ರೈತರ ಸತ್ಯಾಗ್ರಹಕ್ಕೆ ಸುಪ್ರೀಂಕೋರ್ಟ್ ಆಕ್ಷೇಪ
ನವದೆಹಲಿ, ಅಕ್ಟೋಬರ್ 1: ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ವಿವಾದಿತ ಮೂರು ಕೃಷಿ ಕಾಯ್ದೆಗಳ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಪ್ರಶ್ನಿಸಿರುವ ನಡುವೆ ಕಾಯ್ದೆ ವಿರುದ್ಧ ಪ್ರತಿಭಟನೆ ಮುಂದುವರಿಸಿರುವ ರೈತರ ನಡೆಗೆ ಸರ್ವೋಚ್ಚ ನ್ಯಾಯಾಲಯಲು ಆಕ್ಷೇಪ ವ್ಯಕ್ತಪಡಿಸಿದೆ.
ದೆಹಲಿಯ ಜಂತರ್ಮಂತರ್ನಲ್ಲಿ ಸತ್ಯಾಗ್ರಹ ನಡೆಸಲು ಅನುಮತಿಸುವಂತೆ ಕೋರಿ ಕಿಸಾನ್ ಮಹಾಪಂಚಾಯತ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇತೃತ್ವದ ಪೀಠವು ಶುಕ್ರವಾರ ವಿಚಾರಣೆ ನಡೆಸಿತು.
ಕೃಷಿ ಕಾಯ್ದೆಗಳ ಸಿಂಧುತ್ವವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿರುವಾಗ ಪ್ರತಿಭಟನೆ ನಡೆಸುವುದನ್ನು ಬಿಡಬೇಕು. ರೈತರು ತಮ್ಮ ಹೋರಾಟವನ್ನು ಮುಂದುವರೆಸುವ ಬದಲಿಗೆ ವ್ಯವಸ್ಥೆ ಹಾಗೂ ನ್ಯಾಯಾಲಯಗಳ ಮೇಲೆ ಹೆಚ್ಚಿನ ವಿಶ್ವಾಸವನ್ನು ಹೊಂದಿರಬೇಕು ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧವೇ ಕಳೆದ ಸೆಪ್ಟೆಂಬರ್ 27ರಂದು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಹಾಗೂ 40 ಬೆಂಬಲಿತ ಸಂಘಟನೆಗಳು ಭಾರತ್ ಬಂದ್ ನಡೆಸಲು ಕರೆ ನೀಡಿದ್ದವು.

ನ್ಯಾಯಾಲಯದ ಮೇಲೆ ವಿಶ್ವಾಸವಿಡಿ ಎಂದು ಸೂಚನೆ
"ಕೃಷಿ ಕಾಯ್ದೆಗಳ್ನು ಪ್ರಶ್ನಿಸಿ ನ್ಯಾಯಾಲಯದ ಮೇಟ್ಟಿಲೇರಿದ ಮೇಲೆ ಪ್ರತಿಭಟನೆ ನಡೆಸುವ ಅಗತ್ಯವೇನಿದೆ. ನ್ಯಾಯಾಲಯಗಳ ಮೇಲೆ ನಿಮಗೆ ನಂಬಿಕೆ ಇದ್ದರೆ ಪ್ರತಿಭಟನೆ ಮಾಡುವ ಬದಲು ತುರ್ತಾಗಿ ಅವುಗಳ ವಿಚಾರಣೆಗೆ ಮುತುವರ್ಜಿ ವಹಿಸಿ" ಎಂದು ಸುಪ್ರೀಂಕೋರ್ಟ್ ಪೀಠ ಹೇಳಿದೆ. ಪ್ರತಿಭಟನೆಯಿಂದ ಸಾಮಾನ್ಯ ಜನರಿಗೆ ತೀವ್ರ ಅಡಚಣೆ ಆಗುತ್ತಿರುವುದರ ಬಗ್ಗೆಯೂ ನ್ಯಾಯಾಲಯ ವಿಚಾರಣೆಯ ವೇಳೆ ಆಕ್ಷೇಪಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ಉಸಿರುಗಟ್ಟುವ ವಾತಾವರಣ
"ದೆಹಲಿ ನಗರವನ್ನು ಉಸಿರುಗಟ್ಟಿಸಿದ್ದೀರಿ. ಈಗ ನಗರದ ಒಳಗೆ ಬಂದು ಪ್ರತಿಭಟನೆ ನಡೆಸಲು ಬಯಸುತ್ತಿದ್ದೀರಿ. ಇದು ಇಲ್ಲಿಗೆ ನಿಲ್ಲಬೇಕು. ನೀವು ಹೆದ್ದಾರಿಗಳು ಮತ್ತು ರಸ್ತೆಗಳನ್ನು ನಿರ್ಬಂಧಿಸಿದ್ದೀರಿ. ಪ್ರತಿಭಟನಾಕಾರರು ಆಸ್ತಿ-ಪಾಸ್ತಿಗಳನ್ನು ನಾಶ ಮಾಡುತ್ತಿದ್ದಾರೆ. ಅಲ್ಲದೇ ಭದ್ರತಾ ಸಿಬ್ಬಂದಿಗೆ ಬೆದರಿಕೆ ಹಾಕುತ್ತಿದ್ದಾರೆ. ಇದು ಮಾಧ್ಯಮಗಳಲ್ಲಿ ಕಾಣಿಸುತ್ತಿದೆ" ಎಂದು ಸುಪ್ರೀಂಕೋರ್ಟ್ ಖಡಕ್ ಆಗಿದೆ ಹೇಳಿದೆ.

ಅಫಿಡವಿಟ್ ಸಲ್ಲಿಸುವಂತೆ ವಕೀಲರಿಗೆ ಸೂಚನೆ
"ದೆಹಲಿಯ ಹೆದ್ದಾರಿಗಳನ್ನು ನಿರ್ಬಂಧಿಸಿರುವುದು ಪೊಲೀಸ್ ಸಿಬ್ಬಂದಿಯೇ ಹೊರತು ರೈತರಲ್ಲ. ಅರ್ಜಿದಾರ ಸಂಸ್ಥೆಯು ಪ್ರತಿಭಟನೆಯ ಭಾಗವಾಗಿಲ್ಲ" ಎಂದು ಅರ್ಜಿದಾರರ ಪರ ವಕೀಲ ಅಜಯ್ ಚೌಧರಿ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ತಾವು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿಲ್ಲ ಎಂಬುದಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸುವಂತೆ ಕೋರ್ಟ್ ಆದೇಶ ಮಾಡಿತು. ಅರ್ಜಿಯ ಪ್ರತಿಯನ್ನು ಅಟಾರ್ನಿ ಜನರಲ್ ಅವರಿಗೆ ಕಳುಹಿಸಿಕೊಡುವಂತೆ ಅರ್ಜಿದಾರರಿಗೆ ನ್ಯಾಯಾಲಯ ಹೇಳಿದ್ದು, ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿದೆ. ಕೃಷಿ ಕಾಯ್ದೆಗಳ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ಹಲವು ಸಂಸ್ಥೆಗಳು, ರೈತ ಸಂಘಟನೆಗಳು ಮತ್ತು ವ್ಯಕ್ತಿಗಳಿಂದ ಅರ್ಜಿ ಸಲ್ಲಿಸಲಾಗಿದೆ.

ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ಮುಂದುವರಿದ ಪ್ರತಿಭಟನೆ
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 2020ರ ನವೆಂಬರ್ 26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಕೂಗು ಎತ್ತಿದ್ದಾರೆ.












Click it and Unblock the Notifications