ಸಿಪಿಪಿ ಸಭೆ: ಚರ್ಚಿಸಲಾದ ವಿಷಯಗಳು ಬಗ್ಗೆ ಮಾಹಿತಿ ನೀಡಿದ ಖರ್ಗೆ
ನವದೆಹಲಿ ಮಾರ್ಚ್ 13: ಮುಂಬರುವ ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಪಕ್ಷದ ಕಾರ್ಯತಂತ್ರದ ಕುರಿತು ಕಾಂಗ್ರೆಸ್ ಉನ್ನತ ನಾಯಕರು ಭಾನುವಾರ ಚರ್ಚಿಸಿದ್ದು ಸಾರ್ವಜನಿಕ ಪ್ರಾಮುಖ್ಯತೆಯ ಸಮಸ್ಯೆಗಳನ್ನು ಎತ್ತಲು ಇತರ ಸಮಾನ ಮನಸ್ಕ ಪಕ್ಷಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡಲು ನಿರ್ಧರಿಸಿದ್ದಾರೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರದ ಗುಂಪಿನ ಸಭೆ ನಡೆಯಿತು. ಸೋಮವಾರದಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ಚರ್ಚಿಸಲಾಯಿತು. ಅಧಿವೇಶನದಲ್ಲಿ ಸಾರ್ವಜನಿಕ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡುತ್ತೇವೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.
ಯುಪಿ ಸಚಿವ ಸಂಪುಟ ರಚನೆಗೂ ಮುನ್ನ ಮೋದಿ-ಯೋಗಿ ಭೇಟಿ
ಇಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷದ ತಂತ್ರಗಾರಿಕೆ ಕುರಿತು ಸಂಸದೀಯ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಲು ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಆನಂದ್ ಶರ್ಮಾ, ಕೆ ಸುರೇಶ್, ಮನೀಶ್ ತಿವಾರಿ, ಜೈರಾಮ್ ರಮೇಶ್ ಆಗಮಿಸಿದ್ದರು. ಈ ವೇಳೆ ಮುಂಬರುವ ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ಚರ್ಚಿಸಿದ್ದೇವೆ ಎಂದು ಸಭೆಯ ನಂತರ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಹಣದುಬ್ಬರ, ನಿರುದ್ಯೋಗ, ರೈತರಿಗೆ ಕನಿಷ್ಠ ಬೆಂಬಲ ಬೆಲೆ, ಉಕ್ರೇನ್ನಿಂದ ಹಿಂದಿರುಗುವ ವೈದ್ಯಕೀಯ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ನಾವು ಧ್ವನಿ ಎತ್ತಲು ಪ್ರಯತ್ನಿಸುತ್ತೇವೆ ಎಂದರು.
ಸಂಸತ್ತಿನ ಪ್ರತಿ ಅಧಿವೇಶನಕ್ಕೂ ಮುನ್ನ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರದ ಗುಂಪಿನ ಸಭೆ ನಡೆಯುತ್ತದೆ. ಬಜೆಟ್ ಅಧಿವೇಶನದ ಎರಡನೇ ಭಾಗ ಸೋಮವಾರದಿಂದ ಆರಂಭವಾಗಿದ್ದು, ಏಪ್ರಿಲ್ 8ರವರೆಗೆ ನಡೆಯಲಿದೆ.