Breaking; ಸಿದ್ದರಾಮಯ್ಯ ಕಾರು ತಡೆದ ದೆಹಲಿ ಪೊಲೀಸರು!
ನವದೆಹಲಿ, ಜೂನ್ 22; ಕರ್ನಾಟಕ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರನ್ನು ದೆಹಲಿಯಲ್ಲಿ ಸಂಚಾರಿ ಪೊಲೀಸರು ತಡೆದಿದ್ದಾರೆ. ಕಾರ್ಯಕರ್ತರು ವಿವರಣೆ ನೀಡಿದ ಬಳಿಕ ಮುಂದೆ ಸಾಗಲು ಅನುಮತಿ ನೀಡಿದರು.
ಬುಧವಾರ ಬೆಳಗ್ಗೆ ಸಿದ್ದರಾಮಯ್ಯ ಎಐಸಿಸಿ ಕಚೇರಿಗೆ ಹೋಗುವಾಗ ದೆಹಲಿ ಪೊಲೀಸರು ಕಾರನ್ನು ತಡೆದರು. ಆಗ ಕಾಂಗ್ರೆಸ್ ಕಾರ್ಯಕರ್ತರು ಸಹ ಕಾರಿನತ್ತ ನುಗ್ಗಿ ಬಂದರು.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುವುದನ್ನು ವಿರೋಧಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಇದಕ್ಕಾಗಿ ಸಿದ್ದರಾಮಯ್ಯ ದೆಹಲಿಗೆ ಆಗಮಿಸಿದ್ದಾರೆ.

ಕಾಂಗ್ರೆಸ್ ನಾಯಕರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಸೇರಿದಂತೆ ಕರ್ನಾಟಕದ ಶಾಸಕರು, ವಿಧಾನ ಪರಿಷತ್ ಸದಸ್ಯರು ದೆಹಲಿಗೆ ತೆರಳಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಎಲ್ಲರೂ ಸಭೆ ನಡೆಸಲಿದ್ದಾರೆ.
ಸಿದ್ದರಾಮಯ್ಯ ಈ ಸಭೆಗಾಗಿಯೇ ದೆಹಲಿಯ ಎಐಸಿಸಿ ಕಚೇರಿಗೆ ಆಗಮಿಸುತ್ತಿದ್ದರು. ಆಗ ದೆಹಲಿ ಪೊಲೀಸರು ಕಾರನ್ನು ತಡೆದರು. ಪೊಲೀಸರು ಕಾರನ್ನು ಬಿಟ್ಟ ಬಳಿಕ ಅವರು ಎಐಸಿಸಿ ಕಚೇರಿಗೆ ಆಗಮಿಸಿ ಪಕ್ಷದ ರಾಜ್ಯ ನಾಯಕರು, ಶಾಸಕರು, ಮುಖಂಡರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಭಾಗಿ; ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ರಾಹುಲ್ ಗಾಂಧಿ 5 ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸಿದ್ದಾರೆ. ಇದೇ ಪ್ರರಣದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಸಹ ಇಡಿ ವಿಚಾರಣೆ ನಡೆಸಬೇಕಿದೆ.
ಇಡಿ ವಿಚಾರಣೆ ನೆಪದಲ್ಲಿ ಕೇಂದ್ರ ಸರ್ಕಾರ ರಾಹುಲ್ ಗಾಂಧಿಗೆ ಕಿರುಕುಳ ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದ ವಿವಿಧ ರಾಜ್ಯಗಳು, ಇಡಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿತ್ತು.
ಬುಧವಾರ ದೆಹಲಿಯ ಎಐಸಿಸಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು. ರಾಹುಲ್ ಗಾಂಧಿ ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಕರ್ನಾಟಕ ಕಾಂಗ್ರೆಸ್ನ ನಾಯಕರು ಸಹ ಭಾಗವಹಿಸಿದ್ದರು.












Click it and Unblock the Notifications