ಕೃಷಿ ಕಾಯ್ದೆ ವಾಪಸ್ ಪಡೆಯಲು 700 ರೈತರು ಜೀವ ಕಳೆದುಕೊಳ್ಳಬೇಕಿತ್ತಾ?
ನವದೆಹಲಿ, ನವೆಂಬರ್ 19: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯಲ್ಲಿ 700ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಮೃತ ರೈತರ ಕುಟುಂಬಕ್ಕೆ ಕ್ಷಮೆಯಾಚಿಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಆಗ್ರಹಿಸಿದ್ದಾರೆ.
ಕೃಷಿಗೆ ಸಂಬಂಧಿಸಿದ ವಿವಾದಿತ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬಗ್ಗೆ ಪ್ರತಿಕ್ರಿಯಿಸಿದ ಪೃಥ್ವಿ ರೆಡ್ಡಿ, "ಬಹುಮತವಿರುವ ಅಹಂಕಾರದಲ್ಲಿ ಜನ ವಿರೋಧಿ ಹಾಗೂ ರೈತ ವಿರೋಧಿಯಾಗಿ ಮೆರೆಯುತ್ತಿದ್ದ ಸರ್ಕಾರಕ್ಕೆ ಕೊನೆಗೂ ಹಿನ್ನಡೆಯಾಗಿದೆ ಎಂದರು.
Timeline: ವಿವಾದಿತ ಕೃಷಿ ಕಾಯ್ದೆ ವಿರುದ್ಧ ಅನ್ನದಾತರ ಹೋರಾಟದ ಹಾದಿ
ಕೇಂದ್ರ ಸರ್ಕಾರವು ಕೃಷಿ ವಿಚಾರದಲ್ಲಿ ದೊಡ್ಡದೊಡ್ಡ ಉದ್ಯಮಿಗಳ ಪರ ಯೋಚಿಸುವ ಬದಲು ರೈತರ ಪರ ಯೋಚಿಸಿ ನಿಲುವು ತೆಗೆದುಕೊಳ್ಳಲಿ. ಸುದೀರ್ಘ ಪ್ರತಿಭಟನೆ ಮೂಲಕ ಯಶಸ್ಸು ಗಳಿಸಿದ ಎಲ್ಲ ರೈತರಿಗೆ ಅಭಿನಂದನೆ" ಎಂದು ಪೃಥ್ವಿ ರೆಡ್ಡಿ ಹೇಳಿದರು.
ಕೊವಿಡ್-19 ಸಮಯದಲ್ಲಿ ವಿವಾದಿತ ಕಾಯ್ದೆಗೆ ಅಂಗೀಕಾರ:
"ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಮತ್ತು ಲಾಕ್ಡೌನ್ ಸಮಯವನ್ನೇ ದುರುಪಯೋಗಪಡಿಸಿಕೊಂಡ ಕೇಂದ್ರ ಸರ್ಕಾರವು ಸುಗ್ರೀವಾಜ್ಞೆ ಮೂಲಕ ವಿವಾದಿತ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿತ್ತು ಎಂದು ಪೃಥ್ವಿ ರೆಡ್ಡಿ ಆರೋಪಿಸಿದರು.
