ಕೃಷಿ ಕಾಯ್ದೆ: ದೆಹಲಿಯಲ್ಲಿ ಗಣರಾಜ್ಯೋತ್ಸವದ ದಿನವೇ ಟ್ರ್ಯಾಕ್ಟರ್ ಮೆರವಣಿಗೆ
ನವದೆಹಲಿ, ಜನವರಿ.14: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ಜನವರಿ.26ರ ಗಣರಾಜ್ಯೋತ್ಸವದ ದಿನ ಹರಿಯಾಣ-ದೆಹಲಿ ಗಡಿಯಲ್ಲಿ ರೈತರು ಉಗ್ರ ಹೋರಾಟ ನಡೆಸುವುದಕ್ಕೆ ತೀರ್ಮಾನಿಸಿದ್ದಾರೆ. ಆದರೆ ಗಣರಾಜ್ಯೋತ್ಸವದ ದಿನ ಯಾವುದೇ ಕಾರಣಕ್ಕೂ ತೊಂದರೆ ಉಂಟು ಮಾಡುವುದಿಲ್ಲ. ದೆಹಲಿ ಕೆಂಪು ಕೋಟೆಯತ್ತ ಪ್ರತಿಭಟನಾಕಾರರು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಗಣರಾಜ್ಯೋತ್ಸವದ ದಿನ ಕೃಷಿ ಸಂಬಂಧಿತ ಕಾಯ್ದೆ ವಿರುದ್ಧ "ಟ್ರ್ಯಾಕ್ಟರ್ ಜಾಥಾ" ನಡೆಸಲಾಗುತ್ತದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್ ತಿಳಿಸಿದ್ದಾರೆ. ಕೇವಲ ಹರಿಯಾಣ ಮತ್ತು ದೆಹಲಿ ಗಡಿಗೆ ಮಾತ್ರ ಈ ಟ್ರ್ಯಾಕ್ಟರ್ ಮೆರವಣಿಗೆ ಸೀಮಿತವಾಗಿರಬೇಕು ಎಂದು ರೈತರಿಗೆ ಬಹಿರಂಗ ಪತ್ರ ಬರೆದಿದ್ದಾರೆ.
Video: ಕೃಷಿ ಸಂಬಂಧಿತ ಕಾಯ್ದೆಯ ಪ್ರತಿಯನ್ನು ಸುಟ್ಟು ಹಾಕಿದ ರೈತರು
ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ಟ್ರ್ಯಾಕ್ಟರ್ ಮೆರವಣಿಗೆಯ ಉದ್ದೇಶವನ್ನು ಹಳಿ ತಪ್ಪಿಸುವ ಪ್ರಯತ್ನ ನಡೆಸುತ್ತಿದೆ. ಈ ಹಿನ್ನೆಲೆ ರೈತರು ಯಾವುದೇ ಕಾರಣಕ್ಕೂ ಪ್ರತ್ಯೇಕತಾವಾದಿಗಳ ಅಂಶಗಳಿಗೆ ಬೆಂಬಲ ನೀಡದಂತೆ ರಾಜೇವಾಲ್ ಕೋರಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತೆ ರೈತರಿಗೆ ಕರೆ:
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ವಿರುದ್ಧ ಹೋರಾಟ ಮಾಡುವುದಕ್ಕೆ ರೈತರು ಕೈಜೋಡಿಸಬೇಕು. ಗಣರಾಜ್ಯೋತ್ಸವಕ್ಕೂ ಮುನ್ನ ದಿನ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹರಿಯಾಣ-ದೆಹಲಿ ಗಡಿಯಲ್ಲಿ ಸೇರಬೇಕು ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಹಕಾರಿ ಸಮಿತಿಯು ಕರೆ ನೀಡಿದೆ.
ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳು ರೈತರ ಹೋರಾಟಕ್ಕೆ ಪ್ರಮುಖ ಕಾರಣಗಳಾಗಿವೆ. ಈ ಕಾಯ್ದೆಗಳು ಮತ್ತು ರೈತರ ಜೊತೆಗೆ ಚರ್ಚೆ ನಡೆಸುವುದಕ್ಕೆ ಸುಪ್ರೀಂಕೋರ್ಟ್ ತಜ್ಞರ ಸಮಿತಿಯೊಂದನ್ನು ರಚಿಸುವುದಾಗಿ ಆದೇಶಿಸಿದೆ. ಆದರೆ, ಸುಪ್ರೀಂಕೋರ್ಟ್ ರಚಿಸಿರುವ ಸಮಿತಿಯು ಕೃಷಿ ಕಾನೂನುಗಳ ಪರವಾಗಿದ್ದು, ನಾವು ಯಾವುದೇ ಸಮಿತಿಯಲ್ಲೂ ಸೇರುವುದಿಲ್ಲ ಎಂದು ಪ್ರತಿಭಟನಾನಿರತ ರೈತ ಸಂಘಟನೆಗಳು ಹೇಳುತ್ತಿವೆ.