ಸುನಂದಾ ಪುಷ್ಕರ್ ಕೇಸ್: ಶಶಿ ತರೂರ್ ಗೆ ನಿರೀಕ್ಷಣಾ ಜಾಮೀನು
ನವದೆಹಲಿ, ಜುಲೈ 05: ಸುನಂದಾ ಪುಷ್ಕರ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಸುನಂದಾ ಅವರ ಪತಿ ಶಶಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಗುರುವಾರ ಬೆಳಗ್ಗೆ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ಶ್ಯೂರಿಟಿ, ವೈಯಕ್ತಿಕ ಬಾಂಡ್ ನೀಡಿ ಜಾಮೀನು ಪಡೆಯಲು ಸೂಚಿಸಲಾಗಿದೆ.
ಈ ಪ್ರಕರಣದಲ್ಲಿ ತರೂರ್ ಅವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಹಾಗೂ ಕ್ರೌರ್ಯದ ಆರೋಪಗಳನ್ನು ಹೊರಿಸಲಾಗಿದೆ. ಜುಲೈ 7ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಅವರಿಗೆ ಸೂಚಿಸಲಾಗಿತ್ತು. ಪ್ರಕರಣದಲ್ಲಿ ಸಲ್ಲಿಸಲಾದ ದೋಷಾರೋಪವನ್ನು ಸಹ ಕೋರ್ಟ್ ಪರಿಗಣನೆಗೆ ತೆಗೆದುಕೊಂಡಿದೆ.
ಪ್ರಕರಣದ ವಿಚಾರಣೆ ನಡೆಸುತ್ತಿದ್ದ ದೆಹಲಿ ಕೋರ್ಟ್, ಮೇ 24ರಂದು ಪ್ರಕರಣವನ್ನು ಹೆಚ್ಚುವರಿ ಮುಖ್ಯ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಧೀಶ ಸಮರ್ ವಿಶಾಲ್ ಅವರಿಗೆ ವರ್ಗಾಯಿಸಿತ್ತು.
2014 ರ ಜನವರಿ 14 ರಂದು ದೆಹಲಿಯ ಪಂಚತಾರಾ ಹೋಟೆಲ್ ವೊಂದರಲ್ಲಿ ಸುನಂದಾ ಪುಷ್ಕರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಅವರು ಆತ್ಮಹತ್ಯೆ ಮಾಡಿಕೊಂದಿದ್ದಾರೆಂದು ಹೇಳಲಾಗಿತ್ತಾದರೂ, ಇದು ಅಸಹಜ ಸಾವು ಎಂದು ನಂತರ ದೂರು ದಾಖಲಾಗಿತ್ತು. ಶಶಿ ತರೂರ್ ವಿರುದ್ಧ ಭಾರತೀಯ ದಂಡ ಸಂಹಿತೆಯ 306 (ಆತ್ಮಹತ್ಯೆಗೆ ಕುಮ್ಮಕ್ಕು), 498 A (ಪತಿ ಅಥವಾ ಪತಿಯ ಸಂಬಂಧಿಕರಿಂದ ಮಹಿಳೆಯ ಮೇಲೆ ನಡೆಯುವ ಕ್ರೌರ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.