ಕೃಷಿ ಕಾಯ್ದೆ ವಿರೋಧಿ ಹೋರಾಟದಲ್ಲಿ 700 ರೈತರ ಸಾವು:
"ಕೊರೊನಾವೈರಸ್ ರೋಗದ ಆತಂಕದ ನಡುವೆಯೂ ರೈತರು ಬಹಳ ಮುನ್ನೆಚ್ಚರಿಕೆ ವಹಿಸಿದರು. ಅನೇಕ ಸವಾಲುಗಳ ಮಧ್ಯೆ ರೈತರು ಕೃಷಿ ಕಾಯ್ದೆಗಳ ವಿರುದ್ಧ ತಮ್ಮ ಹೋರಾಟವನ್ನು ಮುಂದುವರಿಸಿದರು. ಈ ವೇಳೆ 700ಕ್ಕೂ ಹೆಚ್ಚು ಅಮಾಯಕ ರೈತರು ಮೃತಪಟ್ಟಿದ್ದಾರೆ. ಇಷ್ಟೆಲ್ಲ ಆದರೂ ಸುಮ್ಮನಿದ್ದ ಪ್ರಧಾನಿ ಮೋದಿಯವರು ಈಗ ಐದು ರಾಜ್ಯಗಳ ಚುನಾವಣೆ ಹಿನ್ನೆಲೆ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದ್ದಾರೆ," ಎಂದು ಪೃಥ್ವಿ ರೆಡ್ಡಿ ದೂಷಿಸಿದರು.
ಪ್ರಧಾನಿ ಮೋದಿ ಸರ್ಕಾರ ನಂಬಿಕೆಗೆ ಯೋಗ್ಯವಲ್ಲ:
"ಕೇವಲ ಚುನಾವಣೆಗಾಗಿ ರೈತರ ಪರ ನಿಲುವು ತೆಗೆದುಕೊಳ್ಳುವ ಸರ್ಕಾರವು ನಂಬಿಕೆಗೆ ಯೋಗ್ಯವಲ್ಲ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಆಮ್ ಆದ್ಮಿ ಪಕ್ಷದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ರೈತರಿಗೆ ಬೆಂಬಲವಾಗಿದ್ದೆವು. ಅನ್ನದಾತರ ಗೆಲುವು ನಮ್ಮೆಲ್ಲರಿಗೂ ಸಂತಸ ತಂದಿದೆ," ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.
ಕೃಷಿ ಕಾಯ್ದೆ ವಾಪಸ್ ಬಗ್ಗೆ ಪ್ರಧಾನಿ ಹೇಳಿದ್ದೇನು?:
ಕೇಂದ್ರ ಸರ್ಕಾರದಿಂದ ಜಾರಿಗೆ ತರಲಾಗಿರುವ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ಮೋದಿ ಘೋಷಿಸಿದರು. ಶುಕ್ರವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, "ಎಲ್ಲಾ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ನಮ್ಮ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಅದರಲ್ಲೂ ವಿಶೇಷವಾಗಿ ಸಣ್ಣ ರೈತರ ಕಲ್ಯಾಣಕ್ಕಾಗಿ , ದೇಶದ ಹಿತದೃಷ್ಟಿಯಿಂದ, ಹಳ್ಳಿಯ ಬಡವರ ಉಜ್ವಲ ಭವಿಷ್ಯಕ್ಕಾಗಿ, ಸಂಪೂರ್ಣ ಪ್ರಾಮಾಣಿಕತೆಯಿಂದ ಒಳ್ಳೆಯ ಉದ್ದೇಶದಿಂದ ಈ ಕಾನೂನನ್ನು ತಂದಿದ್ದೆವು. ಆದರೆ ಅಂತಹ ಪವಿತ್ರವಾದ, ಸಂಪೂರ್ಣ ಶುದ್ಧವಾದ ರೈತರ ಅನುಕೂಲಕ್ಕಾಗಿ ನಾವು ಪ್ರಯತ್ನಿಸಿದರೂ ಅದನ್ನು ಕೆಲವು ರೈತರಿಗೆ ವಿವರಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ನಾವು ಎಲ್ಲಾ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ," ಎಂದು ಹೇಳಿದ್ದಾರೆ.
ವಿವಾದಿತ ಕೃಷಿ ಕಾಯ್ದೆಗಳು ಯಾವುವು?
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳು ರೈತರ ವಿರೋಧಕ್ಕೆ ಕಾರಣವಾಗಿದ್ದವು. ಇದೇ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಇದೀಗ ಸಮ್ಮತಿ ಸೂಚಿಸಿದೆ.