ವಿಚ್ಛೇದಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ಇಲ್ಲ
ನವದೆಹಲಿ, ಸೆಪ್ಟೆಂಬರ್ 14: ಸರ್ಕಾರಿ ನೌಕರರು ಮೃತಪಟ್ಟ ಬಳಿಕ ಅವರ ಪುತ್ರಿ ವಿವಾಹ ವಿಚ್ಛೇದನ ಪಡೆದರೆ ಅವರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಮಂಡ್ಯಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಈ ಅಂಶವನ್ನು ಸ್ಪಷ್ಟಪಡಿಸಿದೆ. ಮಂಡ್ಯ ಜಿಲ್ಲಾ ಖಜಾನೆಯಲ್ಲಿ ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ದಿ. ಪಿ. ಭಾಗ್ಯಮ್ಮ ಅವರ ಪುತ್ರಿ ವಿ. ಸೌಮ್ಯಶ್ರೀ ಅವರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವಂತೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಖಜಾನೆ ನಿರ್ದೇಶಕರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಸೌಮ್ಯಶ್ರೀ ಅವರ ತಾಯಿ ಜಿಲ್ಲಾ ಖಜಾನೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿದ್ದ ಹಿನ್ನೆಲೆಯಲ್ಲಿ ಅವರ ಸಾವಿನ ಬಳಿಕ 2013ರ ಮಾರ್ಚ್ 21ರಂದು ಅನುಕಂಪದ ಉದ್ಯೋಗ ಪಡೆಯುವುದಕ್ಕೆ ಅರ್ಜಿ ಸಲ್ಲಿಸಿದ್ದರು.

ಆದರೆ, ಕಾನೂನು ಪ್ರಕಾರ ಉದ್ಯೋಗ ನೀಡಲು ನಿರಾಕರಿಸಲಾಯಿತು. ಇದನ್ನು ಪ್ರಶ್ನಿಸಿ ವಿ.ಸೌಮ್ಯಶ್ರೀ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿ ಹೈಕೋರ್ಟ್ ಅನುಕಂಪದ ಉದ್ಯೋಗ ನೀಡುವಂತೆ ರಾಜ್ಯ ಸರ್ಕಾರದ ಖಜಾನೆ ನಿರ್ದೇಶಕರಿಗೆ ನಿರ್ದೇಶನ ನೀಡಿತ್ತು.
ಉಚ್ಛ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿ ರಾಜ್ಯ ಖಜಾನೆ ನಿರ್ದೇಶಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಇದರ ವಿಚಾರಣೆ ನಡೆಸಿದ ಎಂ.ಆರ್.ಶಾ ಮತ್ತು ಅನಿರುದ್ಧ ಬೋಸ್ ಅವರ ಪೀಠವು ಸೌಮ್ಯಶ್ರೀ ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆಯುವುದಕ್ಕೆ ಅರ್ಹರಲ್ಲ ಎಂದು ತಿಳಿಸಿ ಹೈಕೋರ್ಟ್ ಆದೇಶವನ್ನು ವಜಾಗೊಳಿಸಿತು.
ಕರ್ನಾಟಕ ನಾಗರಿಕ ಸೇವಾ (ಸಹಾನುಭೂತಿ ಆಧಾರದ ನೇಮಕಾತಿ) ನಿಯಮಗಳು-1996ರ ಪ್ರಕಾರ ಸರ್ಕಾರಿ ಉದ್ಯೋಗಿಯ ವಿಚ್ಛೇದಿತ ಪುತ್ರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲು ಅವಕಾಶವಿಲ್ಲ. ಉದ್ಯೋಗಿಯನ್ನೇ ಅವಲಂಬಿಸಿದ್ದ ಮದುವೆಯಾಗದ ಅಥವಾ ವಿಧವೆ ಪುತ್ರಿಗಷ್ಟೇ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಬಹುದು ಎಂದು ಪೀಠ ಹೇಳಿದೆ.
ಅನುಕಂಪದ ಆಧಾರದ ನೇಮಕಾತಿ ನಿಯಮಗಳಿಗೆ 2021ರಲ್ಲಿ ತಿದ್ದುಪಡಿ ತಂದು ವಿಚ್ಛೇದಿತ ಪುತ್ರಿಯನ್ನೂ ಇದರೊಳಗೆ ಸೇರ್ಪಡೆಗೊಳಿಸಲಾಗಿದೆ. ಉದ್ಯೋಗಿ ಮರಣಹೊಂದಿದ ನಂತರ ವಿಚ್ಛೇದನ ಪಡೆದ ಸಂದರ್ಭದಲ್ಲಿ ಉದ್ಯೋಗಕ್ಕೆ ಪುತ್ರಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಸೌಮ್ಯಶ್ರೀ ಅವರ ವಿವಾಹ ಸಿಂಧುವಾಗಿದ್ದಾಗಲೇ 2012ರ ಮಾರ್ಚ್ 25 ರಂದು ಪಿ. ಭಾಗ್ಯಮ್ಮ ಮೃತಪಟ್ಟಿದ್ದರು. 2012ರ ಸೆಪ್ಟೆಂಬರ್ 12ರಂದು ಸೌಮ್ಯಶ್ರೀ ಅವರು ಸಮ್ಮತಿಯೊಂದಿಗೆ ವಿಚ್ಛೇದನ ಪಡೆದಿದ್ದರು.
ಅವರ ವಿಚ್ಛೇದನವನ್ನು 2013ರ ಮಾರ್ಚ್ 21 ರಂದು ಸೌಮ್ಯಶ್ರೀ ಅನುಕಂಪದ ಆಧಾರದ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಉದ್ಯೋಗ ನೀಡುವಂತೆ ರಾಜ್ಯ ಹೈಕೋರ್ಟ್ ನೀಡಿದ್ದ ನಿರ್ದೇಶನವನ್ನು ತಳ್ಳಿಹಾಕಿರುವ ಸುಪ್ರೀಂಕೋರ್ಟ್, ಅನುಕಂಪದ ಆಧಾರದ ನೇಮಕಾತಿ ನಿಯಮಗಳಿಗೆ 2021ರಲ್ಲಿ ತಿದ್ದುಪಡಿ ತರಲಾಗಿದ್ದು, ಅದರ ವ್ಯಾಪ್ತಿಗೆ ವಿಚ್ಛೇದಿತ ಪುತ್ರಿಯೂ ಸೇರುವುದರಿಂದ ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆಯುವುದಕ್ಕೆ ಅರ್ಹರಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.












Click it and Unblock the Notifications