ನಿತ್ಯಾನಂದ ಪುರುಷತ್ವ ಪರೀಕ್ಷೆ ನಡೆಯುವುದೇ ಅನುಮಾನ?
ಬೆಂಗಳೂರು,ಆ.13: ಸ್ವಯಂಘೋಷಿತ ದೇವಮಾನ ನಿತ್ಯಾನಂದನ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪ್ರಮಾಣ ಪತ್ರ ಸಲ್ಲಿಕೆ ವಿಳಂಬ ಮಾಡುವುದರ ಮೂಲಕ ಮತ್ತೊಮ್ಮೆ ಸುಪ್ರೀಂಕೋರ್ಟಿನಲ್ಲಿ ತಲೆತಗ್ಗಿಸಿ ನಿಂತುಕೊಂಡಿದೆ. ಹೀಗಾಗಿ ಮತ್ತೊಮ್ಮೆ ಪುರುಷತ್ವ ಪರೀಕ್ಷೆ ಮುಹೂರ್ತ ಮುರಿದು ಬಿದ್ದಿದೆ. ಪುರುಷತ್ವ ಪರೀಕ್ಷೆ ನಡೆಯುವುದೇ ಅನುಮಾನ ಎಂಬ ಪರಿಸ್ಥಿತಿ ಎದ್ದುಕಾಣುತ್ತಿದೆ.
ಬಿಡದಿ ನಿತ್ಯಾನಂದನ ಪುರುಷತ್ವ ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯ ಆ.20ಕ್ಕೆ ಮುಂದೂಡಿದೆ. ಪುರುಷತ್ವ ಪರೀಕ್ಷೆ ಅರ್ಜಿಯನ್ನು ವಜಾಗೊಳಿಸಬೇಕು ಎಂದು ನಿತ್ಯಾನಂದ ಪರ ವಕೀಲ ಸಲ್ಲಿಸಿದ್ದ ಅರ್ಜಿಯ ಹಿನ್ನೆಲೆಯಲ್ಲಿ ಒಂದು ವಾರದೊಳಗೆ ಪ್ರಮಾಣ ಪತ್ರ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಸೂಚಿಸಿತ್ತು. ಆದರೆ, ಸರ್ಕಾರ ಪ್ರಮಾಣ ಪತ್ರ ಸಲ್ಲಿಸಲು ವಿಫಲವಾಗಿದ್ದು, ನಿತ್ಯಾನಂದಗೆ ಗೆಲುವಾಗಿದೆ.
ಪ್ರಮಾಣ ಪತ್ರ ಸಲ್ಲಿಕೆಗೆ ಇನ್ನೂ ಒಂದು ವಾರ ಕಾಲಾವಕಾಶಬೇಕು ಎಂದು ಸರ್ಕಾರದ ಪರ ವಕೀಲರು ಕೇಳಿದ್ದರು. ಹಾಗಾಗಿ ನ್ಯಾಯಾಲಯ ಮಂಗಳವಾರ ನಡೆಯಬೇಕಿದ್ದ ವಿಚಾರಣೆಯನ್ನು ಆ.20ಕ್ಕೆ ಮುಂದೂಡಿತು. ಇದೇ ವೇಳೆ ನ್ಯಾಯಾಲಯದಲ್ಲಿ ವಾದ ಮಂಡಿಸಲು ತನಗೂ ಅವಕಾಶ ನೀಡಬೇಕು ಎಂಬ ನಟಿ ರಂಜಿತಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

ಆ.6ರಂದು ನಡೆಯಬೇಕಿದ್ದ ಪುರುಷತ್ವ ಪರೀಕ್ಷೆಗೆ ತಡೆಯಾಜ್ಞೆ ನೀಡಿರುವ ಸುಪ್ರೀಂಕೋರ್ಟ್, ರಾಮನಗರ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿtತ್ತು. ಆಗಸ್ಟ್ 18ರಂದು ರಾಮನಗರ ನ್ಯಾಯಾಲಯದಲ್ಲಿ ನಡೆಯುವ ವಿಚಾರಣೆಗೆ ನಿತ್ಯಾನಂದ ಹಾಜರಾಗಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ಆಗಸ್ಟ್ 18ರಂದು ನಿತ್ಯಾನಂದ ಅವರು ರಾಮನಗರ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂದು ನಿತ್ಯಾನಂದ ಪರ ವಕೀಲರು ತಿಳಿಸಿದ್ದಾರೆ. ಆದರೆ, ಈಗಾಗಲೇ ವಾದ ವಿವಾದ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವುದರಿಂದ ರಾಮನಗರ ಕೋರ್ಟಿನಲ್ಲಿ ಪ್ರಕರಣದ ವಿಚಾರಣೆ ಮಾತ್ರ ಸಾಧ್ಯವಿದ್ದು, ಪರೀಕ್ಷೆ ರದ್ದು ಮಾಡುವ ಬಗ್ಗೆ ಯಾವುದೇ ಆದೇಶ ಹೊರಡಿಸಲು ಸಾಧ್ಯವಿಲ್ಲ.
ನಿತ್ಯಾನಂದ ಆಶ್ರಮವಾಸಿಯಾಗಿದ್ದ ಆರತಿ ಹಾಗೂ ಇನ್ನಿತರು ನೀಡಿದ್ದ ದೂರನ್ನು ಆಧಾರವಾಗಿಟ್ಟುಕೊಂಡು ಸಿಐಡಿ ಪೊಲೀಸರು ಸಿಆರ್ ಪಿಸಿ 53(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ. ಹೈಕೋರ್ಟ್ ನ್ಯಾ. ವಿ ಜಗನ್ನಾಥನ್ ಅವರಿರುವ ನ್ಯಾಯಪೀಠ ನೀಡಿರುವ ಆದೇಶದ ಪ್ರಕಾರ ಸಿಐಡಿ ಪೊಲೀಸರು ಈ ಕೂಡಲೇ ನಿತ್ಯಾನಂದ ಸ್ವಾಮೀಜಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬಹುದಾಗಿದೆ.[ಹೋರಾಟಗಾರರನ್ನು ಕೆಣಕಿದ ನಿತ್ಯಾನಂದ]












Click it and Unblock the Notifications