ಏನಿದು ತ್ರಿವಳಿ ತಲಾಖ್ ಕಾಯ್ದೆ: ಪ್ರಸ್ತುತ ತಿದ್ದುಪಡಿಯಲ್ಲೇನಿದೆ?
ನವದೆಹಲಿ, ಸೆಪ್ಟೆಂಬರ್ 19: ತ್ರಿವಳಿ ತಲಾಖ್ ಅನ್ನು ಅಪರಾಧವನ್ನಾಗಿ ಪರಿಗಣಿಸುವ ತ್ರಿವಳಿ ತಲಾಖ್ ಮಸೂದೆಯಲ್ಲಿನ ತಿದ್ದುಪಡಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಈ ಕುರಿತ ಕಾರ್ಯನಿರ್ವಾಹಕ ಆದೇಶ(executive order)ಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿರುವುದು ಮುಸ್ಲಿಂ ಮಹಿಳೆಯರ ಪಾಲಿಗೆ ಹೊಸ ಆಶಾಕಿರಣ ಅನ್ನಿಸಿದೆ.
ತ್ರಿವಳಿ ತಲಾಖ್ ಅಪರಾಧ, ಕೇಂದ್ರದಿಂದ ಸುಗ್ರೀವಾಜ್ಞೆ
ಮುಸ್ಲಿಂ ಮಹಿಳೆಯರ ಹಕ್ಕುಗಳನ್ನು ಕಾಪಾಡುವ ನಿಟ್ಟಿನಲ್ಲಿ 2017 ರ ಮುಸ್ಲಿಂ ಮಹಿಳೆಯರ ಕಾಯ್ದೆ(ವಿವಾಹ ಹಕ್ಕು ರಕ್ಷಣೆ) ಯನ್ನು ತ್ರಿವಳಿ ತಲಾಖ್ ಕಾನೂನು ಎಂದೇ ಕರೆಯಲಾಗುತ್ತದೆ.

ಮುಸ್ಲಿಂ ಪತಿಯು, ತನ್ನ ಪತ್ನಿಗೆ ಮೂರು ಬಾರಿ ತಲಾಖ್ ಎನ್ನುವ ಮೂಲಕ ಯಾವುದೇ ಲಿಖಿತ ದಾಖಲೆಗಳಿಲ್ಲದೆ ವಿಚ್ಛೇದನ ನೀಡುವುದಕ್ಕೆ ತ್ರಿವಳಿ ತಲಾಖ್ ನಲ್ಲಿ ಅವಕಾಶವಿತ್ತು.
ಆದರೆ ತ್ರಿವಳಿ ತಲಾಖ್ ನಿಂದಾಗಿ ಮುಸ್ಲಿಂ ಮಹಿಳೆಯರ ಹಕ್ಕನ್ನು ಕಸಿಯಲಾಗುತ್ತಿದೆ, ಮತ್ತು ಅವರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂಬುದನ್ನು ಮನಗಂಡ ಸರ್ಕಾರ, ತ್ರಿವಳಿ ತಲಾಖ್ ಅನ್ನು ಅಪರಾಧವನ್ನಾಗಿ ಪರಿಗಣಿಸುವಂತೆ ಮುಸ್ಲಿಂ ಮಹಿಳೆಯರ ಕಾಯ್ದೆಯಲ್ಲಿ ತಿದ್ದುಪಡಿ ತರಲು ನಿರ್ಧರಿಸಿತ್ತು. ಈ ಮಸೂದೆಗೆ ಲೋಕಸಭೆಯ ಒಪ್ಪಿಗೆ ಸಿಕ್ಕರೂ, ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಕೆಲವು ಧ್ವಂಧ್ವಂಗಳಿಂದಾಗಿ ರಾಜ್ಯಸಭೆಯಲ್ಲಿ ಅದು ಮಂಡನೆಯಾಗದೆ ಉಳಿದಿತ್ತು.
ಆದರೆ ಇದೀಗ ಈ ಕಾಯ್ದೆಯಲ್ಲಿ ಮಹತ್ವದ ಮೂರು ತಿದ್ದುಪಡಿಯನ್ನು ತರಲಾಗಿದ್ದು, ಅದನ್ನೇ ಇಂದು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿರುವುದನ್ನು ಮುಸ್ಲಿಂ ಮಹಿಳೆಯರು ಸ್ವಾಗತಿಸಿದ್ದಾರೆ.
ಕಾಯ್ದೆಯಲ್ಲಾದ ಮಹತ್ವದ ಮೂರು ತಿದ್ದುಪಡಿಗಳು ಇಂತಿವೆ.
* ಅಕಸ್ಮಾತ್ ಮುಸ್ಲಿಂ ಪತಿ ತ್ರಿವಳಿ ತಲಾಖ್ ನೀಡಿದರೆ ಆತನ ವಿರುದ್ಧ ಪತ್ನಿ ಅಥವಾ ಯಾವುದೇ ಹತ್ತಿರದ ಬಂಧುಗಳು ದೂರು ನೀಡಬಹುದು.
* ಪತಿ ಸಂಧಾನಕ್ಕೆ ಬಂದರೆ ಅಥವಾ ರಾಜಿ ಮಾಡಿಕೊಳ್ಳಲು ಒಪ್ಪಿದರೆ ಆಕೆ ದೂರನ್ನು ವಾಪಸ್ ಪಡೆಯುವುದಕ್ಕೆ ಅವಕಾಶವಿದೆ.
* ಪತಿಯನ್ನು ತ್ರಿವಳಿ ತಲಾಖ್ ಪ್ರಕರಣದಲ್ಲಿ ಜೈಲಿಗಟ್ಟಬಹುದು ಮತ್ತು ಆತನಿಗೆ ಜಾಮೀನು ನೀಡಬೇಕೋ ಬೇಡವೋ ಎಂಬುದನ್ನು ಪತ್ನಿಯೊಂದಿಗೆ ಮಾತುಕತೆ ನಡೆಸಿಯೇ ಮ್ಯಾಜಿಸ್ಟ್ರೇಟ್ ತೀರ್ಪು ನೀಡಬೇಕು.
ಮೌಖಿಕವಾಗಿ ತಲಾಖ್ ಹೇಳುವುದು ಅಥವಾ ವಾಟ್ಸಾಪ್, ಟೆಲಿಫೋನ್, ಪತ್ರ ಯಾವುದೇ ತಂತ್ರಜ್ಞಾನವನ್ನು ಬಳಸಿಕೊಂಡು ತಲಾಖ್ ಸಂದೇಶ ಕಳಿಸಿ ವಿಚ್ಛೇದನ ಪಡೆಯುವುದನ್ನೂ ಈ ಕಾಯ್ದೆ ಅಪರಾಧವೆಂದಿದೆ.
ಕಳೆದ ಆಗಸ್ಟ್ ನಲ್ಲಿ ಈ ಕುರಿತು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ತ್ರಿವಳಿ ತಲಾಖ್ ಅಪರಾಧ ಮತ್ತು ಅಸಾಂವಿಧಾನಿಕ ಎಂಬ ಮಹತ್ವದ ಆದೇಶ ನೀಡಿತ್ತು.












Click it and Unblock the Notifications