ಪೆಗಾಸಸ್ ಹಗರಣ: ಕೇಂದ್ರಕ್ಕೆ ಪ್ರತಿ ನೀಡುವಂತೆ ಅರ್ಜಿದಾರರಿಗೆ ಸುಪ್ರೀಂಕೋರ್ಟ್ ಸೂಚನೆ
ನವದೆಹಲಿ, ಆಗಸ್ಟ್ 5: ಇಸ್ರೇಲಿನ ಪೆಗಾಸಸ್ ತಂತ್ರಾಂಶದ ಬಳಸಿ ಬೇಹುಗಾರಿಕೆ ನಡೆಸಿರುವ ಹಗರಣದ ಆರೋಪ ಗಂಭೀರವಾಗಿದೆ. ಈ ಕುರಿತು ವರದಿಗಳು ಸತ್ಯವಾಗಿದ್ದರೆ ಆಗಸ್ಟ್ 10ರಂದು ಮುಂದಿನ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ.
ಹಿರಿಯ ಪತ್ರಕರ್ತ ಎನ್ ರಾಮ್, ಶಶಿಕುಮಾರ್, ಸಿಪಿಎಂ ಸಂಸದ ಜಾನ್ ಬ್ರಿತ್ತಾಸ್ ಹಾಗೂ ವಕೀಲ ಎಂಎಲ್ ಶರ್ಮಾ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್ ವಿ ರಮಣ್ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿತು. ಕೋರ್ಟ್ ಗೆ ನೀಡಿರುವ ಅರ್ಜಿಯಲ್ಲಿ ಅಂಶವನ್ನು ಒಳಗೊಂಡಿರುವ ಒಂದು ಪ್ರತಿಯನ್ನು ಕೇಂದ್ರ ಸರ್ಕಾರಕ್ಕೆ ರವಾನಿಸುವಂತೆ ಅರ್ಜಿದಾರರಿಗೆ ಕೋರ್ಟ್ ಸೂಚಿಸಿದೆ.
"ಈ ವಿಷಯದಲ್ಲಿ ನಾವು ಮುಂದುವರಿಯುವುದಕ್ಕೂ ಮೊದಲು ಇಲ್ಲಿ ಹಲವು ಪ್ರಶ್ನೆಗಳಿವೆ. ಒಂದು ವೇಳೆ ವರದಿಗಳು ನಿಜವಾಗಿದ್ದರೆ, ಈ ಎಲ್ಲ ಆರೋಪಗಳು ಗಂಭೀರವಾಗಿವೆ ಎಂಬುದರಲ್ಲಿ ಯಾವುದೇ ಅನುಮಾನಗಳಿಲ್ಲ," ಎಂದು ಮುಖ್ಯನ್ಯಾಯಮೂರ್ತಿ ಎನ್ ವಿ ರಮಣ್ ಹೇಳಿದ್ದಾರೆ. 2019ರ ವೇಳೆಯಲ್ಲೇ ಬೇಹುಗಾರಿಕೆ ನಡೆಸಿರುವ ಬಗ್ಗೆ ವರದಿಯಾಗಿದೆ. ಹೆಚ್ಚಿನ ಮಾಹಿತಿ ಪಡೆಯಲು ಯಾವುದೇ ಪ್ರಯತ್ನಗಳನ್ನು ಮಾಡಲಾಗಿದೆಯೇ ಇಲ್ಲವೇ ಎಂದು ನನಗೆ ಗೊತ್ತಿಲ್ಲ, ಇದು ಅಡ್ಡಿ ಎಂದು ಹೇಳಲು ಬಯಸುವುದಿಲ್ಲ ಎಂದರು.

ಪೆಗಾಸಸ್ ತಂತ್ರಾಂಶ ಬಳಕೆ ಕಾನೂನುಬಾಹಿರ:
ಹಿರಿಯ ಪತ್ರಕರ್ತ ಪರಂಜೋಯ್ ಗುಹಾ ಠಾಕೂರ್ತಾ ಸಲ್ಲಿಸಿದ ಪ್ರತ್ಯೇಕ ಅರ್ಜಿಯನ್ನೂ ಸುಪ್ರೀಂ ಕೋರ್ಟ್ ಆಲಿಸಲಿದ್ದು, ಬೇಹುಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಅವರ ಹೆಸರು ಕೂಡ ಉಲ್ಲೇಖವಾಗಿದೆ. ತಮ್ಮ ಮೊಬೈಲ್ ಮೇಲೆ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಬೇಹುಗಾರಿಕೆ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಕೇಂದ್ರ ಸರ್ಕಾರದಿಂದ ಮಾಹಿತಿ ಬಹಿರಂಗಪಡಿಸುವಂತೆ ನಿರ್ದೇಶನ ನೀಡಲು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಪೆಗಾಸಸ್ ತಂತ್ರಾಂಶವು ಭಾರತೀಯರ ಮಾತಿನ ಹಕ್ಕನ್ನು ಕಿತ್ತುಕೊಳ್ಳುವ ಹುನ್ನಾರವಾಗಿದ್ದು, ಇಂಥ ಬೇಹುಗಾರಿಕೆ ತಂತ್ರಾಂಶದ ಬಳಕೆಯು ಕಾನೂನುಬಾಹಿರ ಹಾಗೂ ಅಸಂವಿಧಾನಿಕ ಎಂದು ಘೋಷಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಮೊಬೈಲ್ ಬೇಹುಗಾರಿಕೆ ನಡೆಸುವುದು ಅಪರಾಧ:
ಫೋನ್ ಕರೆಗಳನ್ನು ಹ್ಯಾಕ್ ಮಾಡುವುದು ಕೂಡ ಅಪರಾಧಿ ಕೃತ್ಯವಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಇಂಥ ಕೃತ್ಯಕ್ಕೆ ಕಂಪ್ಯೂಟರ್ ಸಂಬಂಧಿತ ಅಪರಾಧ ಕಾಯ್ದೆ 66, ಕಂಪ್ಯೂಟರ್ ಅಥವಾ ಸಂವಹನ ಸಾಧನದಿಂದ ಸಂಪನ್ಮೂಲಗಳ ಕಳ್ಳತನ ಅಪರಾಧ ಕಾಯ್ದೆ 66ಬಿ, ಖಾಸಗಿತನದ ಉಲ್ಲಂಘನೆ ಕಾಯ್ದೆ 66ಇ ಮತ್ತು ಸೈಬರ್ ಭಯೋತ್ಪಾದನೆ ಶಿಕ್ಷೆ ಕಾಯ್ದೆಯ 66ಎಫ್ ಐಟಿ ಕಾಯ್ದೆಯ ಅಡಿಯಲ್ಲಿ ಜೈಲುಶಿಕ್ಷೆ ಅಥವಾ ದಂಡವನ್ನು ವಿಧಿಸಬೇಕಾಗುತ್ತದೆ.
