ಎಸ್ಸಿ, ಎಸ್ಟಿ ಕೋಟಾ: ತೀರ್ಪು ಮರುಪರಿಶೀಲಿಸಲು ಮುಂದಾದ ಸುಪ್ರೀಂಕೋರ್ಟ್
ನವದೆಹಲಿ, ಆಗಸ್ಟ್ 27: ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾತಿಯಲ್ಲಿ ಕೋಟಾ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಉಪ ವರ್ಗೀಕರಣ ಮಾಡಲು ರಾಜ್ಯಗಳಿಗೆ ಅಧಿಕಾರವಿಲ್ಲ ಎಂಬ ತನ್ನ 2004ರ ತೀರ್ಪನ್ನು ಮರುಪರಿಶೀಲನೆ ಮಾಡಬೇಕಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಇ.ವಿ. ಚಿನ್ನಯ್ಯ ಪ್ರಕರಣದಲ್ಲಿ ಸಾಂವಿಧಾನಿಕ ಪೀಠ 2004ರಲ್ಲಿ ನೀಡಿದ್ದ ತೀರ್ಪನ್ನು ಮತ್ತೆ ಪರಿಶೀಲನೆ ಮಾಡಬೇಕಾದ ಅಗತ್ಯವಿದೆ. ಹೀಗಾಗಿ ಸೂಕ್ತ ನಿರ್ದೇಶನಕ್ಕಾಗಿ ಈ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗಳ ಮುಂದೆ ಇರಿಸಿದ್ದೇವೆ ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಐವರು ಸದಸ್ಯರ ನ್ಯಾಯಪೀಠ ಗುರುವಾರ ತಿಳಿಸಿತು.
ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ವಿನೀತ್ ಸರಣ್, ಎಂ.ಆರ್. ಶಾ ಮತ್ತು ಅನಿರುದ್ಧ ಬೋಸ್ ಅವರನ್ನು ಒಳಗೊಂಡ ನ್ಯಾಯಪೀಠವು, 2004ರಲ್ಲಿ ನೀಡಲಾಗಿದ್ದ ತೀರ್ಪು ಸೂಕ್ತವಾಗಿ ನಿರ್ಧರಿತವಾಗಿರಲಿಲ್ಲ. ಎಸ್ಸಿ ಮತ್ತು ಎಸ್ಟಿಗಳ ಒಳಗೆ ಜಾತಿಗಳ ಉಪ ವರ್ಗೀಕರಣ ಮಾಡುವ ಮೂಲಕ ಆದ್ಯತೆಯಡಿ ರಾಜ್ಯಗಳು ಕಾನೂನು ಮಾಡುವಂತೆ ಅವಕಾಶ ನೀಡಬಹುದಾಗಿದೆ ಎಂದು ಹೇಳಿತು.

ಹೈಕೋರ್ಟ್ ಆದೇಶದ ವಿರುದ್ಧ ಈ ಹಿಂದಿನ ತೀರ್ಪನ್ನು ಮರುಪರಿಶೀಲಿಸಲು ವಿಸ್ತೃತ ನ್ಯಾಯಪೀಠ ಸ್ಥಾಪಿಸುವಂತೆ ಕೋರಿ ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಅವರ ಮುಂದೆ ಪಂಜಾಬ್ ಸರ್ಕಾರವು ಸಲ್ಲಿಸಿದ್ದ ಅರ್ಜಿಯನ್ನು ಈ ನ್ಯಾಯಪೀಠ ಉಲ್ಲೇಖಿಸಿತು.
ಎಸ್ಸಿ ಮತ್ತು ಎಸ್ಟಿಗಳಿಗೆ ಕೋಟಾಗಳನ್ನು ಕಲ್ಪಿಸಲು ಉಪ ವರ್ಗೀಕರಣ ಮಾಡುವ ಪಂಜಾಬ್ ಸರ್ಕಾರದ ಕಾನೂನನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರದ್ದುಗೊಳಿಸಿತ್ತು. 2004ರ ಸುಪ್ರೀಂಕೋರ್ಟ್ ತೀರ್ಪನ್ನು ಈ ಪ್ರಕರಣದಲ್ಲಿ ಹೈಕೋರ್ಟ್ ಉಲ್ಲೇಖಿಸಿತ್ತು.












Click it and Unblock the Notifications