370ನೇ ವಿಧಿ ರದ್ದು: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್
ನವದೆಹಲಿ, ಆಗಸ್ಟ್ 28: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕುವ ಸಲುವಾಗಿ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
370ನೇ ವಿಧಿ ರದ್ದತಿ ವಿರುದ್ಧ ಸಲ್ಲಿಸಲಾಗಿರುವ ವಿವಿಧ ಅರ್ಜಿಗಳನ್ನು ಬುಧವಾರ ವಿಚಾರಣೆಗೆ ಎತ್ತಿಕೊಂಡ ಐವರು ನ್ಯಾಯಮೂರ್ತಿಗಳ ನ್ಯಾಯಪೀಠ, ಕೇಂದ್ರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಮಾಧ್ಯಮಗಳ ಮೇಲಿನ ನಿರ್ಬಂಧ ಸಡಿಲಿಸಬೇಕು ಎಂದು 'ಕಾಶ್ಮೀರ ಟೈಮ್ಸ್'ನ ಕಾರ್ಯನಿರ್ವಾಹಕ ಸಂಪಾದಕಿ ಅನುರಾಧಾ ಬಸೀನ್ ಅರ್ಜಿ ಸಲ್ಲಿಸಿದ್ದರು. ಅದನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಈ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಕಣಿವೆ ರಾಜ್ಯದಲ್ಲಿ ಅಂತರ್ಜಾಲ, ಸ್ಥಿರ ದೂರವಾಣಿ ಮತ್ತು ಇತರೆ ಸಂವಹನ ಸಾಧನಗಳ ಮೇಲೆ ವಿಧಿಸಿರುವ ನಿರ್ಬಂಧಗಳನ್ನು ಸಡಿಲಿಸುವ ಕುರಿತು ಏಳು ದಿನಗಳ ಒಳಗೆ ವಿಸ್ತೃತ ಪ್ರತಿಕ್ರಿಯೆ ನೀಡುವಂತೆ ಅದು ನಿರ್ದೇಶಿಸಿದೆ.
ಒಟ್ಟು 14 ಅರ್ಜಿಗಳು ದಾಖಲಾಗಿದ್ದು, ಅವುಗಳಲ್ಲಿ ಎರಡು ಅರ್ಜಿಗಳು ಹೇಬಿಯಸ್ ಕಾರ್ಪಸ್ ಆಗಿವೆ. ಸುಪ್ರೀಂಕೋರ್ಟ್ನ ಸಾಂವಿಧಾನಿಕ ಪೀಠವು ಅಕ್ಟೋಬರ್ ಮೊದಲ ವಾರದಲ್ಲಿ ಈ ಅರ್ಜಿಗಳ ವಿಚಾರಣೆ ನಡೆಸಲಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದರ ವಿರುದ್ಧ ಸಲ್ಲಿಸಲಾಗಿರುವ ಆಕ್ಷೇಪಕ್ಕೆ ಪ್ರತಿಕ್ರಿಯೆ ನೀಡುವಂತೆ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಸೂಚನೆ ನೀಡಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಉಸ್ತುವಾರಿಯೊಬ್ಬರನ್ನು ನೇಮಕ ಮಾಡುವ ಕುರಿತು ಕೇಂದ್ರ ಸರ್ಕಾರ ಮಾಡಿದ್ದ ಮನವಿಯನ್ನು ಕೋರ್ಟ್ ನಿರಾಕರಿಸಿದೆ.












Click it and Unblock the Notifications