ಕಾಂಗ್ರೆಸ್ ಆಡಳಿತ ರಾಜ್ಯಗಳ ಸಿಎಂಗಳೊಂದಿಗೆ ಸೋನಿಯಾ ಗಾಂಧಿ ಸಭೆ
ನವದೆಹಲಿ, ಏಪ್ರಿಲ್ 10: ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದು, ಕೊರೊನಾ ಪರಿಸ್ಥಿತಿ ಕುರಿತ ಪರಿಶೀಲನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಶನಿವಾರ ಸಭೆ ನಡೆಸಲಿದ್ದಾರೆ.
ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು, ಇದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ, ರಾಜ್ಯಗಳಲ್ಲಿನ ಕೊರೊನಾ ಸ್ಥಿತಿಗತಿಯ ಕುರಿತು ಹಾಗೂ ಈ ಪರಿಸ್ಥಿತಿಯಲ್ಲಿ ಜನರಿಗೆ ಹೇಗೆ ನೆರವಾಗಬಹುದು ಎಂಬ ಕುರಿತು ಚರ್ಚೆ ನಡೆಸುವುದಾಗಿ ತಿಳಿದುಬಂದಿದೆ.

ಮಹಾರಾಷ್ಟ್ರ, ಒಡಿಶಾ, ಆಂಧ್ರ ಪ್ರದೇಶ, ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ, ಉತ್ತರಾಖಂಡ, ಛತ್ತೀಸ್ಗಡ, ಬಿಹಾರ ಒಳಗೊಂಡು ಹಲವು ರಾಜ್ಯಗಳು ಕೊರೊನಾ ಲಸಿಕೆ ಕೊರತೆಯನ್ನು ಎದುರಿಸುತ್ತಿವೆ. ಈ ಕುರಿತು ಸಭೆಯಲ್ಲಿ ಚರ್ಚಿಸುವುದಾಗಿ ತಿಳಿದುಬಂದಿದೆ.
ಶುಕ್ರವಾರವಷ್ಟೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೊರೊನಾ ಲಸಿಕೆ ಕೊರತೆ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಲಸಿಕೆ ಕೊರತೆ ಇರುವ ರಾಜ್ಯಗಳಿಗೆ ಲಸಿಕೆ ಪೂರೈಸಿ, ಬೇರೆ ದೇಶಗಳಿಗೆ ಲಸಿಕೆಗಳ ರಫ್ತನ್ನು ನಿಲ್ಲಿಸುವಂತೆ ಆಗ್ರಹಿಸಿದ್ದರು. ಈ ಬೆನ್ನಲ್ಲೇ ಶನಿವಾರ ಸಭೆ ಆಯೋಜಿಸಲಾಗಿದೆ.
'ರಾಜಧರ್ಮ' ಪಾಲಿಸಿ: ಮೋದಿಗೆ ಸೋನಿಯಾ ಗಾಂಧಿ ಪತ್ರ
ಈ ಮುನ್ನ ಏಪ್ರಿಲ್ 11ರಿಂದ 14ರವರೆಗೂ ಲಸಿಕೆ ಉತ್ಸವವನ್ನು ಹಮ್ಮಿಕೊಳ್ಳುವುದಾಗಿ ನರೇಂದ್ರ ಮೋದಿಯವರು ತಿಳಿಸಿದ್ದು, ಇದು ಗಂಭೀರ ವಿಷಯ. ಉತ್ಸವವಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದರು.
ಬಿಜೆಪಿ ಆಡಳಿತವಿರದ ರಾಜ್ಯಗಳಿಗೆ ಸಮರ್ಪಕವಾಗಿ ಕೊರೊನಾ ಲಸಿಕೆಗಳನ್ನು ಪೂರೈಸುತ್ತಿಲ್ಲ ಎಂದು ಮಹಾರಾಷ್ಟ್ರ ಗುರುವಾರ ದೂರಿತ್ತು.












Click it and Unblock the Notifications