ಕೃಷಿ ಕಾಯ್ದೆಗೆ ಕಡಿವಾಣ ಹಾಕಲು ಸೋನಿಯಾ ಗಾಂಧಿ ಐಡಿಯಾ
ನವದೆಹಲಿ, ಸಪ್ಟೆಂಬರ್.28: ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತಾ ಕಾನೂನುಗಳ ಮೇಲೆ ಲಕ್ಷ್ಯ ವಹಿಸುವಂತೆ ಅಖಿಲ ಭಾರತ ಕಾಂಗ್ರೆಸ್ ಕಮಿಟಿ(ಎಐಸಿಸಿ) ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೂಚನೆ ನೀಡಿದ್ದಾರೆ.
ಸಂವಿಧಾನದ 254(2)ರ ಅಡಿಯಲ್ಲಿ ಕೃಷಿ ಸಂಬಂಧಿತ ಕಾಯ್ದೆಗಳನ್ನು ರದ್ದುಗೊಳಿಸುವಂತಾ ಕಾನೂನುಗಳನ್ನು ರಚಿಸಲು ಸಾಧ್ಯತೆವಿದೆಯೇ ಎನ್ನುವುದನ್ನು ಪರಿಶೀಲಿಸಬೇಕು. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಯನ್ನು ಅತಿಕ್ರಮಿಸುವಂತಾ ಕಾನೂನು ರಚಿಸುವಂತೆ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಸಿ. ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.
ರೈತರ ಆಕ್ರೋಶದ ಕಿಚ್ಚಿಗೆ ಹೊತ್ತಿಉರಿದ ಟ್ರ್ಯಾಕ್ಟರ್ ಸಾಕ್ಷಿ ಎಂದ ಸಿಎಂ
ಏಕ ಕಾಲೀನ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಜಾರಿಗೊಳಿಸಿದ ಕಾಯ್ದೆ ಅಸಮಂಜಸ ಎನಿಸಿದ್ದಲ್ಲಿ ರಾಜ್ಯ ಸರ್ಕಾರವು ಹೊಸ ಕಾಯ್ದೆಯನ್ನು ರಚಿಸುವುದಕ್ಕೆ ಅವಕಾಶವಿರುತ್ತದೆ. ಒಂದು ವೇಳೆ ಅದಕ್ಕೆ ರಾಷ್ಟ್ರಪತಿಗಳಿಂದ ಅಂಕಿತ ಹಾಕಿಸಿದ್ದಲ್ಲಿ ಆ ರಾಜ್ಯಕ್ಕೆ ರಾಜ್ಯ ಸರ್ಕಾರವು ಜಾರಿಗೊಳಿಸಿದ ಕಾಯ್ದೆಯೇ ಅನ್ವಯವಾಗಲಿದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಉಲ್ಲೇಖಿಸಿದ್ದಾರೆ.
ಭಾನುವಾರ ವಿವಾದಿತ ಮಸೂದೆಗೆ ರಾಷ್ಟ್ರಪತಿ ಅಂಕಿತ:
ಸಂಸತ್ ನಲ್ಲಿ ತೀವ್ರ ಸದ್ದು ಗದ್ದಲಕ್ಕೆ ಕಾರಣವಾದ ಕೃಷಿ ಸಂಬಂಧಿತ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾನುವಾರ ಅನುಮೋದನೆ ನೀಡಿದ್ದಾರೆ. ಇದರಿಂದ ಮೂರು ಮಸೂದೆಗಳು ಇದೀಗ ಕಾಯ್ದೆಗಳಾಗಿ ಬದಲಾಗಿವೆ. ಸಂಸತ್ ನಲ್ಲಿ ಅಂಗೀಕಾರಗೊಂಡ ಕೃಷಿ ಸಂಬಂಧಿತ ಮಸೂದೆಗಳಿಗೆ ಅಂಕಿತ ಹಾಕದಂತೆ ಕಾಂಗ್ರೆಸ್ ಮತ್ತು ಶಿರೋಮಣಿ ಆಕಾಲಿ ದಳ ಸೇರಿದಂತೆ ವಿರೋಧ ಪಕ್ಷದ ನಾಯಕರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಮನವಿ ಮಾಡಿಕೊಂಡಿದ್ದರು.
ಇದೀಗ ಕೇಂದ್ರ ಸರ್ಕಾರವು ಜಾರಿಗೊಳಿಸಿದ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಕಾಂಗ್ರೆಸ್ ಸೇರಿದಂತೆ 12ಕ್ಕೂ ಹೆಚ್ಚು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ದೇಶಾದ್ಯಂತ ಬಂದ್ ಗೆ ಕರೆ ನೀಡಿದ್ದು, ಪಂಜಾಬ್, ಹರಿಯಾಣದಲ್ಲಿ ಉಗ್ರ ಹೋರಾಟ ನಡೆಸಲಾಗುತ್ತಿದೆ. ಪಶ್ಚಿಮ ಬಂಗಾಳ, ಬಿಹಾರ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ರಸ್ತೆ ಮತ್ತು ರೈಲ್ವೆ ಹಳಿಗಳ ಮೇಲೆ ಪ್ರತಿಭಟನೆ ನಡೆಸಲಾಗುತ್ತಿದೆ.
ರಾಷ್ಟ್ರಪತಿ ಅಂಕಿತ ಹಾಕಿದ ಕಾಯ್ದೆ ಯಾವುವು?:
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೃಷಿ ಸಂಬಂಧಿತ ಮೂರು ಮಸೂದೆಗಳಿಗೆ ಅಂಕಿತ ಹಾಕಿದ್ದಾರೆ. ಈ ಮೂರು ಕೃಷಿ ಸಂಬಂಧಿತ ಕಾಯ್ದೆಗಳು ಯಾವುವು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
1. ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ
2. ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ
3. ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