ತಬ್ಲಿಘಿ ಜಮಾತ್ ಕೇಸ್: 36 ವಿದೇಶಿಯರನ್ನು ಖುಲಾಸೆಗೊಳಿಸಿದ ಕೋರ್ಟ್
ನವದೆಹಲಿ, ಡಿ. 15: ದೆಹಲಿಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆದ ತಬ್ಲಿಘಿ ಜಮಾತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 36 ವಿದೇಶಿ ಪ್ರಜೆಗಳಿಗೆ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜೊತೆಗೆ ಎಲ್ಲರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸುವಂತೆ ಸೂಚನೆ ನೀಡಿದೆ.
ವೀಸಾ ನಿಯಮಗಳನ್ನು ಉಲ್ಲಂಘನೆ, ಕೊವಿಡ್ 19 ನಿಯಮ ಉಲ್ಲಂಘನೆ ಮಾಡಿ ತಬ್ಲಿಘಿ ಜಮಾತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದು ಎಲ್ಲರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಿ ದೋಷರೋಪಣ ಪಟ್ಟಿ ಸಲ್ಲಿಸಲಾಗಿತ್ತು.
ತಬ್ಲಿಘಿ ಜಮಾತ್; ಜಾಮೀನು, ಕ್ರಿಮಿನಲ್ ಕೇಸ್ ರದ್ದು, ದೇಶಕ್ಕೆ ವಾಪಸ್
ವಿದೇಶಿ ಪ್ರಜೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ಮುಂದುವರೆಸುವುದು ಆರ್ಟಿಕಲ್ 21ರ ಉಲ್ಲಂಘನೆಯಾಗುತ್ತದೆ. ವ್ಯಕ್ತಿ ಸ್ವಾತಂತ್ರ್ಯ ಮತ್ತು ಬದುಕಿನ ಹಕ್ಕು ಕಸಿದಂತೆ ಎಂದು ಅಭಿಪ್ರಾಯ ಪಟ್ಟಿರುವ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರುಣ್ ಕುಮಾರ್ ಗರ್ಗ್ ಅವರು ತಮ್ಮ ತವರು ದೇಶಕ್ಕೆ ವಾಪಸ್ ಹೋಗಬಹುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಸಾವಿರಾರು ವಿದೇಶಿಯರು ಪಾಲ್ಗೊಂಡಿದ್ದರು. ಎಲ್ಲರೂ ವೀಸಾ ನಿಯಮಗಳನ್ನು ಉಲ್ಲಂಘನೆ ಮಾಡಿದ್ದವರನ್ನು ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಕೊವಿಡ್ ನಿಯಮ ಉಲ್ಲಂಘನೆ ಮಾಡಿದ್ದಕಾಗಿ ಸಾಂಕ್ರಾಮಿಕ ಕಾಯ್ದೆ 1897 ಸೆಕ್ಷನ್ 3, ಐಪಿಸಿ ಸೆಕ್ಷನ್ 188, 269 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಜೊತೆಗೆ ವಿಪತ್ತು ನಿರ್ವಹಣಾ ಕಾಯ್ದೆ 2005 ಸೆಕ್ಷನ್ 51ರ ಅಡಿಯಲ್ಲೂ ಚಾರ್ಜ್ ಶೀಟ್ ಹಾಕಲಾಗಿತ್ತು.
ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಹಲವಾರು ಜನರಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿತ್ತು. ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿತ್ತು. ಈ ಹಿಂದೆ ದೆಹಲಿಯಲ್ಲಿ 8 ವಿದೇಶಿ ಪ್ರಜೆಗಳನ್ನು ಖುಲಾಸೆಗೊಳಿಸಿ ಕೋರ್ಟ್ ಆದೇಶ ಹೊರಡಿಸಿತ್ತು.