ಡಿಸೆಂಬರ್ 16ರಂದು ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ
ನವದೆಹಲಿ, ಡಿಸೆಂಬರ್ 15: ಒಂದೆಡೆ ರೈತರ ಪ್ರತಿಭಟನೆ ನಡೆಯುತ್ತಿದೆ, ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಸಚಿವ ಸಂಪುಟ ಸಭೆಯನ್ನು ಏರ್ಪಡಿಸಿದೆ.
ಡಿಸೆಂಬರ್ 16 ರಂದು ಬುಧವಾರ ಸಚಿವ ಸಂಪುಟ ಸಭೆ ನಡೆಯಲಿದೆ. ನಾಳೆ ಬೆಳಿಗ್ಗೆ 11.25ರ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಡಿಸೆಂಬರ್ 9 ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಆತ್ಮನಿರ್ಭರ ಭಾರತ್ ರೋಜ್ಗಾರ್ ಯೋಜನೆಗೆ ಅನುಮೋದನೆ ನೀಡಲಾಗಿತ್ತು. ಯೋಜನೆಯೂ ಹೊಸ ಉದ್ಯೋಗಾವಕಾಶಗಳಿಗೆ ದಾರಿ ಮಾಡಿಕೊಡಲಿದೆ.

ಹಲವು ದಿನಗಳಿಂದಲೂ ರೈತರು ದೆಹಲಿ ಗಡಿ ಪ್ರದೇಶದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಮಸೂದೆ ರದ್ದುಪಡಿಸುವಂತೆ ಆಗ್ರಹಿಸುತ್ತಿದ್ದಾರೆ. ಪ್ರತಿಭಟನೆ ನಡುವಲ್ಲೇ ಸಂಪುಟ ಸಭೆ ನಡೆಯುತ್ತಿರುವುದು ತೀವ್ರ ಕುತೂಹಲವನ್ನು ಮೂಡಿಸಿದೆ.
ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಇದುವರೆಗೆ ನಡೆದ 5 ಸುತ್ತಿನ ಸಭೆಗಳು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನಡೆಸಿದ ಅನೌಪಚಾರಿಕ ಮಾತುಕತೆಗಳೆಲ್ಲವೂ ವಿಫಲವಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ರೈತರ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರೆದಿದ್ದು 20ನೇ ದಿನಕ್ಕೆ ಕಾಲಿಟ್ಟಿದೆ. ಒಂದುವೇಳೆ ಕೇಂದ್ರ ಸರ್ಕಾರ ರೈತರ ಬೇಡಿಕೆಗೆ ಸ್ಪಂದಿಸದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್, ಪಿಯೂಷ್ ಗೋಯಲ್, ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಹಾಗೂ ರೈತ ಸಂಘಟನೆಗಳ 35 ಪ್ರತಿನಿಧಿಗಳ ನಡುವೆ ಈವರೆಗೆ 5 ಸಭೆಗಳು ನಡೆದಿವೆ.
ಅಮಿತ್ ಶಾ ರೈತ ಸಂಘಟನೆಗಳ 13 ಪ್ರತಿನಿಧಿಗಳೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದ್ದಾರೆ. ಆದರೆ ಪ್ರಭಾವಿ ಅಮಿತ್ ಶಾ ಆಗಲಿ, ಇತರೆ ಕೇಂದ್ರ ಸಚಿವರಾಗಲಿ ರೈತರನ್ನು ಮನವೊಲಿಸಲು ಸಫಲರಾಗಿಲ್ಲ.
ಇದರಿಂದ ಮಾತುಕತೆಯಿಂದ ಸಮಸ್ಯೆ ಬಗೆಹರಿಯುವ ಸಾಧ್ಯತೆ ಕ್ಷೀಣಿಸಿದ್ದು ರೈತರು ಪ್ರತಿಭಟನೆ ಮುಂದುವರೆಸುತ್ತಿದ್ದಾರೆ. ದೆಹಲಿ ಚಲೊ, ಹೆದ್ದಾರಿ ತಡೆ, ಟೋಲ್ ಫ್ಲಾಜಾಗಳ ಬಂದ್, ಬಿಜೆಪಿ ನಾಯಕರ ಮನೆ ಮುಂದೆ ಮುಷ್ಕರ, ಭಾರತ್ ಬಂದ್, ಉಪವಾಸ ಸತ್ಯಾಗ್ರಹಗಳೆಲ್ಲವನ್ನೂ ಮಾಡಿರುವ ರೈತರು ಮುಂದೆ ಯಾವ ರೀತಿಯ ಪ್ರತಿಭಟನೆ ನಡೆಸುತ್ತಾರೆ ಎನ್ನುವುದನ್ನು ಕಾದುನೋಡಬೇಕಾಗಿದೆ.












Click it and Unblock the Notifications