ಸಿಬಿಐ ವಿವಾದ: ವಿಚಾರಣೆಯಿಂದ ಹಿಂದೆ ಸರಿದ ಮತ್ತೊಬ್ಬ ನ್ಯಾಯಮೂರ್ತಿ
ನವದೆಹಲಿ, ಜನವರಿ 24: ಸಿಬಿಐ ಮಧ್ಯಂತರ ನಿರ್ದೇಶಕರನ್ನಾಗಿ ನೇಮಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಹಿಂದೆ ಸರಿದಿದ್ದಾರೆ.
ಅರ್ಜಿಯ ಮೊದಲ ವಿಚಾರಣೆ ವೇಳೆ, ತಾವು ಸಿಬಿಐ ಮುಖ್ಯಸ್ಥರನ್ನು ಆಯ್ಕೆ ಮಾಡುವ ಉನ್ನತ ಮಟ್ಟದ ಆಯ್ಕೆ ಸಮಿತಿಯಲ್ಲಿ ಇರುವುದರಿಂದ ಈ ಪ್ರಕರಣದ ವಿಚಾರಣೆಯಲ್ಲಿ ಭಾಗಿಯಾಗಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಈ ಮೊದಲು ವಿಚಾರಣೆಯಿಂದ ಹಿಂದೆ ಸರಿದಿದ್ದರು.
ಆದರೆ, ಅಲೋಕ್ ವರ್ಮಾ ಅವರನ್ನು ಸ್ಥಾನದಿಂದ ವಜಾಗೊಳಿಸುವ ಪ್ರಕ್ರಿಯೆಯಲ್ಲಿ ಉನ್ನತ ಮಟ್ಟದ ಆಯ್ಕೆ ಸಮಿತಿಯ ಸಭೆಯಿಂದಲೂ ಮುಖ್ಯ ನ್ಯಾಯಮೂರ್ತಿ ಹಿಂದಕ್ಕೆ ಸರಿದಿದ್ದರು. ಅವರ ಬದಲು ನ್ಯಾಯಮೂರ್ತಿ ಎ.ಕೆ. ಸಿಕ್ರಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.

ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ ಕೇಂದ್ರ ಸರ್ಕಾರದ ಆದೇಶ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದ ಸುಪ್ರೀಂಕೋರ್ಟ್, ಷರತ್ತಿನ ಮೇರೆಗೆ ಅಲೋಕ್ ವರ್ಮಾ ಅವರನ್ನು ಮರಳಿ ಸಿಬಿಐ ಮುಖ್ಯಸ್ಥರ ಹುದ್ದೆಗೆ ನಿಯೋಜಿಸಿತ್ತು. ಸಿಬಿಐ ಮುಖ್ಯಸ್ಥರ ನೇಮಕಾತಿ ಮತ್ತು ವಜಾಗೊಳಿಸುವ ಎರಡೂ ಅಧಿಕಾರ ಆಯ್ಕೆ ಸಮಿತಿಗೆ ಮಾತ್ರ ಇದೆ ಎಂದು ಹೇಳಿತ್ತು.
ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರನ್ನು ಒಳಗೊಂಡ ಆಯ್ಕೆ ಸಮಿತಿ ವರ್ಮಾ ಅವರನ್ನು ವಜಾಗೊಳಿಸಿತ್ತು. ಈ ಸ್ಥಾನಕ್ಕೆ ಮಧ್ಯಂತರ ಮುಖ್ಯಸ್ಥರನ್ನಾಗಿ ಎಂ. ನಾಗೇಶ್ವರ ರಾವ್ ಅವರನ್ನು ನೇಮಿಸಿತ್ತು.












Click it and Unblock the Notifications