'ಕಂಡಲ್ಲಿ ಗುಂಡು': ಪ್ರತಿಭಟನಾಕಾರರಿಗೆ ಸುರೇಶ್ ಅಂಗಡಿ ಎಚ್ಚರಿಕೆ
Recommended Video
ನವದೆಹಲಿ, ಡಿಸೆಂಬರ್ 18: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ವೇಳೆ ಬಂಗಾಳದ ಮುರ್ಶಿದಾಬಾದ್ ರೈಲ್ವೆ ನಿಲ್ದಾಣಕ್ಕೆ ಬೆಂಕಿ ಹಚ್ಚಿದ ಪ್ರಕರಣವನ್ನು ಖಂಡಿಸಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಇಂತಹ ಘಟನೆ ಮರುಕಳಿಸಿದರೆ ಅಧಿಕಾರಿಗಳು ಅಂತಹವರ ಮೇಲೆ ಕಂಡಲ್ಲಿ ಗುಂಡು ಹಾರಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಿಂದ ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ಬಂದ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವ ನೀಡುವ ಕಾಯ್ದೆ ವಿರುದ್ಧ ದೇಶದೆಲ್ಲೆಡೆ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಕೆಲವೆಡೆ ಪ್ರತಿಭಟನೆಗಳು ಹಿಂಸಾಚಾರಕ್ಕೂ ತಿರುಗಿವೆ. ಅದರ ಹಿನ್ನೆಲೆಯಲ್ಲಿ ಸುರೇಶ್ ಅಂಗಡಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ದೆಹಲಿಯಲ್ಲಿ ನಿಲ್ಲದ ಹಿಂಸಾಚಾರ
ಪಶ್ಚಿಮ ಬಂಗಾಳದ ಮುರ್ಶಿದಾಬಾದ್ನಲ್ಲಿರುವ ಬೆಲ್ದಂಗಾ ರೈಲ್ವೆ ನಿಲ್ದಾಣದ ಸಂಕೀರ್ಣಕ್ಕೆ ಡಿ. 13ರಂದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ರೈಲ್ವೆ ನಿಲ್ದಾಣದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆಯೂ ಹಲ್ಲೆ ನಡೆಸಿದ್ದರು.
ಭಾರತ ನೈಜ ನಾಗರಿಕರಿಗೆ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾವ ಸಮಸ್ಯೆ ಉಂಟಾಗದೆ ಇದ್ದರೂ, ಅದರಿಂದ ತೊಂದರೆಯಾಗುತ್ತದೆ ಎಂದು ಹುಯಿಲೆಬ್ಬಿಸಿ ವಿರೋಧಪಕ್ಷದವರು ಜನರನ್ನು ಪ್ರತಿಭಟನೆ ನಡೆಸುವಂತೆ ಪ್ರಚೋದಿಸುತ್ತಿದ್ದಾರೆ ಎಂದು ಸುರೇಶ್ ಅಂಗಡಿ ಮಂಗಳವಾರ ಆರೋಪಿಸಿದ್ದಾರೆ.
ಗುಂಡು ಹಾರಿಸಬಹುದು
'ಯಾರೇ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡಿದರೂ ಕಂಡಲ್ಲಿ ಗುಂಡು ಹಾರಿಸುವ ನಿರ್ಧಾರವನ್ನೂ ತೆಗೆದುಕೊಳ್ಳಬಹುದು ಎಂದು ಜಿಲ್ಲಾ ಆಡಳಿತ ಮತ್ತು ರೈಲ್ವೆ ಅಧಿಕಾರಿಗಳಿಗೆ ಹೇಳಿದ್ದೇನೆ. ಕೇಂದ್ರ ಸಚಿವನಾಗಿ ನಾನು ಈ ಸೂಚನೆ ನೀಡಿದ್ದೇನೆ' ಎಂದು ಸುರೇಶ್ ಅಂಗಡಿ ಹೇಳಿದ್ದಾರೆ.
ಈಗಾಗಲೇ ರೈಲ್ವೆಗೆ ನಷ್ಟ
ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿ ರೈಲ್ವೆ ಇಲಾಖೆ ಈಗಾಗಲೇ ತೀವ್ರ ನಷ್ಟ ಅನುಭವಿಸುತ್ತಿದೆ. ಇಂತಹ ಸಂದರ್ಭದಲ್ಲಿ ಇಲಾಖೆಯ ಆಸ್ತಿ ಪಾಸ್ತಿಗಳನ್ನು ಹಾಳುಮಾಡುವ ಈ ರೀತಿಯ ಹಿಂಸಾಚಾರಗಳನ್ನು ಸಹಿಸುವುದಿಲ್ಲ ಎಂದು ಸುರೇಶ್ ಅಂಗಡಿ ಹೇಳಿದ್ದಾರೆ.
"ಪಾಕಿಸ್ತಾನ ಪ್ರಜೆಗಳಿಗೆ ಕಾಂಗ್ರೆಸ್ ಭಾರತೀಯ ಪೌರತ್ವ ನೀಡುತ್ತಾ'?
ಕಠಿಣ ಕ್ರಮ ತೆಗೆದುಕೊಳ್ಳಬೇಕು
'ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಸಿಗಲಿ ಎಂಬ ಕಾರಣಕ್ಕೆ ಪ್ರತಿ ಹಗಲು, ರಾತ್ರಿ ಅಲ್ಲಿ 13 ಲಕ್ಷ ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಆದರೆ ವಿರೋಧ ಪಕ್ಷದವರ ಬೆಂಬಲ ಪಡೆದ ಸಮಾಜ ವಿರೋಧಿ ಶಕ್ತಿಗಳು ಸಮಸ್ಯೆಗಳನ್ನು ಸೃಷ್ಟಿಸುತ್ತಿವೆ. ವಲ್ಲಭಭಾಯ್ ಪಟೇಲ್ ತೆಗೆದುಕೊಳ್ಳುತ್ತಿದ್ದ ಕ್ರಮದಂತೆ ಪ್ರತಿಭಟನಾಕಾರರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು' ಎಂದಿದ್ದಾರೆ.
ಅಲ್ಪಸಂಖ್ಯಾತರಿಗೆ ತೊಂದರೆ ಇಲ್ಲ
'ನಾವು ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದ ಅಲ್ಪಸಂಖ್ಯಾತ ಸಮುದಾಯಗಳ ವಲಸಿಗರಿಗೆ ಭಾರತದಲ್ಲಿ ವಾಸಿಸಲು ಹಕ್ಕು ನೀಡುತ್ತಿದ್ದೇವಷ್ಟೇ. ಇದರಿಂದ ದೇಶದಲ್ಲಿರುವ ಸ್ಥಳೀಯ ಅಲ್ಪಸಂಖ್ಯಾತರಿಗೆ ಯಾವ ತೊಂದರೆಯೂ ಇಲ್ಲ. ಆದರೆ ಕೆಲವರು ವ್ಯಕ್ತಿಗಳು ಆರ್ಥಿಕತೆಯನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ' ಎಂದು ದೂರಿದ್ದಾರೆ.