ಚೌಕಿದಾರ್ ಚೋರ್ ಹೈ: ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್
ನವದೆಹಲಿ, ಮೇ 10: ರಫೇಲ್ ಒಪ್ಪಂದದ ಕುರಿತಾದ ತನ್ನ ತೀರ್ಪನ್ನು ಮರುಪರಿಶೀಲನೆಗೆ ಒಪ್ಪಿಕೊಂಡ ಬಳಿಕ, 'ಚೌಕಿದಾರ ಕಳ್ಳ' ಎಂಬುದನ್ನು ಸುಪ್ರೀಂಕೋರ್ಟ್ ಕೂಡ ಹೇಳಿದೆ ಎಂದು ಹೇಳಿಕೆ ನೀಡಿರುವುದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ.
ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ಸಲ್ಲಿಸಿದ್ದ ಅರ್ಜಿಯ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾಯಮೂರ್ತಿಗಳಾದ ಎಸ್ಕೆ ಕೌಲ್ ಮತ್ತು ಕೆಎಂ ಜೋಸೆಫ್ ಅವರನ್ನು ಒಳಗೊಂಡ ನ್ಯಾಯಪೀಠ, ತೀರ್ಪನ್ನು ಕಾಯ್ದಿರಿಸಿತು.
ಎರಡು ವಾರಗಳ ಒಳಗೆ ಲಿಖಿತ ಹೇಳಿಕೆ ದಾಖಲಿಸುವಂತೆ ಎರಡೂ ಕಡೆದ ವಾದಿಗಳಿಗೆ ನ್ಯಾಯಪೀಠ ಸೂಚಿಸಿತು.

ಸುಪ್ರೀಂಕೋರ್ಟ್, 'ಚೌಕಿದಾರ್ ಚೋರ್ ಹೈ' ಎಂದು ಹೇಳಿದೆ ಎಂಬುದಾಗಿ ಹೇಳುವ ಮೂಲಕ ರಾಹುಲ್ ಗಾಂಧಿ ಸಾರ್ವಜನಿಕರನ್ನು ದಾರಿತಪ್ಪಿಸುತ್ತಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಸಾರ್ವಜನಿಕವಾಗಿ ಕ್ಷಮೆ ಕೇಳುವಂತೆ ಸುಪ್ರೀಂಕೋರ್ಟ್ ಆದೇಶ ನೀಡಬೇಕು ಎಂದು ಮೀನಾಕ್ಷಿ ಲೇಖಿ ಅವರ ಪರ ವಕೀಲ ಮುಕುಲ್ ರೋಹಟಗಿ ಹೇಳಿದರು.
ರಾಹುಲ್ ಪರ ಹಾಜರಿದ್ದ ವಕೀಲ ಅಭಿಷೇಕ್ ಮನು ಸಿಂಘ್ವಿ, ರಾಹುಲ್ ಗಾಂಧಿ ಅವರು ರಾಜಕೀಯವಾಗಿ ತಮ್ಮ ನಿಲುವಿಗೆ ಬದ್ಧರಾಗಿದ್ದಾರೆ. ಆದರೆ, ಸುಪ್ರೀಂಕೋರ್ಟ್ ಅನ್ನು ಉಲ್ಲೇಖಿಸಿರುವುದರ ಬಗ್ಗೆ ಕ್ಷಮೆ ಕೋರಿದ್ದಾರೆ ಎಂದರು.
ಇದಕ್ಕೂ ಮೊದಲು ರಾಹುಲ್ ಗಾಂಧಿ ಅವರು ಸುಪ್ರೀಂಕೋರ್ಟ್ ಹೆಸರನ್ನು ತಪ್ಪಾಗಿ ಉಲ್ಲೇಖಿಸಿದ್ದಕ್ಕೆ ವಿಷಾದ ವ್ಯಕ್ತಪಡಿಸಿ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರ ಮೂಲಕ ಅಫಿಡವಿಟ್ ಸಲ್ಲಿಸಿದ್ದರು. ಇದಕ್ಕೆ ಕಿಡಿಕಾರಿದ್ದ ಸುಪ್ರೀಂಕೋರ್ಟ್, ವಿಷಾದ ವ್ಯಕ್ತಪಡಿಸಲು ಇಷ್ಟು ಸುದೀರ್ಘ ಅಫಿಡವಿಟ್ ಬೇಕೇ ಎಂದು ಕೇಳಿತ್ತು. ಬಳಿಕ ರಾಹುಲ್ ಗಾಂಧಿ ನ್ಯಾಯಾಲಯದ ಕ್ಷಮೆ ಕೋರಿ ಅಫಿಡವಿಟ್ ಸಲ್ಲಿಸಿದ್ದರು.












Click it and Unblock the Notifications