ಸುನಂದಾ ಪುಷ್ಕರ್ ಕೇಸ್ : ಸ್ವಾಮಿ ಅರ್ಜಿ ತಿರಸ್ಕರಿಸಿದ ಹೈಕೋರ್ಟ್
ನವದೆಹಲಿ, ಅಕ್ಟೋಬರ್ 26 : ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರ ಹತ್ಯೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರದಂದು ತಿರಸ್ಕರಿಸಿದೆ.
ಸುನಂದಾ ಪುಷ್ಕರ್ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷ್ಯ ಹಾಗೂ ಮಾಹಿತಿಯನ್ನು ಬಚ್ಚಿಡಲಾಗಿದೆ. ಹೀಗಾಗಿ, ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಸಲು ಪೊಲೀಸರಿಗೆ ಸಾಧ್ಯವಾಗಿಲ್ಲ ಎಂದು ಸ್ವಾಮಿ ಆರೋಪಿಸಿದ್ದೆರೆ. ಈ ಕುರಿತಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಾಕಿದ್ದರು.

ಪಿಐಎಲ್ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಸ್ವಾಮಿ ಅವರ ಅರ್ಜಿ ರಾಜಕೀಯ ದುರುದ್ದೇಶದಿಂದ ಕೂಡಿದೆ. ಪೂರ್ವಗ್ರಹ ಪೀಡಿತವಾಗಿದೆ ಎಂದು ಪರಿಗಣಿಸಿ, ಅರ್ಜಿಯನ್ನು ತಿರಸ್ಕರಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುನಂದಾ ಅವರ ಪತಿ ಶಶಿ ತರೂರ್ ಅವರು ಯಾವುದೇ ಪ್ರಭಾವ ಬೀರಿಲ್ಲ, ತನಿಖೆಗೆ ಅಡ್ಡಿ ಪಡಿಸಿಲ್ಲ ಎಂದು ದೆಹಲಿ ಪೊಲೀಸರು, ಹೈಕೋರ್ಟಿಗೆ ವರದಿ ಸಲ್ಲಿಸಿದ್ದಾರೆ.
ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಪತ್ನಿ ಸುನಂದಾ ಅವರು ದೆಹಲಿಯ ಲೀಲಾ ಹೋಟೆಲ್ ನಲ್ಲಿ ಜನವರಿ 17, 2014ರಂದು ಶವವಾಗಿ ಪತ್ತೆಯಾಗಿದ್ದರು. ಸುನಂದಾ ಅವರ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿ ಬಿಜೆಪಿ ಮುಖಂಡ ಸ್ವಾಮಿ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ.(ಪಿಟಿಐ)












Click it and Unblock the Notifications