ಇಸ್ರೇಲ್ ತಂತ್ರಾಂಶದ ದುರ್ಬಳಕೆ ಬಗ್ಗೆ ಜಾಗತಿಕ ತನಿಖಾ ವರದಿ:
ಜಾಗತಿಕ ತನಿಖಾ ಸಂಸ್ಥೆಗಳು ಮಾಡಿರುವ ವರದಿಯ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಮಾರಾಟವಾಗಿರುವ ಇಸ್ರೇಲಿನ ಬೇಹುಗಾರಿಕೆ ತಂತ್ರಾಂಶವನ್ನು ಬಳಸಿಕೊಂಡು ವಿರೋಧ ಪಕ್ಷದ ಹಲವು ನಾಯಕರ ಮೇಲೆ ಕಣ್ಗಾವಲು ಇಡಲಾಗಿದೆ. ದೇಶದ ಪ್ರಮುಖ 142ಕ್ಕೂ ಹೆಚ್ಚು ರಾಜಕೀಯ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲಾಗಿದೆ ಎಂಬ ವರದಿಯ ಬಗ್ಗೆ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ, ದೇಶದ 300ಕ್ಕೂ ಹೆಚ್ಚು ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗುತ್ತಿದೆ. ಈ ಬೇಹಾಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಸ್ವತಃ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ 40 ಮಂದಿ ಪತ್ರಕರ್ತರ ಹೆಸರು ಕೂಡ ಸೇರಿದೆ.
ಪೆಗಾಸಸ್ ಬಗ್ಗೆ ಜಾಗತಿಕ ಮಾಧ್ಯಮಗಳ ವರದಿ:
ಜಾಗತಿಕ ಸುದ್ದಿ ಸಂಸ್ಥೆಗಳಾಗಿರುವ ವಾಶಿಂಗ್ಟನ್ ಪೋಸ್ಟ್, ದಿ ಗಾರ್ಡಿಯನ್, ಲೇ ಮೊಂಡೆ ಜೊತೆ ಸಹಯೋಗ ಹೊಂದಿರುವ 'ದಿ ವೈರ್' ಪೆಗಾಸಸ್ ಬೇಹುಗಾರಿಕೆ ಕುರಿತು ವಿಸ್ತೃತ ವರದಿಯನ್ನು ಪ್ರಕಟಿಸಿತ್ತು. ಮಾಧ್ಯಮ ಪಾಲುದಾರ ಸಂಸ್ಥೆ ಆಗಿರುವ ಪ್ಯಾರಿಸ್ ಮೂಲದ 'ನಾನ್ ಪ್ರಾಫಿಟ್ ಆರ್ಗನೈಸೇಷನ್ ಫಾರ್ಬಿಡನ್ ಸ್ಟೋರೀಸ್ ಮತ್ತು ರೈಟ್ಸ್ ಗ್ರೂಪ್ ಅಮ್ನೆಸ್ಟಿ ಇಂಟರ್ ನ್ಯಾಷನಲ್' ಸಂಸ್ಥೆಗಳು ಈ ಕುರಿತು ತನಿಖೆ ನಡೆಸಿದ್ದವು ಎಂದು ವರದಿಯಲ್ಲಿ ಉಲ್ಲೇಖಿಸಿವೆ. ಇಸ್ರೇಲ್ ಕಣ್ಗಾವಲು ಕಂಪನಿ ಎನ್ಎಸ್ಒ ಗ್ರೂಪ್ನ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಜಗತ್ತಿನಾದ್ಯಂತ ಸಾವಿರಾರು ಗಣ್ಯರ ಮೊಬೈಲ್ ಸಂಖ್ಯೆಯನ್ನು ಕದಿಯಲಾಗಿದೆ ಎಂದು ತನಿಖಾ ವರದಿಯಿಂದ ಗೊತ್ತಾಗಿದೆ. ವಿಶ್ವದಲ್ಲಿ ಒಟ್ಟು 50,000ಕ್ಕೂ ಅಧಿಕ ಮೊಬೈಲ್ ಸಂಖ್ಯೆಗಳನ್ನು ಕದ್ದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.












Click it and Unblock the Notifications