ಯಡಿಯೂರಪ್ಪ ಆರೋಪದ ಬಗ್ಗೆ ಯಾವುದೇ ಮಾಧ್ಯಮದಲ್ಲಿ ಚರ್ಚೆಗೆ ಸಿದ್ಧ: ಡಿಕೆಶಿ
ನವದೆಹಲಿ, ಅಕ್ಟೋಬರ್ 21 : "ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದವರು. ಮೂವತ್ತು- ನಲವತ್ತು ವರ್ಷಗಳ ರಾಜಕೀಯ ಅನುಭವ ಇದೆ. ಇಂಥ ಆರೋಪ ಮಾಡುವ ಮುಂಚೆ ಯೋಚನೆ ಮಾಡಬೇಕು. ಆಡಳಿತ ಹೇಗೆ ನಡೆಯುತ್ತದೆ ಎಂದು ಗೊತ್ತಿರುವ ಒಬ್ಬ ಒಳ್ಳೆ ಸಲಹೆಗಾರರನ್ನು ನೇಮಿಸಿಕೊಳ್ಳಲಿ" ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಎಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸೇರಿ 417 ಕೋಟಿ ರುಪಾಯಿಯ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಆರೋಪದ ಬಗ್ಗೆ ಯಾವುದೇ ಮಾಧ್ಯಮದಲ್ಲಿ ಚರ್ಚೆ ಮಾಡಲು ನಾವು ಸಿದ್ಧ. ಈ ಹಿಂದೆ ರಾಜ್ಯದಲ್ಲಿ ಯಾವುದೇ ಕಲ್ಲಿದ್ದಲು ಬ್ಲಾಕ್ ಇರಲಿಲ್ಲ. ಇದರಿಂದ ಐನೂರು ಕೋಟಿ ರುಪಾಯಿ ನಷ್ಟವಾಗುತ್ತಿತ್ತು. ಅದನ್ನು ಕಾಂಗ್ರೆಸ್ ಸರಕಾರ ತಪ್ಪಿಸಿದೆ ಎಂದು ಶಿವಕುಮಾರ್ ಸಮರ್ಥನೆ ಮಾಡಿಕೊಂಡರು.
ಇನ್ನು ಬಿಎಸ್ ವೈ ಆರೋಪದ ವಿಚಾರವಾಗಿಯೇ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಬಿಜೆಪಿ ರಾಜ್ಯಾಧ್ಯಕ್ಷರು ಇಂಥ ಆಧಾರರಹಿತ ಆರೋಪ ಮಾಡುವ ಮೂಲಕ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದ್ದಾರೆ. ಯಾರೋ ಅವರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ.












Click it and Unblock the Notifications