ಕುತೂಹಲ ಮೂಡಿಸಿದ ಜೆ.ಪಿ. ನಡ್ಡಾ, ಬಿ.ಸಿ. ಪಾಟೀಲ್ ಭೇಟಿ!
ಬೆಂಗಳೂರು, ಸೆ. 09: ಇದೇ ವಾರದಲ್ಲಿ ದೆಹಲಿಗೆ ಭೇಟಿ ಕೊಟ್ಟು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಅದಕ್ಕೂ ಮೊದಲೇ ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ. ವಿಧಾನ ಮಂಡಲ ಅಧಿವೇಶನಕ್ಕೂ ಮೊದಲು ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಯಡಿಯೂರಪ್ಪ ಪ್ರಯತ್ನ ನಡೆಸಿದ್ದಾರೆ ಎಂಬ ಮಾಹಿತಿಯಿದೆ. ಹೀಗಾಗಿ ಜೆ.ಪಿ. ನಡ್ಡಾ ಹಾಗೂ ಬಿ.ಸಿ. ಪಾಟೀಲ್ ಅವರ ಭೇಟಿಗೆ ಹೆಚ್ಚಿನ ಮಹತ್ವ ಬಂದಿದೆ. ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದರಲ್ಲಿ ಸಚಿವ ಬಿ.ಸಿ. ಪಾಟೀಲ್ ಅವರ ಪಾತ್ರ ಕೂಡ ಮಹತ್ವದ್ದು.
ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಎಚ್. ವಿಶ್ವನಾಥ್, ಆರ್. ಶಂಕರ್ ಅವರು ಮಂತ್ರಿಯಾಗಲು ತೀವ್ರ ಪ್ರಯತ್ನ ನಡೆಸಿದ್ದಾರೆ. ಬಿ.ಸಿ. ಪಾಟೀಲ್ ಅವರೊಂದಿಗೆ ರಾಜೀನಾಮೆ ಕೊಟ್ಟಿರುವ ಈ ಮೂವರಿಗೂ ಇನ್ನೂ ಮಂತ್ರಿ ಪದವಿ ಭಾಗ್ಯ ಸಿಕ್ಕಿಲ್ಲ. ಮಂತ್ರಿ ಸ್ಥಾನಕ್ಕೆ ಇವರೆಲ್ಲರೂ ಸಿಎಂ ಯಡಿಯೂರಪ್ಪ ಅವರ ಮೇಲೆ ಒತ್ತಡ ಹಾಕಿದ್ದಾರೆ. ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗುವಂತೆ ರಾಜೀನಾಮೆ ಕೊಟ್ಟಿದ್ದ ಎಲ್ಲ 17 ಜನರ ಅಭಿಪ್ರಾಯವನ್ನು ಬಿಜೆಪಿ ಹೈಕಮಾಂಡ್ ಗಮನಕ್ಕೆ ಬಿ.ಸಿ ಪಾಟೀಲ್ ಅವರು ಭೇಟಿ ಸಂದರ್ಭದಲ್ಲಿ ತಂದಿದ್ದಾರೆ ಎನ್ನಲಾಗಿದೆ. ಆದರೆ ಇದೊಂದು ಸೌಹಾರ್ಧದ ಭೇಟಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಮಾಧ್ಯಮ ವಿಭಾಗ ತಿಳಿಸಿದೆ.
ಈ ಆರು ತಿಂಗಳಿನಲ್ಲಿ ಇಲಾಖೆಯಲ್ಲಿ ಮಾಡಿದ ಪ್ರಗತಿಯನ್ನು ಕಂಡು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ರೈತರಿಗೆ ಮತ್ತು ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾದಂತೆ ಕೃಷಿಕರಿಗೆ ಸಹಾಯ ಮಾಡಿದ್ದನ್ನು ಅವರು ಶ್ಲಾಘಿಸಿದರು. ರೈತ ಬೆಳೆ ಸಮೀಕ್ಷೆ ಆ್ಯಪ್, ಅಗ್ರಿ ಸ್ಟಾರ್ಟ್ಅಪ್ ಸೇರಿದಂತೆ ಹಲವಾರು ಪ್ರಗತಿಪರ ಯೋಜನೆಗಳನ್ನು ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿಗೊಳಿಸಲಾಗಿದೆ. ಇವನ್ನು ದೇಶದ ಇತರೆ ರಾಜ್ಯಗಳಲ್ಲಿಯೂ ಸಹ ಅಳವಡಿಕೆಗೆ ಚಿಂತನೆ ನಡೆಸಲಾಗಿರುವ ಬಗ್ಗೆಯೂ ರಾಷ್ಟ್ರೀಯ ಅಧ್ಯಕ್ಷರು ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ಇದೇ ವೇಳ ಕರ್ನಾಟಕದ ರಾಜಕೀಯ ವಿದ್ಯಮಾನಗಳನ್ನು ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಹಂಚಿಕೊಳ್ಳಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುವ ಬಗ್ಗೆಯೂ ಬಿ.ಸಿ. ಪಾಟೀಲ್ ಅವರೊಂದಿಗೆ ಚರ್ಚಿಸಿದರು ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಅವರ ಮಾಧ್ಯಮ ವಿಭಾಗ ಮಾಹಿತಿ ಕೊಟ್ಟಿದೆ.