ಮೇಕೆದಾಟು ಯೋಜನೆ ಬಗ್ಗೆ ಎರಡೂ ರಾಜ್ಯದ ಸಿಎಂಗಳ ಸಭೆ: ಗಡ್ಕರಿ
ನವದೆಹಲಿ, ಡಿಸೆಂಬರ್ 26: ಮೇಕೆದಾಟು ಯೋಜನೆ ಕುರಿತು ತಮಿಳುನಾಡು-ಕರ್ನಾಟಕ ಎರಡೂ ರಾಜ್ಯದ ಮುಖ್ಯಮಂತ್ರಿಗಳ ಸಭೆ ಕರೆದು, ಚರ್ಚಿಸುವುದಾಗಿ ಕೇಂದ್ರ ಭೂ ಸಾರಿಗೆ, ಹೆದ್ದಾರಿ ಮತ್ತು ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಬುಧವಾರ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ, ಮೇಕೆದಾಟು ಯೋಜನೆ ಜಾರಿಗೆ ತಮಿಳುನಾಡು ಸರಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ವಾಸ್ತವವಾಗಿ ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೆ, ಅದರಲ್ಲೂ ತಮಿಳುನಾಡಿಗೇ ಹೆಚ್ಚು ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿಕೊಟ್ಟರು.
ಈ ಕುರಿತು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ, ಈ ವಿಷಯವನ್ನು ಬಗೆಹರಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ನಿತಿನ್ ಗಡ್ಕರಿ ಸಭೆ ನಡೆಸಲು ಸಹಮತಿ ವ್ಯಕ್ತಪಡಿಸಿದರು.

ಮಹದಾಯಿ ನ್ಯಾಯಾಧಿಕರಣ ತೀರ್ಪಿಗೆ ಸಂಬಂಧಿಸಿದಂತೆ ಗೋವಾ ಸರಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿರುವುದರಿಂದ ರಾಜ್ಯದ ಪಾಲಿನ ನೀರಿನ ಬಳಕೆಗೆ ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ಗೋವಾ ಸರಕಾರದೊಂದಿಗೆ ಚರ್ಚಿಸಿ, ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ ಮಾಡಿದರು.
ಈ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ಗಡ್ಕರಿ, ಗೋವಾ ಸರಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು.












Click it and Unblock the Notifications