾಗಿದ್ದಾರೆ. ಆದ್ದರಿಂದ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.