ಅಜಿತ್ ದೋವಲ್-ಬ್ಲಿಂಕೆನ್ ಭೇಟಿ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಚರ್ಚೆ
ನವದೆಹಲಿ, ಜುಲೈ 28: ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿಯಾಗಿ ಆಯ್ಕೆಯಾದ ಮೊದಲ ಬಾರಿಗೆ ಆಂಟೋನಿ ಬ್ಲಿಂಕೆನ್ ಭಾರತಕ್ಕೆ ಆಗಮಿಸಿದ್ದಾರೆ. ಎರಡು ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿ ಸೇರಿದಂತೆ ದೇಶದ ಹಲವು ಪ್ರಸಕ್ತ ಬೆಳವಣಿಗೆಗಳ ಕುರಿತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ಜೊತೆ ಚರ್ಚೆ ನಡೆಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ, ಲವ್ ಜಿಹಾದ್, ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ನಾಗರಿಕ ನೋಂದಣಿ ಕಾಯ್ದೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಭಯ ನಾಯಕರ ನಡುವೆ ಪ್ರಸ್ತಾಪವಾಗಿದೆ ಎಂದು ಹೇಳಲಾಗುತ್ತಿದೆ.
ದೋವಲ್-ಬ್ಲಿಂಕೆನ್ ಭೇಟಿ: ಯಾವ್ಯಾವ ವಿಷಯಗಳ ಕುರಿತು ಚರ್ಚೆ
ಭಾರತದಲ್ಲಿ ಕೇಂದ್ರ ಸರ್ಕಾರದ ಜಾರಿಗೊಳಿಸಲು ಹೊರಟಿರುವ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕ ನೋಂದಣಿ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಎರಡು ಕಾಯ್ದೆಗಳ ವಿರುದ್ಧ ಹಲವೆಡೆ ದೀರ್ಘಕಾಲದವರೆಗೂ ಪ್ರತಿಭಟನೆ ನಡೆದವು. ನವದೆಹಲಿ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಸೇರಿದಂತೆ ಉತ್ತರ ಭಾರತದಲ್ಲಿ ಎರಡು ಕಾಯ್ದೆಗಳ ವಿರುದ್ಧ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ಎಲ್ಲ ಅಂಶಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
"ಭಾರತ ಮತ್ತು ಅಮೆರಿಕಾದ ಜನರು ಮಾನವೀಯ ಮೌಲ್ಯಗಳು, ಸಮಾನ ಅವಕಾಶ, ಕಾನೂನು, ಮೂಲಭೂತ ಹಕ್ಕುಗಳ ಜೊತೆಗೆ ಮೂಲಭೂತ ಪ್ರಾದೇಶಿಕತೆಯ ಮೇಲೆ ಹೆಚ್ಚು ವಿಶ್ವಾಸವನ್ನು ಇಟ್ಟುಕೊಂಡಿದ್ದಾರೆ," ಎಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ವಾತಂತ್ರ್ಯ ಎನ್ನುವುದು "ನಮ್ಮಂತಹ ಪ್ರಜಾಪ್ರಭುತ್ವಗಳ ಮೂಲಭೂತ ಸಿದ್ಧಾಂತಗಳಿವೆ ಸಂಬಂಧಿಸಿವೆ ಎಂದು ಕರೆದಿರುವ ಅವರು, ಭಾರತ ಮತ್ತು ಯು.ಎಸ್ ಪ್ರಗತಿಯಲ್ಲಿರುವ ಪ್ರಜಾಪ್ರಭುತ್ವ ರಾಷ್ಟ್ರಗಳು" ಎಂದು ಹೇಳಿದ್ದಾರೆ.
ಸರ್ಕಾರವನ್ನು ಪ್ರಶ್ನಿಸುವ ಹಕ್ಕು ಎಲ್ಲ ಪ್ರಜೆಗಳಿಗಿದೆ:
"ತಮ್ಮ ರಾಷ್ಟ್ರದ ಸರ್ಕಾರವನ್ನು ಪ್ರಶ್ನೆ ಮಾಡುವುದಕ್ಕೆ ದೇಶದ ಪ್ರತಿಯೊಬ್ಬ ಪ್ರಜೆಯೂ ಅರ್ಹರಾಗಿದ್ದಾರೆ ಎಂದು ನಾವು ನಂಬುತ್ತೇವೆ," ಎಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಹೇಳಿದ್ದಾರೆ. ಅಲ್ಲದೇ ಭಾರತದಲ್ಲಿ ಇತ್ತೀಚಿಗೆ ನಡೆದ ಪ್ರತಿಭಟನೆಗಳು ಮತ್ತು ಸರ್ಕಾರ ತೆಗೆದುಕೊಂಡ ತೀರ್ಮಾನಗಳ ಕುರಿತು ವ್ಯಕ್ತವಾದ ಭಿನ್ನಾಭಿಪ್ರಾಯಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.