ಜನಪ್ರತಿನಿಧಿಗಳ ವಿಚಾರಣೆಗೆ 1 ವರ್ಷ ಗಡುವು
ನವದೆಹಲಿ, ಮಾ.10 : ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ತ್ವರಿತ ವಿಚಾರಣೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಕಳಂಕಿತ ಸಂಸದರು, ಶಾಸಕರ ವಿರುದ್ಧದ ಪ್ರಕರಣದ ವಿಚಾರಣೆಯನ್ನು 1 ವರ್ಷದೊಳಗೆ ಪೂರ್ಣಗೊಳಿಸುವಂತೆ ಕೆಳಹಂತದ ನ್ಯಾಯಾಲಯಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.
ಜನಪ್ರತಿನಿಧಿಗಳ ವಿರುದ್ಧ ನ್ಯಾಯಾಲಯದಲ್ಲಿ ಚಾರ್ಚ್ ಶೀಟ್ ಸಲ್ಲಿಕೆಯಾಗಿದ್ದರೆ, ಅವರು ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಕೋರಿ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ, ನ್ಯಾಯಾಲಯ ಕಳಂಕಿತ ಜನಪ್ರತಿನಿಧಿಗಳ ವಿರುದ್ಧ ದಾಖಲಾದ ಪ್ರಕರಣಗಳ ಕುರಿತು ಚಾರ್ಚ್ ಶೀಟ್ ಸಲ್ಲಿಕೆಯಾದ 1 ವರ್ಷದೊಳಗೆ ವಿಚಾರಣೆ ಪೂರ್ಣಗೊಳಿಸಬೇಕು ಎಂದು ಆದೇಶ ನೀಡಿದೆ. [ಜೈಲಿನಲ್ಲಿದ್ದರೂ ಚುನಾವಣೆಗೆ ಸ್ಪರ್ಧಿಸಬಹುದು]
ಶಾಸಕ ಹಾಗೂ ಸಂಸದರು ಎದುರಿಸುತ್ತಿರುವ ಭ್ರಷ್ಟಾಚಾರ, ಅತ್ಯಾಚಾರ ಹಾಗೂ ಇತರ ಗಂಭೀರ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಾರ್ಜ್ಶೀಟ್ ಸಲ್ಲಿಸಿದ ಬಳಿಕ ವಿಚಾರಣೆಯನ್ನು ಒಂದು ವರ್ಷದೊಳಗೆ ಮುಕ್ತಾಯಗೊಳಿಸಬೇಕು. ಒಂದು ವೇಳೆ ಪ್ರಕರಣದ ವಿಚಾರಣೆ ತಡವಾದಲ್ಲಿ ಆ ಕುರಿತು ಹೈಕೋರ್ಟ್ಗೆ ವರದಿ ಸಲ್ಲಿಸುವಂತೆ ಸುಪ್ರೀಂ ಆದೇಶದಲ್ಲಿ ತಿಳಿಸಿದೆ.
ಕೆಲವು ದಿನಗಳ ಹಿಂದೆ ಸುಪ್ರೀಂಕೋರ್ಟ್ ಕ್ರಿಮಿನಲ್ ಆರೋಪದ ಮೇಲೆ ಎರಡು ಅಥವಾ ಎರಡಕ್ಕಿಂತ ಹೆಚ್ಚು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಲ್ಲಿ ಅಂತವರು ಶಾಸನ ಸಭೆಯಿಂದ ಅನರ್ಹಗೊಳ್ಳುತ್ತಾರೆ ಮತ್ತು 6 ವರ್ಷ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ಮಹತ್ವದ ಆದೇಶ ನೀಡಿತ್ತು. ಸದ್ಯ ಜನಪ್ರತಿನಿಧಿಗಳ ವಿಚಾರಣೆಗೆ ಒಂದು ವರ್ಷದ ಗಡುವು ನೀಡುವ ಮೂಲಕ ತ್ವರಿತ ನ್ಯಾಯದಾನ ಪ್ರಕ್ರಿಯೆಗೆ ಮುಂದಾಗಿದೆ. [ಸುಗ್ರೀವಾಜ್ಞೆ ವಿರುದ್ಧ ರಾಹುಲ್ ಗಾಂಧಿ ಗರಂ]