ವಿವಾದಿತ ಕೃಷಿ ಕಾಯ್ದೆ ವಿರುದ್ಧ "ಕಪ್ಪು ಶುಕ್ರವಾರ ಪ್ರತಿಭಟನೆ ಮೆರವಣಿಗೆ"
ನವದೆಹಲಿ, ಸಪ್ಟೆಂಬರ್ 16: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ಬ್ಲಾಕ್ ಫ್ರೈ ಡೇ ಪ್ರತಿಭಟನಾ ಮೆರವಣಿಗೆ ನಡೆಸುವುದಕ್ಕೆ ಶಿರೋಮಣಿ ಅಕಾಲಿ ದಳದ ನಾಯಕರು ತೀರ್ಮಾನಿಸಿದ್ದಾರೆ.
ದೇಶದ ಬಹುಪಾಲು ರೈತರ ಕೆಂಗಣ್ಣಿಗೆ ಗುರಿಯಾಗಿರುವ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಗುರುದ್ವಾರ ರಕಾಬ್ ಗಂಜ್ ಸಾಹಿಬ್ನಿಂದ ಸಂಸತ್ತಿನವರೆಗೂ "ಬ್ಲ್ಯಾಕ್ ಫ್ರೈ ಡೇ ಪ್ರೊಟೆಸ್ಟ್ ಮಾರ್ಚ್" ನಡೆಸಲಾಗುವುದು ಎಂದು ಶಿರೋಮಣಿ ಅಕಾಲಿ ದಳ ತಿಳಿಸಿದೆ. ಶುಕ್ರವಾರ ನಡೆಯಲಿರುವ ಪ್ರತಿಭಟನಾ ಮೆರವಣಿಗೆಯನ್ನು ಶಿರೋಮಣಿ ಅಕಾಲಿ ದಳ ಪಕ್ಷದ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಮತ್ತು ಮಾಜಿ ಕೇಂದ್ರ ಸಚಿವೆ ಹರ್ ಸಿಮ್ರತ್ ಕೌರ್ ಬಾದಲ್ ನೇತೃತ್ವ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಪಂಜಾಬ್ ವಿಧಾನಸಭೆ ಚುನಾವಣೆ 2022: ಶಿರೋಮಣಿ ಅಕಾಲಿ ದಳ 64 ಅಭ್ಯರ್ಥಿಗಳ ಪಟ್ಟಿ
ಕಳೆದ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಕೂಗು ಎತ್ತಿದ್ದಾರೆ. ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪಂಜಾಬಿನಲ್ಲಿ ಪ್ರತಿಭಟಿಸಬೇಡಿ ಎಂದಿದ್ದ ಸಿಎಂ:
ಪಂಜಾಬಿನ 113 ಕಡೆಗಳಲ್ಲಿ ರೈತರು ನಿರಂತರವಾಗಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ ಉಂಟಾಗುತ್ತಿದೆ. ಪಂಜಾಬ್ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯದಲ್ಲಿ ರೈತರು ಪ್ರತಿಭಟನೆ ಮಾಡುವುದನ್ನು ನಿಲ್ಲಿಸಬೇಕು. ಹರಿಯಾಣ ಮತ್ತು ನವದೆಹಲಿಗೆ ತೆರಳಿ ಪ್ರತಿಭಟನೆ ನಡೆಸಲಿ ಎಂದು ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಹೇಳಿಕೆ ನೀಡಿದ್ದರು.
ಚಬ್ಬೇವಾಲ್ ವಿಧಾನಸಭಾ ಕ್ಷೇತ್ರದ ಮುಖ್ಲಿಯಾನಾ ಗ್ರಾಮದಲ್ಲಿ ಸರ್ಕಾರಿ ಕಾಲೇಜಿಗೆ ಶಂಕುಸ್ಥಾಪನೆ ಮಾಡಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಇದನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ಭರವಸೆ ಇದೆ. ಒಂದು ವೇಳೆ ರೈತರು ಪ್ರತಿಭಟನೆ ನಡೆಸುವುದಾದರೆ ಅಂಥವರು ಪಂಜಾಬ್ ಅನ್ನು ಬಿಟ್ಟು ಹರಿಯಾಣ ಮತ್ತು ದೆಹಲಿ ಕಡೆಗೆ ಹೋಗಲಿ ಎಂದಿದ್ದರು.
ಶಿರೋಮಣಿ ಅಕಾಲಿ ದಳದ ವಿರುದ್ಧ ಸಿಡಿಮಿಡಿ
ವಿವಾದಿತ ಕೃಷಿ ಕಾಯ್ದೆಗಳ ವಿಚಾರದಲ್ಲಿ ಶಿರೋಮಣಿ ಅಕಾಲಿ ದಳವು ರೈತರನ್ನು ವಂಚಿಸುತ್ತಿದೆ. ಈ ಹಿಂದೆ ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುವ ಸಂದರ್ಭದಲ್ಲಿ ಶಿರೋಮಣಿ ಅಕಾಲಿ ದಳದ ಒಪ್ಪಿಗೆಯನ್ನು ಪಡೆದುಕೊಳ್ಳಲಾಗಿದೆ. ಈಗ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಹಾಗೂ ಕೇಂದ್ರದ ಮಾಜಿ ಸಚಿವೆ ಹರ್ ಸಿಮ್ರತ್ ಕೌರ್ ಬಾದಲ್ ಯೂ-ಟರ್ನ್ ಹೊಡೆಯುತ್ತಿದ್ದಾರೆ ಎಂದು ಸಿಎಂ ಅಮರೀಂದರ್ ಸಿಂಗ್ ಆರೋಪಿಸಿದ್ದರು.
ಕೃಷಿ ಕಾಯ್ದೆಗಳನ್ನು ಏಕೆ ರದ್ದುಗೊಳಿಸಬಾರದು?
ಭಾರತದಲ್ಲಿ ಕಳೆದ 1950 ರಿಂದ ಈವರೆಗೂ 127 ಬಾರಿ ತಿದ್ದುಪಡಿ ಮಾಡಲಾಗಿದೆ. "ಹೀಗಿರುವಾಗ ಸಿಂಘು ಮತ್ತು ಟಿಕ್ರಿ ಗಡಿಯಲ್ಲಿ ಹೋರಾಟ ಮಾಡುತ್ತಿರುವ ರೈತರ ಹಿತದೃಷ್ಟಿಯಿಂದ ಮತ್ತೊಂದು ಬಾರಿ ಕೃಷಿ ಕಾಯ್ದೆಗಳನ್ನು ಏಕೆ ರದ್ದುಗೊಳಿಸಬಾರದು," ಎಂದು ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಪ್ರಶ್ನೆ ಮಾಡಿದ್ದಾರೆ. ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಮೃತಪಟ್ಟ ರೈತರಿಗೆ ಪಂಜಾಬ್ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಹೇಳಿದ್ದರು.
ರೈತರು ವಿರೋಧಿಸುತ್ತಿರುವ ಕೃಷಿ ಕಾಯ್ದೆಗಳು ಯಾವುವು?:
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.