ಮರಾಠ ಸಮುದಾಯದ ಮೀಸಲಾತಿ ರದ್ದುಗೊಳಿಸಿದ ಸುಪ್ರೀಂ
ನವದೆಹಲಿ, ಮೇ 5: ಮರಾಠ ಸಮುದಾಯದವರಿಗೆ ಮಹಾರಾಷ್ಟ್ರ ಸರ್ಕಾರ ಜಾರಿಗೆ ತಂದಿದ್ದ ಸರ್ಕಾರಿ ಉದ್ಯೋಗ, ಶಿಕ್ಷಣದ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಬುಧವಾರ ತೀರ್ಪು ನೀಡಿದೆ.
ಮೀಸಲಾತಿಯು ಶೇ 50ರಷ್ಟನ್ನು ಮೀರುವಂತಿಲ್ಲ. ಹೀಗಾದರೆ ಸಮಾನತೆಗೆ ಧಕ್ಕೆಯಾಗುತ್ತದೆ ಎಂದು ಎಂದು ನ್ಯಾಯಮೂರ್ತಿ ಅಶೋಕ್ ಭೂಷನ್ ನೇತೃತ್ವದ ಐವರ ಸದಸ್ಯರ ನ್ಯಾಯಪೀಠ ತಿಳಿಸಿದ್ದು, ಈ ಮೀಸಲಾತಿಯನ್ನು ರದ್ದುಗೊಳಿಸಿ ಆದೇಶಿಸಿದೆ.
ಈ ಮೀಸಲಾತಿ ಇನ್ನೂ ಎಷ್ಟು ತಲೆಮಾರುಗಳವರೆಗೆ ಇರುತ್ತದೆ?: ಸುಪ್ರೀಂಕೋರ್ಟ್ ಪ್ರಶ್ನೆ
ಅಶೋಕ್ ಭೂಷಣ್, ಎಲ್ ನಾನೇಶ್ವರ್ ರಾವ್, ಎಸ್ ಅಬ್ದುಲ್ ನಜೀರ್, ಹೇಮಂತ್ ಗುಪ್ತಾ ಹಾಗೂ ಎಸ್ ರವೀಂದ್ರ ಭಟ್ ಅವರು ನ್ಯಾಯಪೀಠದಲ್ಲಿದ್ದರು.
ಇದೇ ಸಂದರ್ಭ, ಶೇ 50ರ ಗರಿಷ್ಠ ಮಿತಿಯ ಮೀಸಲಾತಿ ನಿಗದಿಪಡಿಸಿದ್ದ 1992ರ ಮಂಡಲ್ ಆದೇಶವನ್ನು ಮರುಪರಿಶೀಲಿಸಬೇಕು ಎಂಬ ಮನವಿಯನ್ನು ತಿರಸ್ಕರಿಸಲಾಗಿದೆ.
ಮರಾಠ ಸಮುದಾಯದವರಗೆ ಮೀಸಲಾತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಬಾಂಬೆ ಹೈಕೋರ್ಟ್ 2019ರ ಜೂನ್ 28ರಂದು ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಹಲವು ಅರ್ಜಿಗಳು ಬಂದಿದ್ದವು. 2019ರಲ್ಲಿ ಸುಪ್ರೀಂ ಕೋರ್ಟ್ ಈ ಕಾನೂನು ಜಾರಿಗೆ ತಡೆ ತಂದಿತ್ತು.
ಮರಾಠಿಗರಿಗೆ ಮೀಸಲಾತಿ ನೀಡುವ ಮಸೂದೆಯನ್ನು 2018ರ ನವೆಂಬರ್ 30ರಂದು ಮಹಾರಾಷ್ಟ್ರ ಸರ್ಕಾರ ಅಂಗೀಕರಿಸಿತ್ತು. ಹೆಚ್ಚುವರಿಯಾಗಿ ಮರಾಠ ಸಮುದಾಯಕ್ಕೆ ಮೀಸಲಾತಿಯನ್ನು ಸರ್ಕಾರ ಸೇರಿಸಿತ್ತು.