ಸುನಂದಾ ಪುಷ್ಕರ್ ಪ್ರಕರಣ: ಶಶಿ ವಿರುದ್ಧ ಆರೋಪ ಆ.18ಕ್ಕೆ ತೀರ್ಪು
ನವದೆಹಲಿ, ಜುಲೈ 28: ಸುನಂದಾ ಪುಷ್ಕರ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ಆರೋಪ ನಿಗದಿಗೆ ಸಂಬಂಧಿಸಿದ ತೀರ್ಪು ಪ್ರಕಟಣೆಯನ್ನು ವಿಶೇಷ ನ್ಯಾಯಾಲಯವು ಆಗಸ್ಟ್ 18ಕ್ಕೆ ಮುಂದೂಡಿದೆ.
ದೆಹಲಿಯಲ್ಲಿರುವ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಲಯವು ಮಂಗಳವಾರ ಮುಂದೂಡಿದೆ. ಶಶಿ ತರೂರ್ ವಿರುದ್ಧ ಆರೋಪ ನಿಗದಿಗೆ ಸಂಬಂಧಿಸಿದ ತೀರ್ಪನ್ನು ಐದನೇ ಬಾರಿಗೆ ನ್ಯಾಯಾಲಯವು ಮುಂದೂಡಿದೆ. ಏಪ್ರಿಲ್ 29, ಮೇ 19, ಜೂನ್ 16ರಂದು ಕೋವಿಡ್ನಿಂದಾಗಿ ಮುಂದೂಡಲಾಗಿತ್ತು. ಲಿಖಿತ ಪ್ರತಿಕ್ರಿಯೆ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡುವಂತೆ ಪ್ರಾಸಿಕ್ಯೂಷನ್ ಕೋರಿದ ಹಿನ್ನೆಲೆಯಲ್ಲಿ ಜುಲೈ 2ರಂದು ಪ್ರಕರಣದ ತೀರ್ಪು ಪ್ರಕಟಣೆಯನ್ನು ಮುಂದೂಡಲಾಗಿತ್ತು.
2014ರ ಜನವರಿಯಲ್ಲಿ ನವದೆಹಲಿಯ ಪಂಚತಾರಾ ಹೋಟೆಲ್ನ ಕೋಣೆಯೊಂದರಲ್ಲಿ ಸುನಂದಾ ಶವವಾಗಿ ಪತ್ತೆಯಾಗಿದ್ದರು. ಇದನ್ನು ಆಧರಿಸಿ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡ ಹಿನ್ನೆಲೆಯಲ್ಲಿ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ದೆಹಲಿ ಪೊಲೀಸರು ಸೆಕ್ಷನ್ 498 ಎ (ಕ್ರೌರ್ಯ) ಮತ್ತು 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಅಥವಾ ಪರ್ಯಾಯವಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಆರೋಪಗಳನ್ನು ನಿಗದಿಪಡಿಸುವಂತೆ ನ್ಯಾಯಾಲಯವನ್ನು ಕೋರಿದ್ದರು. ವಿಷದಿಂದ ಹಾಗೂ ಅಲ್ಪ್ರಾಕ್ಸ್ ಸೇವನೆಯಿಂದಾಗಿ ಆಕೆ ಸಾವನ್ನಪ್ಪಿದ್ದಾರೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ವಾದಿಸಿದ್ದರು. ಆದರೆ ಆಕ್ಷೇಪಿಸಲಾದ ಔಷಧ ಸುನಂದಾ ದೇಹದಲ್ಲಿ ಪತ್ತೆಯಾಗಿಲ್ಲ ಎಂದು ವಿಧಿ ವಿಜ್ಞಾನ ವರದಿಗಳು ಹೇಳುತ್ತಿರುವುದಾಗಿ ಹಿರಿಯ ವಕೀಲ ವಿಕಾಸ್ ಪಹ್ವಾ ತಿಳಿಸಿದ್ದರು.
ಸುನಂದಾ ಪುಷ್ಕರ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರಿಗೆ 2018ರ ಜುಲೈ 5 ರಂದು ಜಾಮೀನು ಮಂಜೂರಾಗಿದೆ. ತಮ್ಮ ವಿರುದ್ಧವಿರುವ ಆರೋಪ ಕೈಬಿಡುವಂತೆ ಮನವಿ ಮಾಡಿದ್ದಾರೆ.