ನ್ಯಾ.ಲೋಯಾ ಸಾವು: ತೀರ್ಪು ಮರುಪರಿಶೀಲನಾ ಅರ್ಜಿ ತಿರಸ್ಕರಿಸಿದ ಸುಪ್ರೀಂ
ನವದೆಹಲಿ, ಜುಲೈ 31: ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಬಿ.ಎಚ್. ಲೋಯಾ ಅವರ ಸಾವಿನ ಪ್ರಕರಣದಲ್ಲಿನ ತನ್ನ ಹಿಂದಿನ ತೀರ್ಪನ್ನು ಮರುಪರಿಶೀಲಿಸಲು ನಿರಾಕರಿಸಿದೆ.
ಲೋಯಾ ಅವರದು ಸಹಜ ಸಾವಾಗಿದ್ದು, ಅವರ ಸಾವಿನ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ರಾಜಕೀಯ ಕಾರಣಗಳನ್ನು ಹಾಗೂ ನ್ಯಾಯಾಂಗಕ್ಕೆ ಕೆಟ್ಟ ಹೆಸರು ತರುವ ಉದ್ದೇಶ ಹೊಂದಿದೆ ಎಂದು ಏಪ್ರಿಲ್ನಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು.
ತನ್ನ ತೀರ್ಪನ್ನು ಮರುಪರಿಶೀಲನೆ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ಮರುಪರಿಶೀಲನಾ ಅರ್ಜಿಯ ವಿವರಗಳನ್ನು ಹಾಗೂ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ಆದರೆ, ಈ ಹಿಂದಿನ ತೀರ್ಪನ್ನು ಮರುಪರಿಶೀಲಿಸಲು ಯಾವುದೇ ಕಾರಣಗಳು ಸಿಗುತ್ತಿಲ್ಲ. ಹೀಗಾಗಿ ಅದನ್ನು ತಿರಸ್ಕರಿಸಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ಡಿವೈ ಚಂದ್ರಚೂಡ ಅವರನ್ನು ಒಳಗೊಂಡ ನ್ಯಾಯಪೀಠ ಹೇಳಿದೆ.
ನ್ಯಾಯಮೂರ್ತಿ ಲೋಯಾ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದಿಂದ ವಿಚಾರಣೆ ನಡೆಸಬೇಕು ಎಂದು ಮನವಿ ಸಲ್ಲಿಸಿದ್ದ ಅರ್ಜಿದಾರರಲ್ಲಿ ಒಬ್ಬರಾದ ಬಾಂಬೆ ವಕೀಲರ ಸಂಘವು ಸುಪ್ರೀಂಕೋರ್ಟ್ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು.
ನ್ಯಾಯ ಹಾಗೂ ವ್ಯಾಪಕ ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಈ ಪ್ರಕರಣದ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸುವುದನ್ನು ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಅರ್ಜಿದಾರರ ಪರ ವಕೀಲ ದುಷ್ಯಂತ್ ದವೆ ವಾದಿಸಿದ್ದರು.

ಸೊಹ್ರಾಬುದ್ದೀನ್ ನಕಲಿ ಎನ್ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಎಚ್. ಲೋಯಾ ಅವರು 2014ರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.
ಆದರೆ, ಅವರ ಸಾವಿನ ಹಿಂದೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದ್ದವು. ಇದು ಸಹಜ ಸಾವಲ್ಲ. ವ್ಯವಸ್ಥಿತ ಕೊಲೆ. ಇದರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕೈವಾಡವಿದೆ ಎಂದು ಆರೋಪಿಸಲಾಗಿತ್ತು.












Click it and Unblock the Notifications