ದೆಹಲಿ ಗಲಭೆ ಸಾವಿನ ಸಂಖ್ಯೆ 38; ತನಿಖೆ ಎಸ್ಐಟಿಗೆ
ನವದೆಹಲಿ, ಫೆಬ್ರವರಿ 27 : ಭಾನುವಾರದಿಂದ ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿದ್ದ ಹಿಂಸಾಚಾರ ಗುರುವಾರ ನಿಯಂತ್ರಣಕ್ಕೆ ಬಂದಿದೆ. ಗಲಭೆಯಲ್ಲಿ ಇದುವರೆಗೂ 38 ಜನರು ಸಾವನ್ನಪ್ಪಿದ್ದಾರೆ. ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವರ್ಗಾವಣೆ ಮಾಡಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಪರ, ವಿರೋಧ ಹೋರಾಟಗಾರರ ನಡುವೆ ಆರಂಭವಾದ ಘರ್ಷಣೆ ಬಳಿಕ ಕೋಮು ಗಲಭೆಯ ಸ್ವರೂಪ ಪಡೆದಿತ್ತು. ಅಂಗಡಿಗಳಿಗೆ ಬೆಂಕಿ ಹಚ್ಚಿ, ಸಿಕ್ಕ-ಸಿಕ್ಕವರ ಮೇಲೆ ಹಲ್ಲೆ ಮಾಡಿ, ಕಲ್ಲು ತೂರಾಟ ನಡೆಸಲಾಗಿತ್ತು.
ಗುಂಡಿನ ದಾಳಿ, ಕಲ್ಲು ತೂರಾಟ, ಹಲ್ಲೆಯಿಂದಾಗಿ ಪೊಲೀಸ್ ಅಧಿಕಾರಿ ಸೇರಿದಂತೆ 38 ಜನರು ಮೃತಪಟ್ಟಿದ್ದಾರೆ. ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ, ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರವನ್ನು ದೆಹಲಿ ಸರ್ಕಾರ ಘೋಷಣೆ ಮಾಡಿದೆ.

ಗಲಭೆಯಲ್ಲಿ ಗಾಯಗೊಂಡವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿಯಲ್ಲಿನ ಗಲಭೆಗೆ ಕೇಂದ್ರ ಮತ್ತು ದೆಹಲಿ ಸರ್ಕಾರಗಳು ಹೊಣೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ನಾಯಕರು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಷ್ಟ್ರಪತಿಗಳನ್ನು ಗುರುವಾರ ಭೇಟಿ ಮಾಡಿದರು.
ಗಲಭೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಗೃಹ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಬೇಕು ಎಂದು ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.












Click it and Unblock the Notifications