ಬೆಳ್ಳಂದೂರು ಕೆರೆ ಮಾಲಿನ್ಯಕ್ಕೆ ಎನ್ ಜಿಟಿಯಿಂದ ರಾಜ್ಯ ಸರಕಾರದ ತರಾಟೆ
ಬೆಂಗಳೂರಿನ ಬೆಳ್ಳಂದೂರು ಕೆರೆಗೆ ತಕ್ಷಣದಿಂದಲೇ ಕಲುಷಿತ ನೀರು ಹರಿಸುವುದನ್ನು ನಿಲ್ಲಿಸಿ. ಇಲ್ಲದಿದ್ದರೆ ನಮ್ಮ ಆದೇಶದ ನಿರ್ಲಕ್ಷ್ಯ ಎಂದು ಭಾವಿಸಬೇಕಾಗುತ್ತದೆ ಎಂದು ರಾಷ್ಟ್ರೀಯ ಹಸಿರು ಪೀಠ ಕರ್ನಾಟಕ ಸರಕಾರಕ್ಕೆ ಎಚ್ಚರ ನೀಡಿದೆ
ನವದೆಹಲಿ, ಏಪ್ರಿಲ್ 13: ಕರ್ನಾಟಕ ಸರಕಾರಕ್ಕೆ ರಾಷ್ಟ್ರೀಯ ಹಸಿರು ಮಂಡಳಿ (ಎನ್ ಜಿಟಿ) ಖಡಕ್ ಎಚ್ಚರಿಕೆ ನೀಡಿದೆ. ಬೆಂಗಳೂರಿನ ಬೆಳ್ಳಂದೂರು ಕೆರೆಗೆ ಕಲುಷಿತ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ನಮ್ಮ ಆದೇಶದ ಬಗ್ಗೆ ನಿರ್ಲಕ್ಷ್ಯ ಮಾಡಲಾಗಿದೆ ಎಂದೇ ಪರಿಗಣಿಸುತ್ತೇವೆ ಎಂದು ಹೇಳಿದೆ.
ಕಳೆದ ಫೆಬ್ರವರಿ 16ನೇ ತಾರೀಕು ಬೆಳ್ಳಂದೂರು ಕೆರೆಯಲ್ಲಿ ನೊರೆ ಪ್ರಮಾಣ ವಿಪರೀತ ಹೆಚ್ಚಾಗಿ ಬೆಂಕಿ ಹೊತ್ತಿಕೊಂಡಿತ್ತು. ಇದರಿಂದ ಕೆರೆಯ ಅಕ್ಕಪಕ್ಕದ ಪ್ರದೇಶದ ನಿವಾಸಿಗಳಿಗೆ ಸಮಸ್ಯೆಯಾಗಿತ್ತು. ಆ ನಂತರ ನ್ಯಾಯಮೂರ್ತಿ ಸ್ವತಂತ್ರಕುಮಾರ್ ನೇತೃತ್ವದ ಪೀಠ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು.[ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಕಾಣಿಸಿಕೊಂಡ ಬೆಂಕಿ]
ಬುಧವಾರ ವಿಚಾರಣೆ ನಡೆದ ವೇಳೆ ಕೆರೆಯ ಸ್ಥಿತಿಗೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಕರ್ನಾಟಕ ಕೆರೆ ಅಭಿವೃದ್ಧಿ ಪ್ರಾಧಿಕಾರದ ಬಗ್ಗೆ ಕೂಡ ಆಕ್ಷೇಪ ಸೂಚಿಸಿತು. ಕೆರೆಯಲ್ಲಿ ಬೆಂಕಿ ಕಾಣಿಸಿಕೊಳ್ಳಲು ಪ್ರಾಧಿಕಾರದ ನಿರ್ಲಕ್ಷ್ಯವೇ ಕಾರಣ ಎಂದಿತು. ಈ ರೀತಿ ಕೆರೆಯಲ್ಲಿ ಬೆಂಕಿ ಹೊತ್ತಿಕೊಳ್ಳದಂತೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಪೀಠವು ಪ್ರಶ್ನಿಸಿತು.
ಮುಂದಿನ ವಿಚಾರಣೆಗೆ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಜರಾಗಬೇಕು ಎಂದು ಸೂಚಿಸಲಾಯಿತು.